ದೆಹಲಿಯಲ್ಲಿ ಕಲ್ಲು ಎಸೆದವರ ವಿರುದ್ಧ ಪೊಲೀಸ್ ಕೇಸ್!
ನವದೆಹಲಿ, ನವೆಂಬರ್.19: ದೆಹಲಿಯಲ್ಲಿ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ ಆಡಳಿತ ಮಂಡಳಿ ವಿರುದ್ಧದ ವಿದ್ಯಾರ್ಥಿಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ನ್ಯಾಯಕ್ಕಾಗಿ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಆದರೆ, ಕೆಲವರು ಇದನ್ನೇ ತಮ್ಮ ಅನುಕೂಲಕ್ಕಾಗಿ ಬಳಸಿಕೊಂಡಿದ್ದಾರಂತೆ.
ಹೌದು, ಹಾಸ್ಟೆಲ್ ಶುಲ್ಕ ಏರಿಕೆ ವಿರೋಧಿಸಿ ಜೆಎನ್ ಯು ವಿದ್ಯಾರ್ಥಿಗಳು ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನವೆಂಬರ್.18ರಂದು ಕೇಂದ್ರ ಸರ್ಕಾರದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಈ ವೇಳೆ ಪಾರ್ಲಿಮೆಂಟ್ ನತ್ತ ಪ್ರತಿಭಟನಾ ಮೆರವಣಿಗೆ ಹೊರಟಿದ್ದರು. ಇದಕ್ಕೆ ಪೊಲೀಸರು ಬ್ರೇಕ್ ಹಾಕಿದ್ದರು.
ಕ್ಯಾಂಪಸ್ ಒಳಗೆ ಸ್ಟೂಡೆಂಟ್ಸ್, ಹೊರಗೆ ಪೊಲೀಸ್: ಇದು ಖಾಕಿ ದಿಗ್ಬಂಧನ
ದೆಹಲಿಯಲ್ಲಿ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪ್ರತಿಭಟನಾನಿರತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಇಷ್ಟೆಲ್ಲ ಬೆಳವಣಿಗೆಳ ಮಧ್ಯೆ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಿದ್ದಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಕೆಲವರಲ್ಲಿ ವಿದ್ಯಾರ್ಥಿಗಳೇ ಆಗರಿಲಿಲ್ಲ ಎಂದು ತಿಳಿದು ಬಂದಿದೆ.
ಕಲ್ಲು ಎಸೆದ ದುಷ್ಟರ ಮೇಲೆ ಕೇಸ್
ಹಾಸ್ಟೆಲ್ ಶುಲ್ಕ ಇಳಿಕೆ ಮಾಡುವಂತೆ ಆಗ್ರಹಿಸಿ ಜೆಎನ್ ಯು ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನೆ ನಡೆಸಿದ್ದರು. ಕೇಂದ್ರ ಸರ್ಕಾರಕ್ಕೆ ತಮ್ಮ ಮನವಿ ಸಲ್ಲಿಸಲು ಮುಂದಾಗಿದ್ದರು. ಈ ನಡುವೆ ಕೆಲ ಅಪರಿಚಿತ ವ್ಯಕ್ತಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. ವಿದ್ಯಾರ್ಥಿಗಳಲ್ಲದೇ ಪ್ರತಿಭಟನೆಯಲ್ಲಿ ಕಾಣಿಸಿಕೊಂಡ ಕೆಲವರ ಮೇಲೆ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ತೀವ್ರ ಸ್ವರೂಪಕ್ಕೆ ತಿರುಗಿದ ಪ್ರತಿಭಟನೆಗೆ ನಂತರದಲ್ಲಿ ಹಿಂಸಾರೂಪಕ್ಕೆ ತಿರುಗಿತ್ತು. ಘರ್ಷಣೆಯಲ್ಲಿ 30ಕ್ಕೂ ಹೆಚ್ಚು ಪೊಲೀಸರು ಹಾಗೂ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆಗೆ ಉದ್ರಿಕ್ತರ ಗುಂಪು ಕಾರಣ ಎಂಬ ಅನುಮಾನದ ಮೇಲೆ ಕೆಲವರ ವಿರುದ್ಧ ಭಾರತೀಯ ದಂಡ ಸಂಹಿತೆ 186 ಹಾಗೂ 353ರ ಅಡಿ ದೆಹಲಿಯ ಕೃಷ್ಣಘರ್ ಠಾಣೆಯಲ್ಲಿ ಪೊಲೀಸರು ಕೆಲವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.