ದೆಹಲಿ: ರೋಹಿಣಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ- ರೋಗಿ ಸಾವು
ದೆಹಲಿ ಜೂನ್ 11: ದೆಹಲಿಯ ರೋಹಿಣಿ ಪ್ರದೇಶದ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು 64 ವರ್ಷದ ರೋಗಿಯು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಕಾಣಿಸಕೊಂಡ ಬೆಂಕಿಯಿಂದಾಗಿ ಆಮ್ಲಜನಕ ವ್ಯವಸ್ಥೆಗೆ ಅಡ್ಡಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೂತ್ ಖುರ್ದ್ನ ಬ್ರಹ್ಮ ಶಕ್ತಿ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ರೋಹಿಣಿ) ಪ್ರಣವ್ ತಯಾಲ್ ತಿಳಿಸಿದ್ದಾರೆ.
ಬೆಂಕಿಯನ್ನು ನಂದಿಸಲು ಒಟ್ಟು ಒಂಬತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್ಎಸ್) ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ. ಒಬ್ಬ ರೋಗಿಯನ್ನು ಹೊರತುಪಡಿಸಿ ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಲಾಗಿದೆ, ಅವರನ್ನು ಐಸಿಯುಗೆ ದಾಖಲಿಸಲಾಗಿದೆ ಮತ್ತು ವೆಂಟಿಲೇಟರ್ ಬೆಂಬಲದಲ್ಲಿರಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.
ಕಿಡ್ನಿ ರೋಗಿ ಹಾಗೂ ಪ್ರೇಮ್ನಗರದ ನಿವಾಸಿ ಹೋಳಿ ಅವರನ್ನು ಹೊರತೆಗೆಯಲಾಯಿತು ಆದರೆ ವಿದ್ಯುತ್ ಮತ್ತು ಆಮ್ಲಜನಕದ ಬೆಂಬಲದಲ್ಲಿ ಅಡಚಣೆಯಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಡಿಸಿಪಿ ತಯಾಲ್ ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 285 (ಬೆಂಕಿ ಅಥವಾ ದಹನಕಾರಿ ವಸ್ತುಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ನಡವಳಿಕೆ), 287 (ಯಂತ್ರೋಪಕರಣಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವರ್ತನೆ), ಮತ್ತು 304A (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ವಿಹಾರ್ ಪೊಲೀಸ್ ಠಾಣೆ ಡಿಸಿಪಿ ತಿಳಿಸಿದ್ದಾರೆ.
ಮೇ 27 ರಂದು ದಕ್ಷಿಣ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮತ್ತು ನಗರದ ಪೂರ್ವ ಭಾಗದಲ್ಲಿರುವ ಮಕ್ಕರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬೆಂಕಿಯ ಇಂಥಹದ್ದೇ ಘಟನೆವರದಿಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.