ದೆಹಲಿಯಲ್ಲಿ ಪಟಾಕಿಗಳಿಗೆ ನಿಷೇಧ: ಅರವಿಂದ್ ಕೇಜ್ರಿವಾಲ್
ನವದೆಹಲಿ, ನವೆಂಬರ್ 05: ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಾರಿ ಪಟಾಕಿಗಳನ್ನು ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಹಬ್ಬದ ಸಂದರ್ಭದಲ್ಲಿಯೇ ಕೊರೊನಾ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ನಡೆದ ದುರ್ಗಾ ಪೂಜೆಯ ಸಂದರ್ಭದಲ್ಲಿ ಕೊರೊನಾ ಸೋಂಕು ಹೆಚ್ಚಾಗಿತ್ತು. ಹಾಗೆಯೇ ಪಟಾಕಿ ಉರಿಸುವುದರಿಂದ ವಾಯುಮಾಲಿನ್ಯ ಮತ್ತಷ್ಟು ಹೆಚ್ಚಾಗಿ ಉಸಿರಾಟದ ಸಮಸ್ಯೆಗಳು ಉಲ್ಬಣಿಸಬಹುದು ಎಂದು ಹೇಳಿದ್ದಾರೆ.
ಹೊಗೆ ಹೊರಸೂಸುವ ಪಟಾಕಿಗಳ ನಿಷೇಧಕ್ಕೆ ಕರ್ನಾಟಕ ಸರ್ಕಾರ ಚಿಂತನೆ
ಈಗಾಗಲೇ ದೆಹಲಿಯ ವಾಯುಗುಣಮಟ್ಟ ಕುಸಿಯುತ್ತಿದೆ, ದೆಹಲಿಯ ಸುತ್ತಮುತ್ತಲ ರಾಜ್ಯಗಳು ಕೂಡ ಪಟಾಕಿಯನ್ನು ನಿಷೇಧಿಸಿವೆ, ಪಶ್ಚಿಮ ಬಂಗಾಳದಲ್ಲೂ ಕಾಳಿ ಪೂಜಾ ಹಾಗೂ ದೀಪಾವಳಿಯಲ್ಲಿ ಪಟಾಕಿ ಹಚ್ಚಬಾರದು ಎಂದು ಹೇಳಿದೆ.ಸಿಕ್ಕಿಂ, ರಾಜಸ್ಥಾನ ಒಡಿಶಾ ಕೂಡ ಪಟಾಕಿಯನ್ನು ನಿಷೇಧಿಸಿದೆ, ಇನ್ನು ಕರ್ನಾಟಕದಲ್ಲಿ ಕೂಡ ಹೊಗೆ ಸೂಸುವ ಪಟಾಕಿಗಳನ್ನು ನಿಷೇಧಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ.
ಕೋವಿಡ್ ನಿಯಂತ್ರಿಸುವ ಬಗ್ಗೆ ತಜ್ಞರ ಜೊತೆಗೆ ಇಂದು ಸಭೆ ನಡೆಸಲಾಗಿದೆ. ಈ ತಿಂಗಳಲ್ಲಿ ದೀಪಾವಳಿ ಹಬ್ಬ ಇದೆ. ಮುಂದೆ ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಇದೆ. ಚಳಿಗಾಲ ಸಹ ಇದೆ. ರಾಜ್ಯದಲ್ಲಿ ಹೆಚ್ಚು ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಕರ್ನಾಟಕದಲ್ಲಿ ಗುಣಮುಖ ಆಗಿರುವವರ ಸಂಖ್ಯೆ ಹೆಚ್ಚಾಗಿದೆ. ಚಳಿಗಾಲ ಹಬ್ಬದ ಹಿನ್ನೆಲೆಯಲ್ಲಿ ಮುಂದೆ ಸ್ವಲ್ಪ ಆತಂಕ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಚಳಿಗಾಲ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಿಸುವ ಸಂಬಂಧ ತಾಂತ್ರಿಕ ಸಮಿತಿ ಹಾಗೂ ತಜ್ಞರ ಜೊತೆಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇಂದು ವಿಧಾನಸೌಧದಲ್ಲಿ ಸಭೆ ನಡೆಸಿದರು.
ಸಭೆಯ ಬಳಿಕ ಮಾತನಾಡಿದ ಅವರು, ಉಪಚುನಾವಣೆ ನಡೆದ ಎರಡು ಕ್ಷೇತ್ರದಲ್ಲಿ ಹೆಚ್ಚು ಪರೀಕ್ಷೆ ನಡೆಸಬೇಕು ಅಂತ ತಜ್ಞರ ಸಮಿತಿ ವರದಿ ನೀಡಿದೆ. ಅದೇ ರೀತಿ ಗ್ರಾಮ ಪಂಚಾಯತಿ ಚುನಾವಣೆ ಸಹ ಮುಂದೂಡಲು ವರದಿ ನೀಡಿದ್ದಾರೆ ಎಂದು ತಿಳಿಸಿದರು.
ಈ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಲು ಚಿಂತನೆ ಮಾಡಲಾಗಿದೆ. ಸಿಎಂ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ಸರ್ಕಾರದ ನಿರ್ಧಾರ ಘೋಷಣೆ ಮಾಡಲಾಗುವುದು.
ಈ ಬಾರಿ ಸರಳ ದೀಪಾವಳಿ ಆಚರಿಸಬೇಕಿದೆ. ದೀಪ ಹಚ್ಚುವ ಮೂಲಕ ಹಬ್ಬ ಆಚರಣೆ ಮಾಡಬೇಕು. ಪಟಾಕಿಯಿಂದ ಶ್ವಾಸಕೋಶದ ಸಮಸ್ಯೆ ಸೃಷ್ಟಿಯಾಗುತ್ತದೆ. ಈ ಕಾರಣದಿಂದ ತಜ್ಞರು ಪಟಾಕಿ ಬೇಡ ಎಂದಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು.