ದೆಹಲಿಯಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ವೇಳೆ ಫೈರಿಂಗ್: ವಿದ್ಯಾರ್ಥಿಗೆ ಗಾಯ
ನವದೆಹಲಿ, ಜನವರಿ 30: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ.
ಇಂದು ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಪೌರತ್ವ ಕಾಯ್ದೆಯನ್ನು ವಿರೋಧಿಸಿ ಜಾಮಿಯಾ ಯುನಿವರ್ಸಿಟಿಯಿಂದ ರಾಜ್ಘಾಟ್ನಲ್ಲಿ ಇರುವ ಮಹಾತ್ಮ ಗಾಂಧಿ ಸ್ಮಾರಕದವರೆಗೂ ಮೆರವಣಿಗೆ ಹಮ್ಮಿಕೊಂಡಿದ್ದರು. ಈ ಸಮಯದಲ್ಲಿ ಅಲ್ಲಿ ಕಾಣಿಸಿಕೊಂಡ ಅಪರಿಚಿತ ವ್ಯಕ್ತಿಯೋರ್ವ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ಮಾಡಿದ್ದಾನೆ.
ಗುರುವಾರ ವಿದ್ಯಾರ್ಥಿಗಳು ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಇದೇ ವೇಳೆ ಪೊಲೀಸರಿಗೆ ಜಿಂದಾಬಾದ್ ಎಂದು ಕೂಗುತ್ತಾ ಬರುತ್ತಿದ್ದ ವ್ಯಕ್ತಿಯೊಬ್ಬ, ಜಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಗನ್ ತೋರಿಸಿ ಬೆದರಿಕೆ ಹಾಕಿದ್ದಷ್ಟೇ ಅಲ್ಲದೆ ವಿದ್ಯಾರ್ಥಿಯೊಬ್ಬನ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ.
ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಘಟನೆ ನಡೆಯುತ್ತಿದ್ದಂತೆ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.
ಆದರೆ, ಆತ ಯಾರು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಲು ಏನು ಕಾರಣ ಎಂಬುದು ಪೊಲೀಸರ ವಿಚಾರಣೆ ನಂತರ ಬೆಳಕಿಗೆ ಬರಲಿದೆ.
ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಿದ್ದ ಬಂದೂಕುಧಾರಿ ವ್ಯಕ್ತಿ ನೋಡ ನೋಡುತ್ತಿದ್ದಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ್ದಾನೆ. ಪರಿಣಾಮ ಓರ್ವ ವಿದ್ಯಾರ್ಥಿ ಕಾಲಿಗೆ ಗಂಭೀರ ಗಾಯವಾಗಿದೆ ಎನ್ನಲಾಗುತ್ತಿದೆ.
ಆದರೆ ಆತ 'ದೆಹಲಿ ಪೊಲೀಸ್ ಜಿಂದಾಬಾದ್' ಎಂದು ಕೂಗುತ್ತಿದ್ದ ಕಾರಣ ಆತ ಸಿಎಎ ಪರವಿದ್ದಿರಬಹುದು. ಹೀಗಾಗಿಯೇ ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿದೆ.
ಕಪ್ಪು ಜಾಕೆಟ್ ಧರಿಸಿದ್ದ ದಾಳಿಕೋರ ಪ್ರತಿಭಟನಾಕಾರರ ಎದುರು ಬಂದೂಕು ತೋರಿಸುತ್ತಾ 'ಇಲ್ಲಿದೆ ನಿಮ್ಮ ಸ್ವಾತಂತ್ರ್ಯ' ಎಂದು ಕೂಗುತ್ತಿದ್ದನು. ಪೊಲೀಸರು ಆತನ ಸಮೀಪದಲ್ಲೇ ಇದ್ದರೂ ಆತನನ್ನು ತಡೆಯಲು ಮುಂದೆ ಬಂದಿಲ್ಲ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.