ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ: ದೊಡ್ಡಬಳ್ಳಾಪುರದಲ್ಲಿ ಜನೋತ್ಸವ
ನವದೆಹಲಿ, ಜು.26: ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಸಮೀಪಿಸುತ್ತಿದ್ದು, ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದಕ್ಕಾಗಿ ದೊಡ್ಡಬಳ್ಳಾಪುರದಲ್ಲಿ ಜುಲೈ 28 ಕ್ಕೆ 'ಜನೋತ್ಸವ' ಹಮ್ಮಿಕೊಳ್ಳಲಾಗಿದೆ.
ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಬಳಿಕ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ನೇಮಿಸಲಾಯಿತು. 2021ರ ಜುಲೈ 28ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಈಗ ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಸಂದರ್ಭದಲ್ಲಿ ಸರ್ಕಾರ ದೊಡ್ಡ ಮಟ್ಟದಲ್ಲಿ ಸಮಾವೇಶ ಮಾಡುವ ಮೂಲಕ ಸರ್ಕಾರದೆಡೆಗೆ ಜನರ ಗಮನ ಸೆಳೆಯಲು ಪ್ರಯತ್ನ ನಡೆಸಿದೆ. ಬಿಜೆಪಿ ಕೇಂದ್ರ ನಾಯಕರೂ ಸಹ ಪಾಲ್ಗೊಳ್ಳಲಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಜುಲೈ 28 ಕ್ಕೆ ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ಹಾಗೂ ಬಿಜೆಪಿಯ ಮೂರು ವರ್ಷಗಳ ಆಡಳಿತ ಪೂರೈಸಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಒಂದು ವರ್ಷದ ಸಾಧನಾ ಸಮಾವೇಶ ಜನೋತ್ಸವ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ," ಎಂದು ಹೇಳಿದರು.

ಕರಾವಳಿ ನಿಯಂತ್ರಣಾ ವಲಯ
ರಾಜ್ಯದ ಕರಾವಳಿ ಪ್ರದೇಶಗಳಿಗೂ ಕರಾವಳಿ ನಿಯಂತ್ರಣಾ ವಲಯ(ಸಿ ಆರ್ ಝೆಡ್) ವಿಸ್ತರಣೆ ಪಡೆಯಲು ಚೆನ್ನೈನ ಪ್ರಾದೇಶಿಕ ಕಚೇರಿಯಿಂದ ಅನುಮತಿ ದೊರೆತಿದ್ದು, ಕರಾವಳಿ ಪ್ರದೇಶ ಅಭಿವೃದ್ಧಿಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಗೋವಾ ಹಾಗೂ ಕೇರಳ ರಾಜ್ಯಗಳಲ್ಲಿ ಕರಾವಳಿ ನಿಯಂತ್ರಣಾ ವಲಯ (ಸಿಆರ್ಝೆಡ್) ವಿಸ್ತರಣೆಗೆ ಅನುಮತಿ ನೀಡಿರುವುದರಿಂದ ಹೋಟೆಲ್ ಉದ್ಯಮ, ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲವಾಗಿದೆ. ಇದೇ ರೀತಿ ರಾಜ್ಯದ ಕರಾವಳಿ ಪ್ರದೇಶಗಳಿಗೂ ಸಿ ಆರ್ ಝೆಡ್ ವಿಸ್ತರಣೆ ಪಡೆಯಲು ಗಂಭೀರ ಪ್ರಯತ್ನಗಳನ್ನು ಮಾಡಲಾಗಿದ್ದು, ಚೆನ್ನೈನ ಪ್ರಾದೇಶಿಕ ಕಚೇರಿಯಿಂದ ಅನುಮತಿ ದೊರೆತಿದೆ. ಇದರಿಂದ ಕರ್ನಾಟಕದ 330 ಕಿ.ಮೀ. ಉದ್ದದ ಕರಾವಳಿ ಪ್ರದೇಶದ ಅಭಿವೃದ್ಧಿಯ ಜೊತೆ, ಆರ್ಥಿಕತೆ, ಪ್ರವಾಸೋದ್ಯ, ಮೀನುಗಾರಿಕೆ ಸೇರಿದಂತೆ ಕರಾವಳಿ ಭಾಗದ ಚಟುವಟಿಕೆಗಳು ಅಭಿವೃದ್ಧಿಗೊಳ್ಳಲಿದೆ . ರಾಜ್ಯದ ಯೋಜನೆಗಳಿಗೆ ಶೀಘ್ರಗತಿಯಲ್ಲಿ ಮಂಜೂರಾತಿ ಪಡೆಯಲು ಕೇಂದ್ರ ಸಚಿವರೊಂದಿಗೆ ಖುದ್ದು ನಾನು ಭೇಟಿಯಾಗುತ್ತಿದ್ದೇನೆ ಎಂದರು.

5 ರಿಂಗ್ ರಸ್ತೆಗಳ ಬಗ್ಗೆ ಚರ್ಚಿಸಲಾಗಿದೆ
ಕೇಂದ್ರ ಸಾರಿಗೆ ಸಚಿವರ ಜೊತೆ ಚರ್ಚಿಸಲಾಗಿದ್ದು, 5 ರಿಂಗ್ ರಸ್ತೆಗಳ ಬಗ್ಗೆ ಚರ್ಚಿಸಲಾಗಿದೆ. ಜಿಎಸ್ಟಿ ಮನ್ನಾ ಸೇರಿದಂತೆ ಕೆಲವು ರಿಯಾಯಿತಿಗಳನ್ನು ಕೇಂದ್ರ ಸರ್ಕಾರ ನೀಡಿದ್ದು, ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ರಾಯಚೂರು, ಕೊಪ್ಪಳ, ಗುಲ್ಬರ್ಗಾ, ಬೆಳಗಾವಿ, ಗದಗ , ಈ ಐದು ಪ್ರದೇಶಗಳಲ್ಲಿ ರಿಂಗ್ ರಸ್ತೆಗಳನ್ನು ನಿರ್ಮಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ರೈಲ್ವೆ ಮೇಲ್ಸೆತುವೆಗಳನ್ನು 24 ಪ್ರಸ್ತಾವನೆಗಳಿಗೆ ಮಂಜೂರಾತಿ ನೀಡುವ ಭರವಸೆಯನ್ನೂ ನೀಡಿದ್ದಾರೆ ಎಂದರು.

ರಾಜ್ಯದಲ್ಲಿ ಎರಡು ಟೆಕ್ಸ್ಟೈಲ್ ಪಾರ್ಕ್
ಕೇಂದ್ರ ಜವಳಿ ಹಾಗೂ ವಾಣಿಜ್ಯ ಕೈಗಾರಿಕಾ ಸಚಿವರನ್ನು ಭೇಟಿಯಾಗಿ, ರಾಜ್ಯದಲ್ಲಿ ಎರಡು ಟೆಕ್ಸ್ಟೈಲ್ ಪಾರ್ಕ್ ಸ್ಥಾಪನೆ ಬಗ್ಗೆ ಚರ್ಚಿಸಲಾಗಿದೆ. ಬಿಜಾಪುರ ಹಾಗೂ ಕಲಬುರ್ಗಿಯಲ್ಲಿ ಟೆಕ್ಸ್ಟೈಲ್ ಪಾರ್ಕ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ತಾತ್ವಿಕ ಒಪ್ಪಿಗೆಯನ್ನು ನೀಡಿದ್ದಾರೆ. ಇದರಿಂದ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಅನುಕೂಲವಾಗುತ್ತದೆ ಎಂದರು.

3 ಮರೀನಾಗಳಲ್ಲಿ ಪ್ರವಾಸೋದ್ಯಮ
ಕೇಂದ್ರ ಬಂದರು ಮತ್ತು ಜಲಸಾರಿಗೆ ಸಚಿವರನ್ನು ಭೇಟಿಯಾಗಿ ರಾಜ್ಯದ ಹಲವಾರು ಬಾಕಿ ಇದ್ದ ಪ್ರಸ್ತಾವನೆಗಳ ಮಂಜೂರಾತಿ ಬಗ್ಗೆ ಚರ್ಚಿಸಲಾಗಿದೆ. ಸುಮಾರು 1800 ಕೋಟಿ ರೂ.ಗಳ ಒಟ್ಟು 27 ಯೋಜನೆಗಳನ್ನು ಸಾಗರಮಾಲಾ ಯೋಜನೆಯಡಿ ಪ್ರಸ್ತಾವನೆಗಳ ಪೈಕಿ 10 ಯೋಜನೆಗಳಿಗೆ ಈಗಾಗಲೇ ಮಂಜೂರಾತಿಯನ್ನು ನೀಡಲಾಗಿದೆ. ಇನ್ನು 10 ಯೋಜನೆಗಳಿಗೆ ಸ್ಪಷ್ಟೀಕರಣ ಕೇಳಲಾಗಿದ್ದು, ಅದನ್ನು ನೀಡಲಾಗಿದೆ. ಕೆಲವು ಪ್ರಸ್ತಾವನೆಗಳನ್ನು ಬದಲಾವಣೆ ಮಾಡಿ ಕಳುಹಿಸಲು ಸೂಚಿಸಿದ್ದಾರೆ. ಇದರಲ್ಲಿ ಪ್ರಮುಖವಾಗಿ 250 ಕೋಟಿ ರೂ.ಗಳ ಮಜಾಲಿ ಮೀನುಗಾರಿಕೆ ಬಂದರು, ಮ್ಯಾರಿಟೈಮ್ ಮೀನುಗಾರಿಕಾ ತರಬೇತಿ ಸಂಸ್ಥೆಯ ಉದ್ದೇಶ ಮತ್ತು ಹೆಸರು ಬದಲಾಯಿಸುವುದಾಗಿ ತಿಳಿಸಿದ್ದಾರೆ. ಕಾಳಿ ವಾಟರ್ ವೇ ಡಿಪಿಆರ್ ಕಳುಹಿಸಿದ ಕೂಡಲೇ ಮಂಜೂರಾತಿ ಆಗಲಿದೆ. ಅಂಗರಘಟ್ಟದಿಂದ ಮಣಿಪಾಲ ವಾಟರ್ ವೇ ಯೋಜನೆಯ ಸಮೀಕ್ಷೆ ಹಾಗೂ ಡಿಪಿಆರ್ ಸಿದ್ಧವಾಗುತ್ತಿದ್ದು, ಇನ್ನೆರಡು ತಿಂಗಳಲ್ಲಿ ಪ್ರಸ್ತಾವನೆ ಮಂಜೂರಾತಿ ಮಾಡುವುದಾಗಿ ತಿಳಿಸಿದ್ದಾರೆ. ಬೈಂದೂರು, ಮಲ್ಪೆ ಹಾಗೂ ಮಂಗಳೂರು ಮರೀನಾಗಳಲ್ಲಿ ಪ್ರವಾಸೋದ್ಯಮ ಹಾಗೂ ವಾಣಿಜ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಕಾರ್ಯಸಾಧ್ಯತಾ ನಿಧಿಯನ್ನು ನೀಡಲಾಗುವುದು, ಪಿಪಿಪಿ ಮಾದರಿಯಲ್ಲಿ ಕೈಗೊಳ್ಳುವಂತೆ ಸೂಚಿಸಿದ್ದು, ಅದರಂತೆ 8-10 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಬಗ್ಗೆ ತಜ್ಞರಿದ್ದರೆ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.












Click it and Unblock the Notifications