ಐಸಿಯುದಲ್ಲಿ ಅರುಣ್ ಜೇಟ್ಲಿ: ಆಸ್ಪತ್ರೆಗೆ ಮೋದಿ, ಶಾ ಭೇಟಿ
ನವದೆಹಲಿ, ಆಗಸ್ಟ್ 9: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ಶುಕ್ರವಾರ ಬೆಳಿಗ್ಗೆ ದಾಖಲು ಮಾಡಲಾಗಿದೆ.
ಅವರನ್ನು ಆಸ್ಪತ್ರೆಯ ಕಾರ್ಡಿಯೋಥೊರಾಸಿಕ್ ಮತ್ತು ನ್ಯೂರೋಸೈನ್ಸ್ ಕೇಂದ್ರದಲ್ಲಿ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ 'ದಿ ಹಿಂದೂ' ವರದಿ ಮಾಡಿದೆ.
ರಾಜ್ಯಸಭೆ ಸದಸ್ಯರಾಗಿರುವ ಅರುಣ್ ಜೇಟ್ಲಿ, ನಿತ್ರಾಣ ಮತ್ತು ಆಯಾಸದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ದಾಖಲು ಮಾಡಲಾಗಿದೆ. ಅವರನ್ನು ಐಸಿಯುದಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

66 ವರ್ಷದ ಅರುಣ್ ಜೇಟ್ಲಿ ಅವರಿಗೆ ಎಂಡೋಕ್ರಿನೋಲಾಜಿಸ್ಟ್, ನೆಪ್ರೋಲಾಜಿಸ್ಟ್ ಮತ್ತು ಕಾರ್ಡಿಯಾಲಜಿಸ್ಟ್ಗಳ ತಂಡವು ಚಿಕಿತ್ಸೆ ನೀಡುತ್ತಿದೆ. ಆರೋಗ್ಯ ಸಚಿವ ಹರ್ಷವರ್ಧನ್ ಅವರು ಸಂಜೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರೂ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದರು.
ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಅರುಣ್ ಜೇಟ್ಲಿ ಅವರು ಕಳೆದ ವರ್ಷ ಮೂರು ತಿಂಗಳ ಕಾಲ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅನಾರೋಗ್ಯದ ಕಾರಣ ಅವರು ಮೋದಿ ನೇತೃತ್ವದ ಸರ್ಕಾರದ ಎರಡನೆಯ ಅವಧಿಯಲ್ಲಿ ಯಾವುದೇ ಸಚಿವ ಸ್ಥಾನದ ಜವಾಬ್ದಾರಿ ತೆಗೆದುಕೊಂಡಿರಲಿಲ್ಲ.












Click it and Unblock the Notifications