ದೆಹಲಿಯ ಜಹಾಂಗೀರ್ಪುರಿಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ನವದೆಹಲಿ, ಏಪ್ರಿಲ್ 18: ದೆಹಲಿಯ ಜಹಾಂಗೀರ್ಪುರಿಯಲ್ಲಿ ಸೋಮವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಎರಡು ಕೋಮಗಳ ನಡುವೆ ಕಲ್ಲುತೂರಾಟ ನಡೆದಿರುವ ಬಗ್ಗೆ ವರದಿಯಾಗಿದೆ. ಶನಿವಾರ ಹನುಮಾನ್ ಜಯಂತಿ ಯಾತ್ರೆ ವೇಳೆ ಕಲ್ಲು ತೂರಾಟ ನಡೆದಿರುವ ಪ್ರದೇಶದಲ್ಲಿಯೇ ಮತ್ತೊಮ್ಮೆ ಹಿಂಸಾಚಾರ ಶುರುವಾಗಿದೆ.
ಕಳೆದ ಏಪ್ರಿಲ್ 16ರ ಶನಿವಾರ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುವುದಕ್ಕಾಗಿ ಪೊಲೀಸರು ಮಹಿಳೆಯೊಬ್ಬರನ್ನು ವಶಕ್ಕೆ ಪಡೆದಿದ್ದರು. ಪೊಲೀಸರ ಈ ಕ್ರಮವನ್ನು ವಿರೋಧಿಸಿ ಸೋಮವಾರ ದೆಹಲಿಯ ಜಹಾಂಗೀರ್ಪುರಿಯಲ್ಲಿ ಸುಮಾರು 50 ಮಹಿಳೆಯರು ಕಲ್ಲುತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.
ಜಹಾಂಗೀರಪುರಿ ಗಲಭೆ : ಪೊಲೀಸರ ಪಕ್ಷಪಾತದ ನಡೆಗೆ ಮುಸ್ಲಿಂ ಸಮುದಾಯದ ಆಕ್ರೋಶ
ಶನಿವಾರ ನಡೆದ ಹಿಂಸಾಚಾರದಲ್ಲಿ ಫೈರಿಂಗ್ ನಡೆಸಿದ ಆರೋಪಿ ಸೋನು ಎಂಬಾತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ಸೋಮವಾರ ವಿಚಾರಣೆ ನಡೆಸಲು ಮುಂದಾದರು. ಈ ಮಹಿಳೆಯನ್ನು ವಶಕ್ಕೆ ಪಡೆದ ವಿಚಾರ ತಿಳಿಯುತ್ತಿದ್ದಂತೆ ಕೆಲವು ಉದ್ರಿಕ್ತರ ಗುಂಪು ಸುತ್ತಮುತ್ತಲಿನ ಏರಿಯಾದಲ್ಲಿರುವ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿ ಶೋಧಕ್ಕೆ ತೆರಳಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ
ದೆಹಲಿ ವಾಯುವ್ಯ ವಿಭಾಗದ ಡಿಸಿಪಿ ಪ್ರಕಾರ, ಆರೋಪಿ ಸೋನು ತಪ್ಪಿಸಿಕೊಳ್ಳುವುದಕ್ಕೆ ಕುಟುಂಬ ಸದಸ್ಯರು ಸಾಥ್ ನೀಡಿದ್ದಾರೆ. ಆರೋಪಿಗಾಗಿ ಶೋಧ ನಡೆಸಲು ಮನೆ ಮೇಲೆ ದಾಳಿ ನಡೆಸಿದ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಲಾಯಿತು. ಈ ಕುರಿತು ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಒಬ್ಬ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪರಿಸ್ಥಿತಿ ಇದೀಗ ಕೊಂಚ ನಿಯಂತ್ರಣಕ್ಕೆ ಬಂದಿದೆ," ಎಂದು ತಿಳಿಸಿದ್ದಾರೆ.
ದೆಹಲಿ ಜಹಾಂಗೀರ್ಪುರಿಯಲ್ಲಿ ಸುತ್ತಮುತ್ತಲಿನಲ್ಲೇ ಘಟನೆ
ಕಳೆದ ಶನಿವಾರ ಎರಡು ಸಮುದಾಯಗಳ ನಡುವಿನ ಘರ್ಷಣೆ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿತ್ತು. ಇದರ ಮಧ್ಯೆ ಶನಿವಾರ ಘಟನೆ ನಡೆದ 100 ಮೀಟರ್ ವ್ಯಾಪ್ತಿಯಲ್ಲೇ ಸೋಮವಾರ ಕಲ್ಲು ತೂರಾಟ ನಡೆಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಜಹಾಂಗೀರ್ಪುರಿಯಲ್ಲಿ ಪೊಲೀಸ್ ಭದ್ರತೆ ಹೆಚ್ಚಳ
ದೆಹಲಿಯ ಜಹಾಂಗೀರ್ಪುರಿಯಲ್ಲಿ ಮಹಿಳೆಯರು ಹೆಚ್ಚು ಪ್ರಮಾಣದಲ್ಲಿ ರಸ್ತೆಗಿಳಿಯುತ್ತಿರುವುದರ ಹಿನ್ನೆಲೆ ಮಹಿಳಾ ಸಿಬ್ಬಂದಿಯನ್ನು ಹೆಚ್ಚಾಗಿ ನಿಯೋಜನೆ ಮಾಡಲಾಗುತ್ತಿದೆ. ಭಾರತೀಯ ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಕ್ಷಿಪ್ರ ಕಾರ್ಯಾಚರಣೆ ಪಡೆಯ ಸಿಬ್ಬಂದಿಯು ಸ್ಥಳದಲ್ಲಿ ಮಾನವ ಸರಪಳಿ ರಚಿಸಿದೆ. ಮಹಿಳಾ ಆರ್ಎಎಫ್ ಸಿಬ್ಬಂದಿಯನ್ನೂ ಸಹ ಸ್ಥಳದಲ್ಲಿ ನಿಯೋಜಿಸಲಾಗಿದೆ.
ದೆಹಲಿಯಲ್ಲಿ ಶನಿವಾರ ನಡೆದ ಘರ್ಷಣೆಯ ಹಿನ್ನೆಲೆ
ದೆಹಲಿಯ ಜಹಾಂಗೀರ್ಪುರಿಯಲ್ಲಿ ಶನಿವಾರ ಸಂಜೆ ವೇಳೆಗೆ ಹನುಮಾನ್ ಜಯಂತಿ ಆಚರಿಸುತ್ತಿದ್ದ ಸಂದರ್ಭದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆಯಿತು. ಪರಸ್ಪರ ವಾಗ್ವಾದ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಎರಡು ಕೋಮುಗಳ ಜನರು ಕಲ್ಲುತೂರಾಟ ನಡೆಸಿದರು. ಈ ವೇಳೆ 9 ಜನರಿಗೆ ಗಾಯಗಳಾಗಿದ್ದು, ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದರು. ಸಂಜೆ 6 ಗಂಟೆ ವೇಳೆಗೆ ಕಲ್ಲುತೂರಾಟ ನಡೆಸುವುದರ ಜೊತೆಗೆ ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ ಪೊಲೀಸರು ಶನಿವಾರವೇ 23 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದರು.
Recommended Video