ಸುಗ್ರೀವಾಜ್ಞೆ ಹಿಂಪಡೆಯಲು ಕೇಂದ್ರ ಸರ್ಕಾರ ಸಿದ್ಧ
ನವದೆಹಲಿ, ಅ.2 : ಕಳಂಕಿತ ಚುನಾಯಿತ ಪ್ರತಿನಿಧಿಗಳನ್ನು ರಕ್ಷಿಸುವ ಸುಗ್ರೀವಾಜ್ಞೆಯನ್ನು ವಾಪಸ್ ಪಡೆಯಲು ಕಾಂಗ್ರೆಸ್ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಜಯ ಸಿಕ್ಕಿದಂತಾಗಿದೆ.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಪ್ರಧಾನ ಮಂತ್ರಿ ನಿವಾಸದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕೋರ್ ಕಮಿಟಿ ಸಭೆಯಲ್ಲಿ ಸುಗ್ರೀವಾಜ್ಞೆ ಹಿಂಪಡೆಯುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಇದೆ.

ಬುಧವಾರ ಬೆಳಗ್ಗೆ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರನ್ನು ರಾಹುಲ್ ಗಾಂಧಿ ಭೇಟಿಯಾದ ನಂತರ ಕೋರ್ ಕಮಿಟಿ ಸಭೆ ಸೇರಿತ್ತು. ಸಂಜೆ 6 ಗಂಟೆ ನಂತರ ಕೇಂದ್ರದ ಸಚಿವ ಸಂಪುಟ ಸಭೆ ನಡೆಯಲಿದ್ದು, ನಂತರ ಈ ಕುರಿತು ಅಂತಿಮ ನಿರ್ಧಾರ ಹೊರಬೀಳಲಿದೆ.
ಸುಗ್ರೀವಾಜ್ಞೆ ಹಿಂಪಡೆಯಲು ಯುಪಿಎ ಮೈತ್ರಿಕೂಟದ ಇತರ ಅಂಗಪಕ್ಷಗಳ ಅನುಮತಿಯನ್ನು ಪಡೆಯಬೇಕಾಗಿದೆ. ಆದ್ದರಿಂದ ಯುಪಿಎ ಸಮನ್ವಯ ಸಮಿತಿಯ ಸಭೆಯನ್ನೂ ನಡೆಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಸಮಾಜವಾದಿ ಪಕ್ಷ ಸುಗ್ರೀವಾಜ್ಞೆ ಹಿಂಪಡೆಯಬಾರದು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.
ಬುಧವಾರ ಬೆಳಗ್ಗೆ ರಾಹುಲ್ ಗಾಂಧಿ ಅವರು ಪ್ರಧಾನ ಮಂತ್ರಿಯನ್ನು ಭೇಟಿಯಾಗಿ ಕಳಂಕಿತ ಚುನಾಯಿತ ಜನಪ್ರತಿನಿಧಿಗಳನ್ನು ಸದಸ್ಯತ್ವದಿಂದ ತಕ್ಷಣವೇ ಅನರ್ಹಗೊಳಿಸದಿರುವ ಸುಗ್ರೀವಾಜ್ಞೆಯನ್ನು ತಾವು ವಿರೋಧಿಸಿದ್ದಕ್ಕೆ ಕಾರಣಗಳನ್ನು ವಿವರಿಸಿದ್ದರು.












Click it and Unblock the Notifications