ನವದೆಹಲಿಯಲ್ಲೂ ಕೊರೊನಾ ರೋಗಿಗಳ ಚಿಕಿತ್ಸೆಗೆ ಹಾಸಿಗೆ ಕೊರತೆ
ನವದೆಹಲಿ, ಏಪ್ರಿಲ್ 12: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾವೈರಸ್ ಎರಡನೇ ಅಲೆ ವೇಗ ಹೆಚ್ಚಾಗುತ್ತಿರುವ ಹಿನ್ನೆಲೆ ನವದೆಹಲಿ ಆಸ್ಪತ್ರೆಗಳಲ್ಲಿ ಕೊವಿಡ್-19 ರೋಗಿಗಳ ಹಾಸಿಗೆ ಸಂಖ್ಯೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಅನಗತ್ಯವಾಗಿ ಮತ್ತು ತುರ್ತು ಇಲ್ಲದ ಸಂದರ್ಭಗಳಲ್ಲಿ ಸಾರ್ವಜನಿಕರು ಯಾವುದೇ ಕಾರಣಕ್ಕೂ ಹೊರಗಡೆ ಸಂಚಾರ ಮಾಡಬೇಡಿ ಎಂದರು. ಹೊರಗೆ ಹೋಗಬೇಕಾದ ಅನಿವಾರ್ಯತೆಯಿದ್ದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಬಳಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಏರಿಕೆ ಹಿನ್ನೆಲೆ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಲಾಗುತ್ತಿದೆ. ಕಳೆೊಂದು ವಾರದಲ್ಲಿ 5000ಕ್ಕೂ ಹೆಚ್ಚು ಕೊರೊನಾ ರೋಗಿಗಳಿಗೆ ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ತಿಳಿಸಿದರು.

ದೆಹಲಿಯಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:
ನವದೆಹಲಿಯಲ್ಲಿ ಒಂದೇ ದಿನ 10774 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 48 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 11283ಕ್ಕೆ ಏರಿಕೆಯಾಗಿದೆ.
ಕಳೆದ ಬಾರಿ ಆಸ್ಪತ್ರೆಗಳಲ್ಲಿ 4000 ಕೊವಿಡ್-19 ಹಾಸಿಗೆಗಳ ವ್ಯವಸ್ಥೆಯಿದ್ದು, ಸದ್ಯಕ್ಕೆ 1090 ಹಾಸಿಗೆಗಳು ಮಾತ್ರ ಲಭ್ಯವಿದೆ. ಈ ಹಿನ್ನೆಲೆ ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಗಳ ಕೊರತೆ ಎದುರಾಗುವ ಮೊದಲೇ ಸೂಕ್ತ ವ್ಯವಸ್ಥೆ ಕಲ್ಪಿಸುವುದಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ. ಆಸ್ಪತ್ರೆಯ ಶೇ.50ರಷ್ಟು ಹಾಸಿಗೆಗಳನ್ನು ಕೊರೊನಾವೈರಸ್ ಸೋಂಕಿತರಿಗೆ ಮೀಸಲು ಇರಿಸಲಾಗಿದೆ. ಕೆಲವೇ ಕೆಲವು ರೋಗಿಗಳು ಮಾತ್ರ ವೆಂಟಿಲೇಟರ್ ಅವಲಂಬಿಸಿರುತ್ತಾರೆ ಎಂದು ಸಚಿವ ಸತ್ಯೇಂದರ್ ಜೈನ್ ತಿಳಿಸಿದರು.












Click it and Unblock the Notifications