ಮೋದಿ ಮತ್ತು ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ
ನವದೆಹಲಿ, ಜೂನ್ 15: ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಶನಿವಾರ ದೆಹಲಿಗೆ ತೆರಳಿದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಅವರು, ಎರಡನೆಯ ಅವಧಿಗೆ ಆಯ್ಕೆಯಾದ ಮೋದಿ ಅವರಿಗೆ ಶುಭಾಶಯ ಕೋರಿದರು. ಬಳಿಕ ವಿವಿಧ ವಿಚಾರಗಳ ಕುರಿತು ಚರ್ಚಿಸಿದರು.
ಮೋದಿ-ಕುಮಾರಸ್ವಾಮಿ ಭೇಟಿ, ಹಲವು ಬೇಡಿಕೆ ಮಂಡಿಸಲಿರುವ ಎಚ್ಡಿಕೆ
ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ನರೇಗಾ ಯೋಜನೆಗೆ ಬಾಕಿ ಉಳಿದಿರುವ ಅನುದಾನದ ಮೊತ್ತದ ಬಿಡುಗಡೆ, ಸಾಲ ಮನ್ನಾ ಯೋಜನೆಯ ಯಶಸ್ವಿ ಅನುಷ್ಠಾನ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.
ರಾಜ್ಯದಲ್ಲಿ ಈ ವರ್ಷವೂ ಬರದ ಛಾಯೆ ಇದ್ದು ಶೇ. 45 ರಷ್ಟು ಮಳೆ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಮುಂದಾಗಬೇಕು ಎಂದು ಮನವಿ ಮಾಡಿದರು.
1500 ಕೋಟಿ ರೂ. ಅನುದಾನ ಬಾಕಿ
ರಾಜ್ಯದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ರಾಜ್ಯ ಸರ್ಕಾರ ಕೂಲಿಯ ಬಾಬ್ತು ಪಾವತಿಸಿದ 1200 ಕೋಟಿ ರೂ. ಮುಂಗಡ ಹಣವೂ ಸೇರಿದಂತೆ ಸುಮಾರು 1500 ಕೋಟಿ ರೂ. ಅನುದಾನ ಬಾಕಿ ಇದೆ. ಇದನ್ನು ಕೂಡಲೇ ಬಿಡುಗಡೆ ಮಾಡಲು ಕ್ರಮ ವಹಿಸುವಂತೆ ಕೋರಿದರು.
12830 ಕೋಟಿ ರೂಪಾಯಿ ಬೆಳೆ ಸಾಲ ಮನ್ನಾ
ರಾಜ್ಯದಲ್ಲಿ ಸಾಲ ಮನ್ನಾ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ, ಪಾರದರ್ಶಕವಾಗಿ ಅನುಷ್ಠಾನಗೊಳಿಸಲಾಗಿದೆ. ರಾಜ್ಯದ ವಾಣಿಜ್ಯ ಬ್ಯಾಂಕುಗಳ 9 ಲಕ್ಷ ಹಾಗೂ ಸಹಕಾರಿ ಬ್ಯಾಂಕುಗಳ 14 ಲಕ್ಷ ಫಲಾನುಭವಿಗಳ ಒಟ್ಟು 12830 ಕೋಟಿ ರೂಪಾಯಿ ಬೆಳೆ ಸಾಲ ಮನ್ನಾ ಮಾಡಲು ಕ್ರಮ ವಹಿಸಿರುವುದಾಗಿ ಮುಖ್ಯಮಂತ್ರಿಗಳು ವಿವರಿಸಿದರು.
ರೈತರ ಬಗ್ಗೆ ಮೃದು ಧೋರಣೆ ಇರಲಿ: ಬ್ಯಾಂಕರುಗಳಿಗೆ ಕುಮಾರಸ್ವಾಮಿ ಸಲಹೆ
ನಿರ್ಮಲಾ ಸೀತಾರಾಮನ್ ಭೇಟಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಅವರು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಭಾಷಾ ಜ್ಞಾನ ಹೊಂದಿರುವ ಸ್ಥಳೀಯರಿಗೆ ಅವಕಾಶ ಒದಗಿಸುವಂತೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ (ಐಬಿಪಿಎಸ್) ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಮನವಿ ಮಾಡಿದರು. ಅಲ್ಲದೆ, ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳು ಸಂವಿಧಾನ ಮಾನ್ಯತೆ ನೀಡಿರುವ ಎಲ್ಲ 22 ಭಾಷೆಗಳಲ್ಲಿ ನಡೆಸಬೇಕು ಹಾಗೂ ಕೇಂದ್ರ ಸರ್ಕಾರದ ಎಲ್ಲ ಇಲಾಖೆಗಳ ನೇಮಕಾತಿಯಲ್ಲೂ ಸ್ಥಳೀಯರಿಗೆ ಅವಕಾಶ ಒದಗಿಸುವ ಕುರಿತು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವಂತೆ ಮನವಿ ಮಾಡಿದರು.
233 ಕೋಟಿ ರೂ. ಬಿಡುಗಡೆಗೆ ಮನವಿ
ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಿಗೆ 2018-19ನೇ ಸಾಲಿಗೆ ಬಾಕಿ ಇರುವ 233 ಕೋಟಿ ರೂ. ಪರ್ಫಾರ್ಮನ್ಸ್ ಗ್ರಾಂಟ್ಸ್ ಬಿಡುಗಡೆ ಮಾಡುವಂತೆ ಕೋರಿದರು.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಸ್ಥೆಯಾಗಿದೆ. ಈ ಸಂಸ್ಥೆಯ ಬ್ಯಾಂಕ್ ಖಾತೆಯಲ್ಲಿರುವ ಮೊತ್ತ ಹಾಗೂ ಬಡ್ಡಿ ಮೊತ್ತವನ್ನು ಕಾರ್ಮಿಕರ ಕಲ್ಯಾಣಕ್ಕಾಗಿ ವಿನಿಯೋಗಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಕಾಯ್ದೆ 1961 ರ ನಿಯಮ 10(29ಎ) ಅಡಿ ಮಂಡಳಿಯನ್ನು ಸೇರ್ಪಡೆಗೊಳಿಸಿ, ಕಾಫಿ ಮಂಡಳಿ, ರಬ್ಬರ್ ಮಂಡಳಿಗಳಂತೆ, ಆದಾಯ ತೆರಿಗೆ ವಿನಾಯಿತಿ ನೀಡುವಂತೆ ಮನವಿ ಮಾಡಿದರು.