Breaking; ದೆಹಲಿ ಕಾಂಗ್ರೆಸ್ ಕಚೇರಿ ಮುಂದೆ ಪೊಲೀಸ್ ದಂಡು!
ನವದೆಹಲಿ, ಜುಲೈ 26: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ (ಜುಲೈ 26) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಎರಡನೇ ಸುತ್ತಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ(ಇಡಿ) ಮುಂದೆ ಹಾಜರಾಗುವ ನಿರೀಕ್ಷೆಯಿದೆ.
ಈ ಹಿನ್ನೆಲೆ ದೆಹಲಿಯ ಕಾಂಗ್ರೆಸ್ ಕಚೇರಿ ಬಳಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಜುಲೈ 26 ರಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಮತ್ತೆ ಬರುವಂತೆ ಕಾಂಗ್ರೆಸ್ ಅಧ್ಯಕ್ಷೆಗೆ ಜಾರಿ ನಿರ್ದೇಶನಾಲಯ ಜುಲೈ 22 ರಂದು ಹೊಸ ಸಮನ್ಸ್ ಜಾರಿ ಮಾಡಿತ್ತು.
ಈ ಮೊದಲು ಸೋಮವಾರ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಲಾಗಿತ್ತು. ಬಳಿಕ ಅದನ್ನು ಒಂದು ದಿನ ಮುಂದೂಡಲಾಯಿತು.

ಕಳೆದ ಬಾರಿ ವಿಚಾರಣೆ ವೇಳೆ ಬಾರಿ ಪ್ರತಿಭಟನೆ ನಡೆದ ಕಾರಣ ಈ ಸಲ ಪೊಲೀಸರು ಮುನ್ನೆಚ್ಚರಿಕೆಯಾಗಿ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿ ಬಳಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ರಾಜ್ಯದಲ್ಲಿಯು ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ಕಾಂಗ್ರೆಸ್, ಇಂದು ಮೌನ ಸತ್ಯಾಗ್ರಹ ನಡೆಸಲಿದೆ.

ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, "ಜುಲೈ 26ರ ಮಂಗಳವಾರ ಆನಂದ್ರಾವ್ ವೃತ್ತ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಮುಂದೆ ಮೌನ ಸತ್ಯಾಗ್ರಹ ಮಾಡಲಿದ್ದೇವೆ. ಈ ವೇಳೆ ರಾಜ್ಯ ಕಾಂಗ್ರೆಸ್ನ ಎಲ್ಲ ನಾಯಕರು, ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಾಲಿಕೆ ಸದಸ್ಯರು, ಮಾಜಿ ಕಾರ್ಪೊರೇಟರ್ಗಳು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಪಾಲ್ಗೊಂಡು, ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಒಡ್ಡುತ್ತಿರುವ ಕಿರುಕುಳ ಖಂಡಿಸಲಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.












Click it and Unblock the Notifications