ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸ್ಫೋಟ: ನಂತರದ ಬೆಳವಣಿಗೆಗಳೇನು?
ನವದೆಹಲಿ, ಜನವರಿ.29: ನವದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸ್ಫೋಟ ಸಂಭವಿಸುತ್ತಿದ್ದಂತೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಹಲವು ಕಡೆಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ನವದೆಹಲಿಯಲ್ಲಿ ಶುಕ್ರವಾರ ಸಂಜೆ 5.05 ಗಂಟೆ ಸುಮಾರಿಗೆ ಡಾ.ಎಪಿಜೆ ಅಬ್ದುಲ್ ಕಲಾಮ್ ರಸ್ತೆಯ ಜಿಂದಾಲ್ ಹೌಸ್ ಬಳಿ ಲಘು ಬಾಂಬ್ ಸ್ಫೋಟ ಸಂಭವಿಸಿತು. ಈ ವಿಷಯ ತಿಳಿಯುತ್ತಿದ್ದಂತೆ ದೆಹಲಿ ವಿಶೇಷ ತನಿಖಾ ತಂಡದ ಪೊಲೀಸರು ರಾಷ್ಟ್ರೀಯ ತನಿಖಾ ತಂಡದ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ಪರಿಶೀಲನೆ ನಡೆಸಿದರು.
ನವದೆಹಲಿ: ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿ ಪೊಲೀಸ್ ಆಯುಕ್ತರು ಮತ್ತು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು. ಬಾಂಬ್ ಸ್ಫೋಟದ ಕುರಿತ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹರಿದ್ವಾರ ಮತ್ತು ಅಯೋಧ್ಯೆಯಲ್ಲಿ ಹೈಅಲರ್ಟ್
ದೆಹಲಿಯಲ್ಲಿ ಸಂಭವಿಸಿದ ಸ್ಫೋಟದ ಹಿನ್ನೆಲೆ ಉತ್ತರ ಭಾರತದ ಪ್ರಸಿದ್ಧ ಆಚರಣೆ ಮಹಾಕುಂಭ ಮೇಳಕ್ಕೆ ಭದ್ರತೆಯನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ. ಹರಿದ್ವಾರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಅಯೋಧ್ಯೆ ಸೇರಿದಂತೆ ಉತ್ತರ ಪ್ರದೇಶದ ಹಲವೆಡೆ ಹೈಅಲರ್ಟ್ ಘೋಷಿಸಲಾಗಿದೆ. ಮುಂಬೈ ಮತ್ತು ಪುಣೆಯಲ್ಲಿ ಬಿಗಿ ಭದ್ರತೆಯನ್ನು ಒದಗಿಸುವುದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಗೃಹ ಸಚಿವರು ಮತ್ತು ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ.
ಸ್ಫೋಟದ ಸ್ಥಳದಲ್ಲೇ ಪತ್ತೆಯಾದ ಲಕೋಟೆ
ಶುಕ್ರವಾರ ಸ್ಫೋಟ ಸಂಭವಿಸಿದ ಇಸ್ರೇಲ್ ರಾಯಭಾರಿ ಕಚೇರಿ ಬಳಿಯಲ್ಲೇ ಪತ್ರವೊಂದು ಸಿಕ್ಕಿದೆ. ಹೀಗೆ ಸಿಕ್ಕ ಪತ್ರದಲ್ಲಿ ಇಸ್ರೇಲ್ ರಾಯಭಾರಿ ಕಚೇರಿಗೆ ಸಂಬಂಧಿಸಿದಂತೆ ಬರೆಯಲಾಗಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದ್ದು, ಆ ಪತ್ರಕ್ಕೂ ಶುಕ್ರವಾರ ಸಂಭವಿಸಿದ ಸ್ಫೋಟಕ್ಕೂ ಸಂಬಂಧವಿದೆಯೇ ಇಲ್ಲವೇ ಎನ್ನುವುದು ಇನ್ನೂ ದೃಢಪಟ್ಟಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದ ಹಿಂದಿರುವ ಆತಂಕಕ್ಕೆ ಕಾರಣ?
ಇಸ್ರೇಲ್ ರಾಯಭಾರಿ ಕಚೇರಿಯಿಂದ ಕೇವಲ ಒಂದೂವರೆ ಕಿ.ಮೀ ದೂರದಲ್ಲಿ ಭಾರತದ 72ನೇ ಗಣರಾಜ್ಯೋತ್ಸವದ ಹಿನ್ನೆಲೆ ಬೀಟಿಂಗ್ ರಿಟ್ರೀಟ್ ಸಂಭ್ರಮಾಚರಣೆ ಆಚರಿಸಲಾಗುತ್ತಿತ್ತು. ಈ ಆಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಪ್ರಮುಖ ವಿವಿಐಪಿಗಳು ಭಾಗವಹಿಸಿದ್ದರು. ಇಂಥ ಸಂದರ್ಭದಲ್ಲಿ ಈ ಪ್ರದೇಶದಿಂದ ಕೇವಲ ಒಂದೂವರೆ ಕಿಲೋ ಮೀಟರ್ ದೂರದಲ್ಲಿ ಸ್ಫೋಟ ಸಂಭವಿಸಿರುವುದಕ್ಕೆ ಆತಂಕ ಹೆಚ್ಚಿದೆ.
ಇಸ್ರೇಲ್ ರಾಜತಾಂತ್ರಿಕರ ಭದ್ರತೆಯ ಭರವಸೆ
ಶುಕ್ರವಾರ ಸಂಭವಿಸಿದ ಸ್ಫೋಟ ಪ್ರಕರಣವನ್ನು ಭಾರತ ಗಂಭೀರವಾಗಿ ತೆಗೆದುಕೊಳ್ಳಲಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದ್ದಾರೆ. ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟದ ಬಗ್ಗೆ ಇಸ್ರೇಲ್ ವಿದೇಶಾಂಗ ಸಚಿವ ಗಬಿ ಅಶ್ಕೆನಾಜಿ ಜೊತೆ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ದೂರವಾಣಿ ಮೂಲಕ ಚರ್ಚೆ ನಡೆಸಿದರು. ನಂತರ ಪ್ರತಿಕ್ರಿಯೆ ನೀಡಿರುವ ಸಚಿವ ಜೈಶಂಕರ್ ಅವರು, ಇಸ್ರೇಲ್ ರಾಯಭಾರಿ ಮತ್ತು ರಾಜತಾಂತ್ರಿಕರು ಹಾಗೂ ರಾಯಭಾರಿ ಕಚೇರಿಯ ಸಿಬ್ಬಂದಿಗೆ ಸಂಪೂರ್ಣ ರಕ್ಷಣೆ ನೀಡುವ ಭರವಸೆ ನೀಡಿದರು.