ಹಿಜಾಬ್- ಕೇಸರಿ ಶಾಲು ವಿವಾದ: ಪ್ರಿಯಾಂಕಾ ಗಾಂಧಿ ಹೇಳಿಕೆಗೆ ಸಂಸದೆ ಸುಮಲತಾ ತಿರುಗೇಟು
ನವದೆಹಲಿ, ಫೆಬ್ರವರಿ 10: ಉಡುಪಿ ಕಾಲೇಜಿನಲ್ಲಿ ಶುರುವಾದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕರ್ನಾಟಕದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದೆ. ಅಲ್ಲದೇ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.
ವಿದ್ಯಾರ್ಥಿಗಳ ನಡುವೆ ಶುರುವಾದ ವಿವಾದ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಹಲವು ನಾಯಕರು ಕೇಸರಿ ಶಾಲು ಹಾಗೂ ಹಿಜಾಬ್ ಪರ-ವಿರೋಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸದ್ಯ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ತೀರ್ಪು ಬರುವುದನ್ನು ಎಲ್ಲರೂ ಕಾಯುತ್ತಿದ್ದಾರೆ.
ಇನ್ನು ವಿದ್ಯಾರ್ಥಿಗಳು ಪ್ರತಿಭಟನೆಗಿಳಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಹ ಮೂರು ದಿನಗಳ ಕಾಲ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಬೆಂಗಳೂರಿನಲ್ಲಿ ಶಾಲಾ- ಕಾಲೇಜುಗಳ ಸುತ್ತ ಎರಡು ದಿನಗಳ ಕಾಲ 144 ಸೆಕ್ಷನ್ ಜಾರಿ ಮಾಡಲಾಗಿದೆ

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿಕೆಗೆ ಮಂಡ್ಯ ಸಂಸದೆ ಸುಮಲತಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.
ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಂಸದೆ ಸುಮಲತಾ ಅಂಬರೀಶ್, ಈ ಪ್ರಕರಣ ರಾಜಕೀಯ ಪಡೆದುಕೊಳ್ಳಲು ಬಹಳ ದೊಡ್ಡ ಪಾತ್ರವಿದೆ. ಈ ಪ್ರಕರಣದಲ್ಲಿ ರಾಜಕೀಯ ನಾಯಕರು ಕೈವಾಡ ಇದೆ ಎಂದು ಅನಿಸುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಮುಗ್ಧ ಮಕ್ಕಳಲ್ಲಿ ವಿಷ ಬಿತ್ತಲು ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ. ನನಗೆ ಈ ಪ್ರಕರಣದಲ್ಲಿ ಬಹಳಷ್ಟು ರಾಜಕೀಯವಿರುವುದು ಎದ್ದು ಕಾಣುತ್ತಿದೆ ಎಂದು ಪರೋಕ್ಷವಾಗಿ ರಾಜಕೀಯ ಪಕ್ಷಗಳ ಮತ್ತು ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಹಿಜಾಬ್ ವಿವಾದದ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನೀಡಿರುವ ತಮಗೆ ಬೇಕಾದ ವಸ್ತ್ರ ತೊಡುವುದು ನಮ್ಮ ಹಕ್ಕು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಂಸದೆ ಸುಮಲತಾ ಅಂಬರೀಶ್, ನಾವೇನು ಧರಿಸಬೇಕು ಅನ್ನುವುದು ನಮ್ಮ ಹಕ್ಕು. ಇದು ಖಂಡಿತವಾಗಿಯೂ ಒಪ್ಪುವಂತಹದ್ದು. ಆದರೆ, ನೀವು ಬಿಕಿನಿಯನ್ನು ಬೀಚ್ ಅಥವಾ ಸ್ವಿಮ್ಮಿಂಗ್ ಪೂಲ್ನಲ್ಲಿ ಧರಿಸುತ್ತೀರ. ಅದನ್ನು ಶಾಲೆಯಲ್ಲಿ ಬಳಸಲು ಸಾಧ್ಯವಿಲ್ಲ ಅಲ್ಲವೇ?

ನೀವು ಕೆಲಸ ಮಾಡುವ ಜಾಗದಲ್ಲಿ ಜೀನ್ಸ್ ಬಳಸಲು ಸಾಧ್ಯವಿಲ್ಲ. ಅಲ್ಲಿ ನೀವು ಕಂಪನಿ ಏನು ಹೇಳುತ್ತದೆಯೋ ಅದನ್ನು ಧರಿಸಬೇಕಾಗುತ್ತೆ. ಎಂದು ಪ್ರಿಯಾಂಕಾ ಗಾಂಧಿ ಹೇಳಿಕೆಗೆ ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ.
ವಿಶೇಷ ಪೀಠದಲ್ಲಿ ಗುರುವಾರದಿಂದ ಅರ್ಜಿ ವಿಚಾರಣೆ
ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಲು ಕರ್ನಾಟಕ ಹೈಕೋರ್ಟ್ನಲ್ಲಿ ವಿಶೇಷ ಪೀಠ ರಚನೆ ಮಾಡಲಾಗಿದೆ.
ಬುಧವಾರ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಬಳಿಕ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ್ದರು.
ಈಗ ಅರ್ಜಿಗಳ ವಿಚಾರಣೆಗೆ ವಿಶೇಷ ಪೂರ್ಣ ಪೀಠವನ್ನು ರಚನೆ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಪೂರ್ಣ ಪೀಠ ಗುರುವಾರ ಮಧ್ಯಾಹ್ನ 2.30ರಿಂದ ಅರ್ಜಿ ವಿಚಾರಣೆ ನಡೆಯಲಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಇದ್ದು, ಗುರುವಾರವೇ ವಿಚಾರಣೆ ಆರಂಭವಾಗಲಿದೆ.












Click it and Unblock the Notifications