ಫೆ.6ಕ್ಕೆ ರೈತರ "ಚಕ್ಕಾ ಜಾಮ್"; ತುರ್ತು ಸಭೆ ನಡೆಸಿದ ಅಮಿತ್ ಶಾ
ನವದೆಹಲಿ, ಫೆಬ್ರುವರಿ 04: ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ರೈತರು ಫೆಬ್ರುವರಿ 6ರಂದು "ಚಕ್ಕಾ ಜಾಮ್"ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್.ಶ್ರೀವಾಸ್ತವ ಹಾಗೂ ಗುಪ್ತಚರ ಇಲಾಖೆ ಮುಖ್ಯಸ್ಥ ಅರವಿಂದ್ ಕುಮಾರ್ ಅವರೊಂದಿಗೆ ಸಭೆ ನಡೆಸಿರುವುದಾಗಿ ತಿಳಿದುಬಂದಿದೆ.
ರೈತ ಸಂಘಟನೆಗಳು ಫೆಬ್ರುವರಿ ಆರರಂದು "ಚಕ್ಕಾ ಜಾಮ್" ನಡೆಸಲು ಕರೆ ನೀಡಿದ್ದು, ಈ ಸಂದರ್ಭ ದೇಶಾದ್ಯಂತ ರಾಷ್ಟ್ರೀಯ ಹಾಗೂ ರಾಜ್ಯದ ಹೆದ್ದಾರಿಗಳನ್ನು ಮೂರು ಗಂಟೆಗಳ ಕಾಲ ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ದೆಹಲಿ ಗಡಿಗಳಲ್ಲಿ ಇಂಟರ್ ನೆಟ್ ಸ್ಥಗಿತಗೊಳಿಸಿದ್ದು, ತಮ್ಮ ಮೇಲೆ ಸರ್ಕಾರ ನಡೆಸುತ್ತಿರುವ ದೌರ್ಜನ್ಯದ ವಿರುದ್ಧ ಈ ಪ್ರತಿಭಟನೆ ಕರೆ ನೀಡಲಾಗಿದೆ ಎಂದು ರೈತರು ಹೇಳಿಕೊಂಡಿದ್ದಾರೆ.

ಈ ನಡುವೆ ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಸ್ವೀಡನ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ ಬರ್ಗ್ ಮೇಲೆ ಪೊಲೀಸರು ಶತ್ರುತ್ವಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಗೃಹ ಸಚಿವ ಅಮಿಶ್ ಶಾ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.












Click it and Unblock the Notifications