ಮನೆಯಲ್ಲಿದ್ದೇ ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು ಹೇಗೆ?
ನವದೆಹಲಿ, ಜುಲೈ.05: ನೊವೆಲ್ ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆಯಿಲ್ಲ. ವೆಂಟಿಲೇಟರ್ ಇಲ್ಲ, ಬೆಡ್ ಗಳ ವ್ಯವಸ್ಥೆಯು ನೆಟ್ಟಗಿಲ್ಲ. ಇಂಥ ದೂರುಗಳ ನಡುವೆ ನವದೆಹಲಿಯಲ್ಲಿ ಮನೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಲೇ ಗುಣಮುಖರಾಗುತ್ತಿರುವ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 10 ಸಾವಿರ ಬೆಡ್ ಗಳನ್ನು ಉಚಿತವಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ.
ನವದೆಹಲಿಯಲ್ಲಿ ಕೊರೊನಾವೈರಸ್ ನಿಯಂತ್ರಣಕ್ಕೆ ಹೊಸ ತಪಾಸಣೆ
ನವದೆಹಲಿಯಲ್ಲಿ ಕೊವಿಡ್-19 ಆಸ್ಪತ್ರೆಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ. ಮನೆಗಳಲ್ಲಿಯೇ ಚಿಕಿತ್ಸೆ ಪಡೆದು ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ಕೊರೊನಾ ಹಾಸಿಗೆಗಳು ಚಿಕಿತ್ಸೆಗೆ ಮುಕ್ತ ಎಂದ ಸಿಎಂ
ಕಳೆದ ವಾರ ಪ್ರತಿದಿನ ಸುಮಾರು 2,300 ಹೊಸ ಸೋಂಕಿತರ ಪ್ರಕರಣಗಳು ಪತ್ತೆಯಾಗಿದ್ದವು. ಈ ಪೈಕಿ ಆಸ್ಪತ್ರೆಯಲ್ಲಿ ಯಾವುದೇ ರೋಗಿಗಳು ಆಸ್ಪತ್ರೆಗಳಲ್ಲಿ ದಾಖಲಾಗಿಲ್ಲ. ಇದರಿಂದಾಗಿ 6,200 ರಿಂದ 5,300ಕ್ಕೆ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಇಂದಿಗೆ 9,900 ಕೊರೊನಾ ಹಾಸಿಗೆಗಳು ಚಿಕಿತ್ಸೆಗೆ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದರು.
25,940 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ದಾಖಲು
ನವದೆಹಲಿಯಲ್ಲಿ ಭಾನುವಾರದ ಅಂಕಿ-ಅಂಶಗಳ ಪ್ರಕಾರ ಒಟ್ಟು 97200 ಮಂದಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿದ್ದು, ಈ ಪೈಕಿ 68256 ಸೋಂಕಿತರು ಗುಣಮುಖರಾಗಿದ್ದಾರೆ. ಬಾಕಿ ಉಳಿದ 25940ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಮಹಾಮಾರಿಗೆ ರಾಷ್ಟ್ರ ರಾಜಧಾನಿಯಲ್ಲಿ ಇದುವೆರಗೂ 3004 ಮಂದಿ ಪ್ರಾಣ ಬಿಟ್ಟಿದ್ದಾರೆ.
ಕೊವಿಡ್-19 ಸೋಂಕಿತರ ಏರಿಕೆ ಪ್ರಮಾಣದಲ್ಲಿ ಇಳಿಕೆ
ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣವು ನವದೆಹಲಿ ಜನರನ್ನು ಬೆಚ್ಚಿ ಬೀಳಿಸಿತ್ತು. ಆದರೆ ಇಂದು ಪರಿಸ್ಥಿತಿ ಕೊಂಚ ಹತೋಟಿಗೆ ಬಂದಿದೆ. ಮೊದಲಿಗೆ ಶೇ.37ರಷ್ಟಿದ್ದ ಸೋಂಕು ಹರಡುವಿಕೆ ಪ್ರಮಾಣ ಇದೀಗ ಶೇ.10.58ಕ್ಕೆ ಇಳಿಕೆಯಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಕೊರೊನಾವೈರಸ್ ಗುಣಮುಖರ ಸಂಖ್ಯೆ ಏರಿಕೆ
ನವದೆಹಲಿಯಲ್ಲಿ ಕೊರೊನಾವೈರಸ್ ಸೋಂಕಿತರ ಗುಣಮುಖ ಪ್ರಮಾಣ ಶೇ.70ಕ್ಕೆ ಏರಿಕೆಯಾಗಿದೆ. ಅಂದರೆ 100 ಮಂದಿ ಸೋಂಕಿತರಲ್ಲಿ ಈಗಾಗಲೇ 70 ಸೋಂಕಿತರು ಕೊರೊನಾವೈರಸ್ ನಿಂದ ಗುಣಮುಖರಾಗಿದ್ದಾರೆ ಎಂದು ಡಿಸಿಎಂ ಮನೀಷ್ ಸಿಸೋಡಿಯಾ ಮಾಹಿತಿ ನೀಡಿದ್ದಾರೆ. ಇದರ ಮಧ್ಯೆ ಕೊರೊನಾವೈರಸ್ ಸೋಂಕು ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಕಳೆದ 16 ದಿನಗಳಲ್ಲಿ 5.96 ಲಕ್ಷ ಜನರನ್ನು ಕೊರೊನಾವೈರಸ್ ತಪಾಸಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.