ನಾವು ಅರ್ನಬ್ ಚಾನೆಲ್ ನೋಡುವುದಿಲ್ಲ, ಆದರೆ.. :ಸುಪ್ರೀಂ ಹೇಳಿದ್ದೇನು?
ನವದೆಹಲಿ, ನವೆಂಬರ್ 11: ನಾವು ಅರ್ನಬ್ ಗೋಸ್ವಾಮಿಯವರ ಚಾನೆಲ್ ನೋಡುವುದಿಲ್ಲ ಆದರೆ ಇದು ಅವರ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ್ದು ಎಂದು ಸುಪ್ರೀಂಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ನ್ಯಾಯಪೀಠ ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದೆ. ನಾನು ರಿಪಬ್ಲಿಕ್ ಟಿವಿಯನ್ನು ನೋಡುವುದಿಲ್ಲ, ಆದರೆ ಈ ಪ್ರಕರಣದಲ್ಲಿ ಸಾಂವಿಧಾನಿಕ ಕೋರ್ಟ್ ಮಧ್ಯೆ ಪ್ರವೇಶಿಸದಿದ್ದರೆ ನಿಸ್ಸಂಶಯವಾಗಿ ನಾವು ವಿನಾಶದ ಹಾದಿಯಲ್ಲಿ ಹೋಗುತ್ತಿದ್ದೇವೆ ಎಂದರ್ಥ ಎಂದು ನ್ಯಾಯಮೂರ್ತಿಗಳು ಹೇಳಿದರು.
2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರ ಆತ್ಮಹತ್ಯೆ ಕೇಸಿಗೆ ಸಂಬಂಧಪಟ್ಟಂತೆ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಸಂಪಾದಕ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರು ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಕೈಗೆತ್ತಿಕೊಂಡಿತು.

ರಾಜ್ಯ ಸರ್ಕಾರಗಳು ಜನರ ವ್ಯಕ್ತಿಗತ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಯತ್ನಿಸಿದರೆ ಜನರ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಇರುತ್ತದೆ.
ಈ ದೇಶದ ಸಾಂವಿಧಾನಿಕ ಕೋರ್ಟ್ ಕಾನೂನನ್ನು ಜಾರಿಗೆ ತಂದು ಜನರ ವೈಯಕ್ತಿಕ ಸ್ವಾತಂತ್ರ್ಯವನ್ನು ಕಾಪಾಡದಿದ್ದರೆ ಬೇರೆ ಯಾರು ಕಾಪಾಡುತ್ತಾರೆ, ಒಂದು ರಾಜ್ಯ ವ್ಯಕ್ತಿಯೊಬ್ಬನನ್ನು ಗುರಿಯಾಗಿಟ್ಟುಕೊಂಡು ಈ ರೀತಿ ದಾಳಿ ನಡೆಸಿದರೆ ನಾವು ಬಲವಾದ ಸಂದೇಶ ರವಾನಿಸಬೇಕಾಗುತ್ತದೆ. ನಮ್ಮ ಸಂವಿಧಾನ ಅಸಾಧಾರಣ ಸ್ಥಿತಿಸ್ಥಾಪಕತ್ವವನ್ನು ಹೊಂದಿದೆ ಎಂದು ಕೋರ್ಟ್ ಮಹಾರಾಷ್ಟ್ರ ಸರ್ಕಾರದ ಮೇಲೆ ಅಸಮಾಧಾನ ವ್ಯಕ್ತಪಡಿಸಿದೆ.












Click it and Unblock the Notifications