ರೈತರ ಪ್ರತಿಭಟನೆ: ದೆಹಲಿ, ಎನ್ಸಿಆರ್ನ ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸ್ಥಗಿತ
ನವದೆಹಲಿ, ಜನವರಿ 26: ಕೇಂದ್ರ ಕೃಷಿ ಕಾಯ್ದೆ ವಿರುದ್ಧ ಆರಂಭವಾಗಿರುವ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ದೆಹಲಿ ಹಾಗೂ ಎನ್ಸಿಆರ್ನ ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ.
ಮತ್ತಷ್ಟು ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯಿಂದಿರಲು ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಸಿಂಘು, ಘಾಜಿಪುರ, ಟಿಖ್ರಿ, ಮುಕಾರ್ಬಾ ಚೌಕ್, ನಾಗ್ಲಾಯ್ ನಲ್ಲಿ ಇಂಟರ್ನೆಟ್ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕಳೆದ ಎರಡು ತಿಂಗಳಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು., ಇಂದು ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರೈತರು ಟ್ರ್ಯಾಕ್ಟರ್ ಮೆರವಣಿಗೆ ನಡೆಸುತ್ತಿದ್ದಾರೆ.
ದೆಹಲಿಯ ಐಟಿಒದಲ್ಲಿ ಪ್ರತಿಭಟನಾ ನಿರತ ರೈತರೊಂದಿಗೆ ನಡೆದ ಸಂಘರ್ಷದಲ್ಲಿ ಅನೇಕ ಪೊಲೀಸರು ಗಾಯಗೊಂಡಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.ಪ್ರತಿಭಟನೆ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ರೈತ ಮೃತಪಟ್ಟಿದ್ದಾರೆ. ಪ್ರತಿಭಟನಾ ಮೆರವಣಿಗೆ ವೇಳೆ ಘಟನೆ ನಡೆದಿದೆ.
ಬ್ಯಾರಿಕೇಡ್ ಮುರಿದು ಒಳನುಗ್ಗಿದ ಅನೇಕ ರೈತರು ಕತ್ತಿ, ದೊಣ್ಣೆಗಳನ್ನು ಹಿಡಿದು ಪೊಲೀಸರು ಹಾಗೂ ವಾಹನಗಳ ಮೇಲೆ ದಾಳಿ ಮಾಡುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ವಿವಿಧೆಡೆ ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ಮಾಡಿದ್ದಾರೆ.
ಕೆಲವೆಡೆ ಪೊಲೀಸರ ಮೇಲೆ ಕಲ್ಲುತೂರಾಟ ಕೂಡ ನಡೆದ ಘಟನೆಗಳು ವರದಿಯಾಗಿವೆ. ಕೆಲವರು ಖಡ್ಗ ಹಿಡಿದು ಪೊಲೀಸರ ಮೇಲೆ ಆಕ್ರಮಣ ಮಾಡುವುದು ವಿಡಿಯೋಗಳಲ್ಲಿ ಸೆರೆಯಾಗಿದೆ. ಐಟಿಒದಿಂದ ಖಾಲಿಟ್ರ್ಯಾಕ್ಟರ್ಗಳನ್ನು ಕಳುಹಿಸಲಾಗಿದೆ. ಗುಂಪುಗೂಡಿದ್ದ ಪ್ರತಿಭಟನಾಕಾರರನ್ನು ಚೆದುರಿಸಲಾಗಿದೆ. ಗಾಯಗೊಂಡ ಒಬ್ಬ ಪೊಲೀಸ್ ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.