Breaking: ಜಾಮೀನು ನಿರಾಕರಣೆ, ಸಿಬಿಐ ವಶಕ್ಕೆ ಪಿ.ಚಿದಂಬರಂ
ನವದೆಹಲಿ, ಆಗಸ್ಟ್ 22 : ಐಎನ್ಎಕ್ಸ್ ಮೀಡಿಯಾ ಹಗರಣಗದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಆಗಸ್ಟ್ 26 ರ ವರೆಗೆ ಸಿಬಿಐ ವಶಕ್ಕೆ ನೀಡಲಾಗಿದೆ.
ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಬುಧವಾರ ರಾತ್ರಿ ಸಿನಿಮೀಯ ರೀತಿಯಲ್ಲಿ ಬಂಧಿತರಾದ ಮಾಜಿ ಸಚಿವ ಪಿ. ಚಿದಂಬರರಂ ಅವರನ್ನು ಗುರುವಾರ ಮಧ್ಯಾಹ್ನ ಸಿಬಿಐ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಕಾಂಗ್ರೆಸ್ನ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ಅವರು ಚಿದಂಬರಂ ಅವರ ಪರ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆಗಸ್ಟ್ 26 ರ ವರೆಗೆ ಅವರನ್ನು ವಿಶೇಷ ಸಿಬಿಐ ವಶಕ್ಕೆ ನೀಡಿದೆ.

ಪಿ.ಚಿದಂಬರಂ ಅವರು ನಿರೀಕ್ಷಣಾ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಶುಕ್ರವಾರದವರೆಗೆ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸಾಧ್ಯವಿಲ್ಲವೆಂದು ಸುಪ್ರಿಂಕೋರ್ಟ್ ಹೇಳಿತ್ತು. ನಾಳೆ ಆ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದೆ.
ಚಿದಂಬರಂ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ಅದರ ಆಧಾರದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಸಿಬಿಐ, ನ್ಯಾಯಾಲಯಕ್ಕೆ ತಿಳಿಸಿತು.
ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮೌನವಾಗಿರುವುದು ಸಾಂವಿಧಾನಿಕ ಹಕ್ಕು. ಅದರ ಬಗ್ಗೆ ನಮಗೆ ತಕರಾರಿಲ್ಲ. ಆದರೆ, ಚಿದಂಬರಂ ಅವರು ಸಹಕಾರ ನೀಡುತ್ತಿಲ್ಲ. ಅವರು ಉತ್ತರಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಇದು ಅಕ್ರಮ ಹಣ ವರ್ಗಾವಣೆಯ ಪ್ರಕರಣ. ನಾವು ಚಾರ್ಜ್ ಷೀಟ್ ಸಲ್ಲಿಸುವ ಹಂತದಲ್ಲಿದ್ದೇವೆ. ಅವರು ಸಹಕಾರ ನೀಡುತ್ತಿಲ್ಲ ಎಂದು ಹೇಳಿದರು.
ಈ ಪ್ರಕರಣದ ಆರೋಪಿಯಾಗಿರುವ ಕಾರ್ತಿ ಚಿದಂಬರಂ ಅವರಿಗೆ ದೆಹಲಿ ಹೈಕೋರ್ಟ್ 2018 ರ ಮಾರ್ಚ್ನಲ್ಲಿ ಜಾಮೀನು ಮಂಜೂರು ಮಾಡಿತ್ತು. ಇತರೆ ಆರೋಪಿಗಳಿಗೂ ಜಾಮೀನು ಸಿಕ್ಕಿತ್ತು. ಆದರೆ, ಚಿದಂಬರಂ ಅವರಿಗೆ ಜಾಮೀನು ನೀಡಿಲ್ಲ ಎಂದು ಕಪಿಲ್ ಸಿಬಲ್ ವಾದಿಸಿದರು.
ಚಿದಂಬರಂ ಅವರ ಪತ್ನಿ ನಳಿನಿ ಮತ್ತು ಪುತ್ರ ಕಾರ್ತಿ ಸೇರಿದಂತೆ ಅವರ ಕುಟುಂಬದ ಸದಸ್ಯರು ನ್ಯಾಯಾಲಯದಲ್ಲಿ ಹಾಜರಿದ್ದರು.
ಸಿಬಿಐ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕಾಗಿದ್ದು, ಅದಕ್ಕಾಗಿ ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಕೋರಿತ್ತು.
ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ನಿಯಮ ಮೀರಿ ವಿದೇಶಿ ಬಂಡಾವಾಳ ಹೂಡಿಕೆಗೆ ಅನುಮತಿ ದೊರಕಿಸಿಕೊಟ್ಟಿದ್ದಲ್ಲದೆ, ಅದಕ್ಕೆ ಪ್ರತಿಫಲವಾಗಿ ಕಿಕ್ ಬ್ಯಾಕ್ ಪಡೆದ ಆರೋಪ ಚಿದಂಬರಂ ಅವರ ಮೇಲಿದೆ.












Click it and Unblock the Notifications