ಐಎನ್ಎಕ್ಸ್ ಮೀಡಿಯಾ ಕೇಸ್: ಪಿ ಚಿದಂಬರಂಗೆ ಬಂಧನ ಭೀತಿ
ನವದೆಹಲಿ, ಆಗಸ್ಟ್ 20: ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣ, ವಿಮಾನ ಖರೀದಿ ಅವ್ಯವಹಾರದಲ್ಲಿ ಸಿಲುಕಿರುವ ಮಾಜಿ ವಿತ್ತ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂಗೆ ಈಗ ಬಂಧನ ಭೀತಿ ಶುರುವಾಗಿದೆ. ಐಎನ್ಎಕ್ಸ್ ಮೀಡಿಯಾ ಕೇಸಿಗೆ ಸಂಬಂಧಿಸಿದಂತೆ ಬಂಧನದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ಚಿದಂಬರಂ ಅವರ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರದಂದು ತಿರಸ್ಕರಿಸಿದೆ.
ಚಿದಂಬರಂ ಹಾಗೂ ಕಾರ್ತಿ ಚಿದಂಬರಂ ಅವರನ್ನು ಬಂಧಿಸದಂತೆ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಈ ಹಿಂದೆ ದೆಹಲಿ ಕೋರ್ಟ್ ಸೂಚಿಸಿತ್ತು. ಆದರೆ, ಈಗ ಮನಿಲಾಂಡ್ರಿಂಗ್ ಹಾಗೂ ಭ್ರಷ್ಟಾಚಾರ ಕೇಸಿಗೆ ಸಂಬಂಧಿಸಿದಂತೆ ಚಿದಂಬರಂ ಅರ್ಜಿಯನ್ನು ವಜಾಗೊಳಿಸಿ ದೆಹಲಿ ಹೈಕೋರ್ಟ್ ಜಸ್ಟೀಸ್ ಸುನೀಲ್ ಗೌರ್ ಆದೇಶ ಹೊರಡಿಸಿದ್ದಾರೆ.
ಸಿಬಿಐ ಪ್ರಕಾರ, ಮಾರಿಷಿಯಸ್ ಮೂಲದ- ಮ್ಯಾಕ್ಸಿಸ್ ನ ಸಹವರ್ತಿ ಗ್ಲೋಬಲ್ ಕಮ್ಯೂನಿಕೇಷನ್ ಸರ್ವೀಸಸ್ ಹೋಲ್ಡಿಂಗ್ಸ್ ನಿಂದ ಏರ್ ಸೆಲ್ ಟೆಲಿಕಾಂನಲ್ಲಿ ಎಂಟುನೂರು ಮಿಲಿಯನ್ ಅಮೆರಿಕನ್ ಡಾಲರ್ ನಷ್ಟು ಹೂಡಿಕೆ ಮಾಡಲು ಅನುಮತಿ ಕೇಳಲಾಗಿತ್ತು. ಅದಕ್ಕೆ ಅನುಮತಿ ಪ್ರಧಾನಿ ಅಧ್ಯಕ್ಷರಾಗಿರುವ ಆರ್ಥಿಕ ವ್ಯವಹಾರಗಳ ಸದನ ಸಮಿತಿಯಿಂದ ಬರಬೇಕಿತ್ತು. ಆದರೆ ಹಣಕಾಸು ಸಚಿವಾಲಯವು ಅನುಮತಿ ಕೊಟ್ಟಿತ್ತು. ಆಗ ಅದರ ನೇತೃತ್ವ ವಹಿಸಿದ್ದವರು ಚಿದಂಬರಂ.

ಕಾರ್ತಿ ಚಿದಂಬರಂಗೆ ನಂಟಿರುವ ಕಂಪೆನಿ
ಹಣಕಾಸು ಸಚಿವಾಲಯಕ್ಕೆ ಆರು ನೂರು ಕೋಟಿವರೆಗಿನ ಹೂಡಿಕೆಗೆ ಅನುಮತಿ ನೀಡುವ ಅಧಿಕಾರ ಮಾತ್ರ ಇರುತ್ತದೆ. ಸಿಬಿಐ ಆರೋಪಿಸುವಂತೆ, ಅನುಮತಿ ಸಿಕ್ಕ ನಂತರ ಏರ್ ಸೆಲ್ ಟೆಲಿವೆಂಚರ್ಸ್ ನಿಂದ ಕಾರ್ತಿ ಚಿದಂಬರಂಗೆ ನಂಟಿರುವ ಕಂಪೆನಿಗೆ ಇಪ್ಪತ್ತಾರು ಲಕ್ಷ ಪಾವತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಕಾರ್ತಿ ಹಾಗೂ ಅವರ ಸಂಸ್ಥೆಗೆ ಸಂಬಂಧಿಸಿದ 1.16 ಕೋಟಿ ರುಪಾಯಿಯನ್ನು ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿತ್ತು.

2007ರಲ್ಲಿ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ
2007ರಲ್ಲಿ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ (Foreign Investment Promotion Board)ಯಿಂದ 4.62 ಕೋಟಿ ರುಪಾಯಿ ಹೂಡಿಕೆ ಮಾಡಲು ಅನುಮೋದನೆ ಸಿಕ್ಕಿತ್ತು. ಆದರೆ ಮಾರಿಷಸ್ ನ ಎರಡು ಕಂಪನಿಗಳಿಂದ ಪೀಟರ್ ಮತ್ತು ಇಂದ್ರಾಣಿ ಒಡೆತನದ ಕಂಪನಿ ಐಎನ್ಎಕ್ಸ್ ಮೀಡಿಯಾ ಪಡೆದದ್ದು 305 ಕೋಟಿ ರುಪಾಯಿಗಳು. ಇದರ ವಿರುದ್ಧ ಕಂದಾಯ ಇಲಾಖೆ ವಿಚಾರಣೆಗೆ ಆದೇಶಿಸಿತ್ತು. ಈ ವಿಚಾರಣೆಯನ್ನು ತಪ್ಪಿಸಲು ಕಾರ್ತಿ ಅವರು ತಮ್ಮ ಕಂಪನಿಯ ಮೂಲಕ ಐಎನ್ಎಕ್ಸ್ ಮೀಡಿಯಾ ಕಂಪನಿಯಿಂದ 10 ಲಕ್ಷ ರುಪಾಯಿ ಕಮಿಷನ್ ಪಡೆದಿದ್ದರು.

ಕಾರ್ತಿ ಉಮೇದುವಾರಿಕೆಗೆ ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ
ಮಾಜಿ ಕೇಂದ್ರ ಸಚಿವ ಇ.ಎಂ. ಸುದರ್ಶನ ನಚಿಯಪ್ಪನ್, ಕಾರ್ತಿ ಉಮೇದುವಾರಿಕೆಗೆ ಭಾರಿ ವಿರೋಧ ವ್ಯಕ್ತಪಡಿಸಿದ್ದರು, 1999ರಲ್ಲಿ ತಮಿಳ್ ಮಾನಿಲಾ ಕಾಂಗ್ರೆಸ್ನಲ್ಲಿದ್ದ ನಾಚಿಯಪ್ಪನ್, ಆಗ ಕಾರ್ತಿಯ ತಂದೆ, ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಸೋಲಿಸಿದ್ದರು. 2014ರ ಚುನಾವಣೆಯಲ್ಲಿ ಕಾರ್ತಿ ಚಿದಂಬರಂ ಸೋಲು ಅನುಭವಿಸಿದ್ದರು. ಐಎನ್ಎಕ್ಸ್ ಮೀಡಿಯಾದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸೇರಿದಂತೆ ಅನೇಕ ಕ್ರಿಮಿನಲ್ ಪ್ರಕರಣಗಳು ಅವರ ಮೇಲಿದೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾರ್ತಿ ಅವರು ಶಿವಗಂಗಾ ಕ್ಷೇತ್ರದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದರು.

ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಮನವಿ
ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಪ್ರಕರಣದಲ್ಲಿ ಚಿದಂಬರಂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಂಬಂಧಿಸಿದ ಅಧಿಕಾರಿಗಳಿಂದ ದೊರೆತ ಅನುಮತಿಯನ್ನು ಕೋರ್ಟ್ಗೆ ಸಲ್ಲಿಸಿದರು. ಈ ಪ್ರಕರಣದಲ್ಲಿ ಒಟ್ಟು 18 ಆರೋಪಿಗಳಿದ್ದು, ಅವರಲ್ಲಿ ಆರು ಮಂದಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ. ಉಳಿದ ಐದು ಮಂದಿ ವಿರುದ್ಧವೂ ವಿಚಾರಣೆಗೆ ಈ ಸಂಬಂಧ ಅನುಮತಿ ಪಡೆದುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಕೋರ್ಟಿಗೆ ವಿವರಿಸಿದರು.












Click it and Unblock the Notifications