ಯಾರ ಪರ ನಿಲ್ಲಬೇಕೆಂಬ ನಿರ್ಧಾರಕ್ಕೆ ಸಮಯ ಬಂದಿದೆ; ರಾಹುಲ್
ನವದೆಹಲಿ, ಜನವರಿ 29: ಗಣರಾಜ್ಯೋತ್ಸವ ದಿನದಂದು ರಾಜಧಾನಿ ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ಜಾಥಾ ಸಂದರ್ಭ ನಡೆದ ಹಿಂಸಾಚಾರದ ಬೆನ್ನಲ್ಲೇ ದೆಹಲಿಯ ಸಿಂಘು ಹಾಗೂ ಘಾಜಿಪುರ ಗಡಿಗಳಲ್ಲಿ ಭದ್ರತಾ ಪಡೆ ನಿಯೋಜಿಸಲಾಗಿದೆ.
ಆದರೆ ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರನ್ನು ಜಾಗ ಖಾಲಿ ಮಾಡುವಂತೆ ತೊಂದರೆ ನೀಡಲಾಗುತ್ತಿದೆ, ಅವರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಗುರುವಾರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದರು.
ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, "ಯಾರ ಕಡೆ ಇರಬೇಕು ಎಂದು ನಿರ್ಧರಿಸುವ ಸಮಯ ಬಂದಿದೆ. ನಾನು ನನ್ನ ನಿರ್ಧಾರದಲ್ಲಿ ಸ್ಪಷ್ಟವಾಗಿದ್ದೇನೆ. ನಾನು ಪ್ರಜಾಪ್ರಭುತ್ವ, ರೈತ ಹಾಗೂ ಶಾಂತಿಯುತ ಪ್ರತಿಭಟನೆ ಕಡೆಗೆ ನಿಲ್ಲಲಿದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ.

"ಬುಧವಾರ ಮಧ್ಯರಾತ್ರಿಯಿಂದಲೂ ಒತ್ತಾಯದಿಂದ ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ದೆಹಲಿ ಗಡಿಗಳಲ್ಲಿ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವದ ನೀತಿಯ ವಿರುದ್ಧವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ರೈತರ ಪರ ನಿಲ್ಲುತ್ತದೆ. ಅವರಿಗೆ ಹಿಂಸೆ ನೀಡುವವರು ದೇಶದ್ರೋಹಿಗಳು" ಎಂದು ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದರು.
ಗಣರಾಜ್ಯೋತ್ಸವದಲ್ಲಿ ಗಲಭೆ ಎಬ್ಬಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಆದರೆ ಶಾಂತಿಯುತವಾಗಿ ಹೋರಾಡುತ್ತಿರುವ ರೈತರಿಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದರು.
ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೆಲ್ಲರೂ ವಾಪಸ್ಸಾಗಬೇಕೆಂದು ಉತ್ತರ ಪ್ರದೇಶ ಸರ್ಕಾರ ಜಿಲ್ಲಾಡಳಿತಗಳಿಗೆ ಆದೇಶ ನೀಡಿದ ಬೆನ್ನಲ್ಲೇ ಈ ಅಭಿಪ್ರಾಯಗಳು ವ್ಯಕ್ತಗೊಂಡಿವೆ. ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪರೇಡ್ ಸಂದರ್ಭ ಗಲಭೆ ನಡೆದ ಎರಡು ದಿನಗಳ ನಂತರ ಈ ಆದೇಶ ಹೊರಡಿಸಲಾಗಿದೆ.












Click it and Unblock the Notifications