ದೆಹಲಿ ಪೊಲೀಸರ ವಿರುದ್ಧ 1 ಕೋಟಿ ಪರಿಹಾರ ನೀಡುವಂತೆ ಕೇಸ್
ನವದೆಹಲಿ, ಫೆಬ್ರವರಿ.27: ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಲಾಠಿಚಾರ್ಜ್ ವೇಳೆ ಗಾಯಗೊಂಡ ವಿದ್ಯಾರ್ಥಿಯೊಬ್ಬರು ಕನಿಷ್ಠ 1 ಕೋಟಿ ರೂಪಾಯಿ ಪರಿಹಾರ ನೀಡುವಂತೆ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾನೆ.
ಮೊಹದ್ ಮುಸ್ತಫಾ ಎಂಬ ವಿದ್ಯಾರ್ಥಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾ. ಸಿ. ಹರಿಶಂಕರ್ ನೇತೃತ್ವದ ದ್ವಿಸದಸ್ಯ ಪೀಠ ಕೇಂದ್ರ ಗೃಹ ಸಚಿವಾಲಯ, ದೆಹಲಿ ಸರ್ಕಾರ ಹಾಗೂ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ.
ಗ್ರಂಥಾಲಯದಲ್ಲಿದ್ದವರು ಕಲ್ಲು ತೂರಾಟಗಾರರು: ಬಿಜೆಪಿ
ಮೊಹದ್ ಮುಸ್ತಫಾ ಎಂಬ ಅರ್ಜಿದಾರ ಮಾಡಿರುವ ಆರೋಪಕ್ಕೆ ಉತ್ತರ ನೀಡುವಂತೆ ಕೋರ್ಟ್ ಸೂಚಿಸಿದೆ. ಇದರ ಜೊತೆಗೆ ರಕ್ಷಣಾ ಪಡೆ ವಿರುದ್ಧ ಎಫ್ಐಆರ್ ದಾಖಲಿಸಲು ಅರ್ಜಿದಾರರು ಮುಂದಾಗಿದ್ದು, ಈ ಬಗ್ಗೆ ನಿಮ್ಮ ನಿಲುವು ಏನು ಎಂದು ಹೈಕೋರ್ಟ್ ಪ್ರಶ್ನೆ ಮಾಡಿದೆ. ಈ ಪ್ರಕರಣದ ವಿಚಾರಣೆಯನ್ನು ಮೇ.20ಕ್ಕೆ ಕೋರ್ಟ್ ಮುಂದೂಡಿದೆ.
ಜಾಮಿಯಾ ವಿವಿ ಲೈಬ್ರರಿಯಲ್ಲಿ ಕುಳಿತವರ ಮೇಲೆ ಹಲ್ಲೆ ಆರೋಪ:
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ನಡೆಯುತ್ತಿದ್ದ ಪ್ರತಿಭಟನೆ ಉಗ್ರ ರೂಪಕ್ಕೆ ತಿರುಗಿತ್ತು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ನಂತರದಲ್ಲಿ ಲೈಬ್ರರಿಗೆ ರಕ್ಷಣಾ ಪಡೆಯ ಸಿಬ್ಬಂದಿ ನುಗ್ಗಿ ಓದುತ್ತಾ ಕುಳಿತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಜಾಮಿಯಾ ವಿಶ್ವವಿದ್ಯಾಲಯದ ಸಮನ್ವಯ ಸಮಿತಿಯ ಸಿಸಿ ಕ್ಯಾಮರಾ ದೃಶ್ಯಾವಳಿಗಳ ಸಮೇತ ಆರೋಪಿಸಿತ್ತು.
ಕಳೆದ ಡಿಸೆಂಬರ್.15ರಂದು ರಕ್ಷಣಾ ಪಡೆ ಸಿಬ್ಬಂದಿ ನಡೆಸಿದ ಹಲ್ಲೆಯಿಂದ ಗಾಯಗೊಂಡಿರುವ ತಮಗೆ ಕನಿಷ್ಠ 1 ಕೋಟಿ ರೂಪಾಯಿ ಪರಿಹಾರ ನೀಡುವಂತೆ ವಿದ್ಯಾರ್ಥಿ ಮೊಹದ್ ಮುಸ್ತಫಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.