ಜಾಮಿಯಾ ವಿವಿ ಬಳಿ ಬೆಂಕಿ ಹಚ್ಚಿದವರ ತಲೆಗೆ 1 ಲಕ್ಷ ರೂಪಾಯಿ ಬಹುಮಾನ!
ನವದೆಹಲಿ, ಫೆಬ್ರವರಿ.10: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಪ್ರತಿಭಟನೆ ನಡೆಸಿದ್ದೇ ನಡೆಸಿದ್ದು. ಕೆಲವರು ಪ್ರತಿಭಟನಾಕಾರರ ಸೋಗಿನಲ್ಲಿ ಬಂದು ಬೈಕ್, ಕಾರ್ ಗಳಿಗೆ ಬೆಂಕಿ ಹಚ್ಚಿದ್ದರು. ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟ ಉಂಟು ಮಾಡಿದ್ದರು.
ಕಳೆದ ಡಿಸೆಂಬರ್ ನಲ್ಲಿ ನವದೆಹಲಿಯ ಜಾಮಿಯಾ ವಿಶ್ವವಿದ್ಯಾಲಯದ ಬಳಿ ನಡೆದ ಹಿಂಸಾಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಣೆ ಮಾಡಿದ್ದಾರೆ.
ನವದೆಹಲಿ ಹಿಂಸಾಚಾರ: ಪೊಲೀಸರ ವಾಹನಕ್ಕೆ ಬೆಂಕಿ
ಕೇಂದ್ರ ಸರ್ಕಾರದ ವಿರುದ್ಧ ನಡೆದ ಹೋರಾಟವನ್ನು ಮೂವರು ದುಷ್ಕರ್ಮಿಗಳು ಹಿಂಸಾಚಾರಕ್ಕೆ ಬಳಸಿಕೊಂಡಿದ್ದರು. ಒಂದೆಡೆ ಸಿಎಎ ಮತ್ತು ಎನ್ಆರ್ ಸಿ ವಿರುದ್ಧ ಹೋರಾಟ ನಡೆಸುತ್ತಿದ್ದರೆ, ಮೂವರು ದುಷ್ಕರ್ಮಿಗಳು ಬೈಕ್ ನಲ್ಲಿದ್ದ ಪೆಟ್ರೋಲ್ ತೆಗೆದು ವಾಹನಗಳಿಗೆ ಬೆಂಕಿ ಹಚ್ಚುವುದರಲ್ಲೇ ಬ್ಯುಸಿ ಆಗಿದ್ದರು.
ಸಿಸಿ ಕ್ಯಾಮರಾದಲ್ಲಿ ಸಿಕ್ಕಿದ್ದು ದೃಶ್ಯಸಾಕ್ಷ್ಯ:
ನವದೆಹಲಿಯ ಜಾಮಿಯಾ ವಿಶ್ವವಿದ್ಯಾಲಯದ ಬಳಿ ನಡೆದ ಹಿಂಸಾಚಾರಕ್ಕೆ ಕಾರಣರಾದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಗುರುತುಪಡಿಸಿಕೊಂಡಿದ್ದಾರೆ. ಈ ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ 1 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಣೆ ಮಾಡಿದ್ದಾರೆ. ಡಿಸೆಂಬರ್ ನಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಬೈಕ್ ನಲ್ಲಿದ್ದ ಪೆಟ್ರೋಲ್ ತೆಗೆದು ಬಸ್ ಗಳಿಗೆ ಬೆಂಕಿ ಹಚ್ಚಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.