ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಜೆಪಿ ನಡ್ಡಾ ನೇಮಕ
ನವದೆಹಲಿ, ಜೂನ್ 17: ಬಿಜೆಪಿಯ ಹಿರಿಯ ಮುಖಂಡ ಜೆ.ಪಿ. ನಡ್ಡಾ ಅವರನ್ನು ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೋಮವಾರ ಪ್ರಕಟಿಸಿದರು.
ಹಿಮಾಚಲ ಪ್ರದೇಶದವರಾದ 58 ವರ್ಷದ ನಡ್ಡಾ, ಕೇಂದ್ರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಅವರು ಕಾರ್ಯಾಧ್ಯಕ್ಷರ ಹುದ್ದೆಯಲ್ಲಿ ಹುದ್ದೆಯಲ್ಲಿ ಆರು ತಿಂಗಳು ಇರಲಿದ್ದಾರೆ.
ಸೋಮವಾರ ಮುಂಗಾರು ಅಧಿವೇಶನದ ಬಳಿಕ ನಡೆದ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು. ಸಭೆ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ನಿರ್ಧಾರ ಪ್ರಕಟಿಸಿದರು.
ಮೋದಿ ಸಂಪುಟಕ್ಕೆ ಅಮಿತ್, ಅಧ್ಯಕ್ಷ ಸ್ಥಾನಕ್ಕೆ ಯಾರು ಸೂಕ್ತ?
ಪಕ್ಷದ ಚುನಾವಣಾ ಕಾರ್ಯತಂತ್ರ ರೂಪಿಸುವ ಪ್ರಮುಖರಲ್ಲಿ ಒಬ್ಬರಾಗಿರುವ ಜೆಪಿ ನಡ್ಡಾ ಅವರ ಹೆಸರು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಹಲವು ದಿನಗಳಿಂದ ಕೇಳಿಬರುತ್ತಿತ್ತು. ಪಕ್ಷದ ಸಂಸದೀಯ ಮಂಡಳಿ ಸಭೆ ಬಳಿಕ ನಡ್ಡಾ ಅವರನ್ನು ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಪ್ರಕಟಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್, ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಪ್ರಮುಖರು ನಡ್ಡಾ ಅವರನ್ನು ಅಭಿನಂದಿಸಿದರು.
ಒಬ್ಬ ವ್ಯಕ್ತಿ ಒಂದು ಹುದ್ದೆ
ಸದ್ಯಕ್ಕೆ ಗೃಹ ಸಚಿವ ಅಮಿತ್ ಶಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಅಮಿತ್ ಶಾ ಅವರ ಅಧ್ಯಕ್ಷೀಯ ಅವಧಿಯು 2019ರ ಡಿಸೆಂಬರ್ಗೆ ಅಂತ್ಯಗೊಳ್ಳಲಿದೆ. ಪಕ್ಷದ 'ಒಬ್ಬ ವ್ಯಕ್ತಿ, ಒಂದು ಹುದ್ದೆ' ನಿಯಮವನ್ನು ಮೀರಿ ಅವರನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವ ಸಾಧ್ಯತೆ ಕಡಿಮೆ.
ಬಿಜೆಪಿಯ ಮುಂದಿನ ರಾಷ್ಟ್ರಾಧ್ಯಕ್ಷರು ಯಾರು? ಜೂನ್ 13 ರಂದು ನಿರ್ಧಾರ?
ಮೊದಲ ಬಾರಿಗೆ ಕಾರ್ಯನಿರತ ಅಧ್ಯಕ್ಷ ಹುದ್ದೆ
ಮೂಲಗಳ ಪ್ರಕಾರ ಪಕ್ಷದ ಸಂಸದೀಯ ಮಂಡಳಿಯು ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯ ಹಾಗೂ ಸಾಂಸ್ಥಿಕ ಚುನಾವಣೆ ಪೂರ್ಣಗೊಳ್ಳುವವರೆಗೂ ಅಮಿತ್ ಶಾ ಅವರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಮನವಿ ಮಾಡಿತ್ತು. ಆದರೆ, ಗೃಹ ಸಚಿವರಾಗಿ ಅಮಿತ್ ಶಾ ಅವರಿಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಹೊರೆ ಹೆಚ್ಚಾಗಲಿದೆ. ಈ ಕಾರಣದಿಂದ ಇದೇ ಮೊದಲ ಬಾರಿಗೆ ಪಕ್ಷದಲ್ಲಿ ರಾಷ್ಟ್ರೀಯ ಕಾರ್ಯಾಧ್ಯಕ್ಷರ ಹುದ್ದೆಗೆ ನೇಮಕ ಮಾಡಲಾಗಿದೆ.
ಸಂಸದೀಯ ಮಂಡಳಿ ಕಾರ್ಯದರ್ಶಿ
ಪ್ರಸ್ತುತ ಬಿಜೆಪಿ ಸಂಸದೀಯ ಮಂಡಳಿ ಕಾರ್ಯದರ್ಶಿಯಾಗಿರುವ ನಡ್ಡಾ, ಬಿಜೆಪಿಯ ಸಾಂಸ್ಥಿಕ ಚುನಾವಣೆ ಮುಗಿಯುವವರೆಗೂ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಅಮಿತ್ ಶಾ ಅವರ ಅವಧಿ ಮುಗಿದ ಬಳಿಕ ಅಧ್ಯಕ್ಷ ಹುದ್ದೆಗೆ ನೇಮಕಗೊಳ್ಳಲಿದ್ದಾರೆ ಎನ್ನಲಾಗಿದೆ.
ಉತ್ತರ ಪ್ರದೇಶ ಉಸ್ತುವಾರಿ
ನಡ್ಡಾ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಹೊಣೆಗಾರಿಕೆ ನೀಡಲಾಗಿತ್ತು. ಅಲ್ಲಿ ಅವರು 80 ಕ್ಷೇತ್ರಗಳ ಪೈಕಿ ಬಿಜೆಪಿಗೆ 62 ಸ್ಥಾನಗಳನ್ನು ಗೆಲ್ಲಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು. ಮೂರು ಬಾರಿ ಎಂಎಲ್ಎ ಆಗಿರುವ ಅವರು, ರಾಜ್ಯಸಭೆಯಲ್ಲಿ ಹಿಮಾಚಲಪ್ರದೇಶವನ್ನು ಪ್ರತಿನಿಧಿಸುತ್ತಿದ್ದಾರೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಂದ್ರ ಆರೋಗ್ಯ ಸಚಿವರಾಗಿದ್ದರು.