ರಾಜ್ಯ ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಕಾಂಗ್ರೆಸ್ ಶಾಸಕರಿಂದ ಲಾಬಿ
ನವದೆಹಲಿ, ಅ.25: ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ/ಪುನರ್ ರಚನೆ ಯಾವುದೇ ಅಡ್ಡಿ ಆತಂಕವಿಲ್ಲದೆ, ರಾಹು ಕಾಲ, ಯಮಗಂಡಕಾಲ, ಶುಭ ಮುಹೂರ್ತ ಲೆಕ್ಕಾಚಾರವಿಲ್ಲದೆ ನಡೆದೇ ನಡೆಯುತ್ತದೆ ಎಂಬ ಆತ್ಮವಿಶ್ವಾಸವನ್ನು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಅವರು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಜೊತೆ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಲು ಜಿ ಪರಮೇಶ್ವರ ಅವರು ದೆಹಲಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ದೆಹಲಿಗೆ ತೆರಳಲಿದ್ದಾರೆ. ಸೋಮವಾರ ಬಹುತೇಕ ಕಾಂಗ್ರೆಸ್ ಹೈಕಮಾಂಡ್ ನ ಪ್ರಮುಖ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ.

ಆಕಾಂಕ್ಷಿಗಳಿಂದ ಲಾಬಿ: ಸಚಿವ ಸಂಪುಟ ವಿಸ್ತರಣೆಯಾಗುವುದೋ ಪುನರ್ ರಚನೆಯಾಗುವುದೋ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿಯಂತೂ ಜೋರಾಗಿ ನಡೆದಿದೆ. ಕೇವಲ ವಿಸ್ತರಣೆಯಾದರೆ ಇರುವ ಮುರ್ನಾಲ್ಕು ಸ್ಥಾನಕ್ಕೆ 15 ರಿಂದ 20 ಜನ ಶಾಸಕರು ಮುಗಿಬೀಳುತ್ತಿರುವುದೇಕೆ ಎಂಬ ಪ್ರಶ್ನೆ ಹುಟ್ಟುತ್ತದೆ. ಸದ್ಯಕ್ಕಂತೂ ಕಾಂಗ್ರೆಸ್ ಶಾಸಕರು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರೆ.
ಈ ನಡುವೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ವಿವಿಧ ನಾಯಕರುಗಳು ಭೇಟಿ ಮಾಡಿ ತಮ್ಮ ಪರವಾಗಿ ಹೈಕಮಾಂಡ್ಗೆ ಶಿಫಾರಸು ಮಾಡುವಂತೆ ಒತ್ತಡ ಹೇರಿದ್ದಾರೆ. ಅಲ್ಲಿಂದ ಶಾಸಕರ ದಂಡು ಈಗ ದೆಹಲಿ ತಲುಪಿದೆ. ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅವರು ಹೈಕಮಾಂಡ್ ಜೊತೆ ಚರ್ಚಿಗಿಳಿಯುವ ಮುನ್ನ ಎಷ್ಟು ಬಾರಿ ಸಾಧ್ಯವೋ ಅಷ್ಟು ಬಾರಿ ಸಲಾಂ ಹೊಡೆಯುವ ಕಾಯಕದಲ್ಲಿ ಶಾಸಕರು ನಿರತರಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ? : ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ನೀಡಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ಕೆಎಚ್ ಮುನಿಯಪ್ಪ ಅವರು ಸಮರ್ಥರು ಎಂದಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಸಿದ್ದರಾಮಯ್ಯ ಅವರು ಬಂದ ಮೇಲೆ ಇಬ್ಬರು ಸೇರಿ ಪಕ್ಷದ ಹಿರಿಯ ನಾಯಕರ ಜೊತೆ ಚರ್ಚಿಸುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷ ಸದೃಢಗೊಳ್ಳಬೇಕು. ಬೇರೆ ಬೇರೆ ಕಾರಣಗಳಿಂದ ಸಂಪುಟ ವಿಸ್ತರಣೆ ವಿಳಂಬವಾಗಿದೆ. ನನಗೆ ಯಾವ ಹುದ್ದೆ ನೀಡಬೇಕು ಎಂಬುದು ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಹೇಳಿದರು.












Click it and Unblock the Notifications