ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ದಾವೆ ವಜಾಗೊಳಿಸಿದ ಸುಪ್ರೀಂ
ನವದೆಹಲಿ, ಮೇ 10: ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆ ವಿರುದ್ಧ ರಾಷ್ಟ್ರೀಯ ಹಿಂದು ಸೇನಾ ಮುಖಂಡ ಪ್ರಮೋದ್ ಮುತಾಲಿಕ್ ಹೂಡಿದ್ದ ದಾವೆಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸುಪ್ರೀಂ ಕೋರ್ಟಿನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದ ತ್ರಿಸದಸ್ಯ ಪೀಠ ಈ ಅರ್ಜಿಯನ್ನು ವಜಾಗೊಳಿಸಿದೆ.
ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಸುಪ್ರೀಂನಲ್ಲಿ ದಾವೆ ಹೂಡಿದ ಮುತಾಲಿಕ್
'ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಧರ್ಮದ ಹೆಸರಿನಲ್ಲಿ ಮತಕೇಳಲಾಗುತ್ತಿದೆ' ಎಂದು ದೂರಿದ್ದ ಅವರು, 'ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಎಲ್ಲರನ್ನೂ ಸ್ಪರ್ಧೆಯಿಂದ ಅನರ್ಹಗೊಳಿಸುವಂತೆ' ಮನವಿ ಮಾಡಿದ್ದರು.
ಇತ್ತೀಚೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ, ಹಲವು ಯೋಜನೆಗಳನ್ನು ಧರ್ಮದ ಆಧಾರದ ಮೇಲೆ ಹಂಚಲಾಗಿದೆ. ಮುಸ್ಲಿಮರು ಮತ್ತು ಅಲ್ಪಸಂಖ್ಯಾತ ಮತಕ್ಕಾಗಿ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ತಾರತಮ್ಯ ಮಾಡಿದೆ ಎಂದು ಮುತಾಲಿಕ್ ದೂರಿದ್ದರು. ಇದು ಭಾರತೀಯ ಸಂವಿಧಾನದ ವಿಧಿ 15 ಮತ್ತು 27ರ ಪ್ರಕಾರ ಅಪರಾಧವಾಗುತ್ತದಾದ್ದರಿಂದ ಕ್ರಮ ಕೈಗೊಳ್ಳುವಂತೆ ಕೋರಿದ್ದರು.