ಶಾಸಕರ ಫಾರಿನ್ ಪ್ರವಾಸಕ್ಕೆ ರಾಹುಲ್ ಗಾಂಧಿ ತಡೆ!

ರಾಜ್ಯದ 100 ತಾಲೂಕುಗಳಲ್ಲಿ ಬರ ಪರಿಸ್ಥಿತಿ, ರಾಜ್ಯದ ಆರ್ಥಿಕ ಸ್ಥಿತಿ ಸಂಕಷ್ಟದಲ್ಲಿದ್ದರೂ ಶಾಸಕರು ವಿದೇಶ ಪ್ರವಾಸಕ್ಕೆ ಹೊರಟಿರುವುದು ತೀವ್ರ ಟೀಕೆಗೆ ಗುರಿಯಾಗಿತ್ತು. ವಿಧಾನಮಂಡಲದ ವಿವಿಧ ಸಮಿತಿಗಳು ವಿದೇಶ ಪ್ರವಾಸ ಕೈಗೊಳ್ಳಲು ಸಜ್ಜಾಗಿದ್ದು, ಸ್ಪೀಕರ್ ಅನುಮತಿಗಾಗಿ ಕಾದು ಕುಳಿತಿದ್ದವು. ಸದ್ಯ ಹೈ ಕಮಾಂಡ್ ಮಟ್ಟದಿಂದಲೇ ಪ್ರವಾಸಕ್ಕೆ ಸಿಎಂ ಸಿದ್ದರಾಮಯ್ಯ ತಡೆ ತರುವಲ್ಲಿ ಯಶಸ್ವಿಯಾಗಿದ್ದಾರೆ.[ಅಧ್ಯಯನಕ್ಕಾಗಿ ವಿದೇಶಕ್ಕೆ ಹೊರಟ ಶಾಸಕರು!]
ನವದೆಹಲಿಯಲ್ಲಿ ರಾಹುಲ್ ಗಾಂಧಿ ಶುಕ್ರವಾರ ಕಾಂಗ್ರೆಸ್ ಮುಖ್ಯಮಂತ್ರಿಗಳ ಸಭೆ ನಡೆಸಿದರು. ಸಭೆಗೂ ಮುನ್ನ ಕರ್ನಾಟಕ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ಮಾಹಿತಿ ನೀಡಿದರು. ಈ ವೇಳೆ ಶಾಸಕರ ವಿದೇಶ ಪ್ರವಾವನ್ನು ರದ್ದುಗೊಳಿಸುವಂತೆ ಸಿಎಂಗೆ ರಾಹುಲ್ ಸೂಚನೆ ನೀಡಿದ್ದಾರೆ.
ಕರ್ನಾಟಕದ ಶಾಸಕರು ಅಧ್ಯಯನದ ಹೆಸರಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ರಾಷ್ಟ್ರೀಯ ವಾಹಿನಿಗಳಲ್ಲೂ ಚರ್ಚೆ ನಡೆದಿತ್ತು. ಸಿಎಂ ಸಿದ್ದರಾಮಯ್ಯ ಅವರ ಜೊತೆ ಈ ಕುರಿತು ಮಾಹಿತಿ ಪಡೆದ ರಾಹುಲ್ ಗಾಂಧಿ, ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವಾಗ ಪ್ರವಾಸ ಕೈಗೊಳ್ಳುವುದು ಸರಿಯಲ್ಲ. ಶಾಸಕರ ವಿದೇಶ ಪ್ರವಾಸವನ್ನು ರದ್ದುಗೊಳಿಸಿ ಎಂದು ತಿಳಿಸಿದ್ದಾರೆ. [ಶಾಸಕರ ವಿದೇಶ ಪ್ರವಾಸ ಖಚಿತ]
ಗುರುವಾರ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಶಾಸಕರ ವಿದೇಶ ಪ್ರವಾಸವನ್ನು ಸಮರ್ಥಿಸಿಕೊಂಡಿದ್ದರು. ಅದು ಸಮಿತಿಗಳು ಕೈಗೊಂಡ ನಿರ್ಣಯ ಎಂದು ಹೇಳಿದ್ದರು. ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಸಹ ಶಾಸಕರು ವಿದೇಶ ಪ್ರವಾಸ ಹೋಗುವುದು ಖಂಡಿತ. ಈ ಬಾರಿ ಅಂತಹ ಬರಪರಿಸ್ಥಿತಿ ರಾಜ್ಯದಲ್ಲಿಲ್ಲ ಎಂದು ಹೇಳುವ ಮೂಲಕ ಸಮರ್ಥನೆ ನೀಡಿದ್ದರು.
ಸದ್ಯ ಕಾಂಗ್ರೆಸ್ ಉಪಾಧ್ಯಕ್ಷರೇ ಶಾಸಕರ ಪ್ರವಾಸಕ್ಕೆ ಬ್ರೇಕ್ ಹಾಕಿದ್ದಾರೆ. ಇದರಿಂದ ಅಧ್ಯಯನ ಮಾಡಲು ವಿದೇಶಕ್ಕೆ ಹೋಗುವ ಶಾಸಕರ ಕನಸಿಗೆ ತಣ್ಣೀರು ಸುರಿದಂತಾಗಿದ್ದು, ವಿದೇಶ ಪ್ರವಾಸಕ್ಕೆ ಬ್ರೇಕ್ ಬಿದ್ದಿದೆ.












Click it and Unblock the Notifications