ಪಶ್ಚಿಮಘಟ್ಟ ಕಸ್ತೂರಿ ರಂಗನ್ ವರದಿಗೆ ತಡೆ- ಸಂಜಯ್ ಕುಮಾರ್ ನೇತೃತ್ವದ ಹೊಸ ಸಮಿತಿ ಸರ್ವೆ!
ನವದೆಹಲಿ, ಜುಲೈ 26 : ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದ ನಿಯೋಗ ಭೇಟಿ ಭೇಟಿ ಮಾಡಿದೆ.
ಕಸ್ತೂರಿ ರಂಗನ್ ವರದಿಯ ಬಗ್ಗೆ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಮೊದಲಿದ್ದ ಗಾಡ್ಗೀಳ್ ಸಮಿತಿ ವರದಿಯನ್ನು ಎಲ್ಲ ರಾಜ್ಯಗಳೂ ವಿರೋಧಿಸಿದ್ದವು. ನಂತರ ಕಸ್ತೂರಿ ರಂಗನ್ ವರದಿ ಬಂದಿತು. ಈ ವರದಿಯಲ್ಲಿ ಯಾವುದೇ ಭೂ ಸಮೀಕ್ಷೆ ಮಾಡದೇ, ಕೇವಲ ಸ್ಯಾಟಿಲೈಟ್ ಸಮೀಕ್ಷೆ ನಡೆಸಲಾಗಿದ್ದು, ಹಸಿರು ಪ್ರದೇಶಗಳನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಹೊರಟಿದ್ದಾರೆ. ಅಲ್ಲಿಯ ಜನಜೀವನ, ಪರಿಸರ ಒಟ್ಟಾಗಿದ್ದು, ಹಸಿರನ್ನು ಅವಲಂಬಿಸಿರುವ ಜನರಿದ್ದಾರೆ. ಕಾಫಿ, ಅಡಿಕೆ , ತೆಂಗು, ರಬ್ಬರ್ ತೋಟಗಳಿದ್ದು, ಅಲ್ಲಿಯ ಜನ ಹಸಿರನ್ನು ಉಳಿಸಿ ಬೆಳೆಸಿದ್ದಾರೆ. ಆದ್ದರಿಂದ ಈ ಪ್ರದೇಶದ ಭೂಮಿ ಸಮೀಕ್ಷೆ ನಡೆಸದೇ ವಾಸ್ತವಾಂಶ ತಿಳಿಯುವುದಿಲ್ಲ ಎಂಬುದು ರಾಜ್ಯದ ವಾದವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಸ್ತೂರಿ ರಂಗನ್ ವರದಿಗೆ ರಾಜ್ಯ ಸಂಪುಟ ಸಭೆಯಲ್ಲಿ ಭಾರಿ ವಿರೋಧ
ರಾಜ್ಯದ ಜೈವಿಕ ವೈವಿಧ್ಯತೆ ನೀತಿಯ ಪ್ರಕಾರ, ವರದಿ ತಯಾರಿಸುವಾಗ ಸ್ಥಳೀಯ ಗ್ರಾಮಪಂಚಾಯತಿ, ತಾಲ್ಲೂಕು ಪಂಚಾಯತಿಯ ಅಭಿಪ್ರಾಯ ಪಡೆದಿರುವುದಿಲ್ಲ. ಒಟ್ಟಾರೆ ಸ್ಥಳೀಯ ಜನರ ಅಭಿಪ್ರಾಯವನ್ನು ಪಡೆಯದೆಯೇ ಕಸ್ತೂರಿ ರಂಗನ್ ವರದಿಯನ್ನು ಸಿದ್ಧಪಡಿಸಲಾಗಿದೆ. ಅಲ್ಲಿನ ನೈಸರ್ಗಿಕ ಹಾಗೂ ಸಾಂಸ್ಕೃತಿಕ ಭೂ ಪ್ರದೇಶವನ್ನು ಪ್ರತ್ಯೇಕವಾಗಿ ಗುರುತಿಸಲು ವರದಿಯ ವಿಚಾರಣಾ ಉಲ್ಲೇಖಗಳಲ್ಲಿದ್ದರೂ, ಅದನ್ನು ಪ್ರತ್ಯೇಕಿಸಿಲ್ಲ ಎಂದರು.
ಒಂದು ವರ್ಷ ಅಧ್ಯಯನ ಬಳಿಕ ವರದಿ
ನಿವೃತ್ತ ಐಎಫ್ಎಸ್ ಅಧಿಕಾರಿ ಸಂಜಯ್ ಕುಮಾರ್ ಅವರ ನೇತೃತ್ವದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರು, ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ಡೈರೆಕ್ಟರ್ ಜನರಲ್, ಭಾರತೀಯ ವಿಜ್ಞಾನ ಸಂಸ್ಥೆಯ ಮಾಜಿ ಪ್ರಾಧ್ಯಾಪಕರಾದ ಆರ್. ಸಿ. ಕುಮಾರ್, ಪರಿಸರ ಸೂಕ್ಷ್ಮ ವಲಯದ ನಿರ್ದೇಶಕರ ಸಲಹೆಗಾರರು ಸಂಚಾಲಕರು, ಇವರನ್ನು ಒಳಗೊಂಡ ಸಮಿತಿಯನ್ನು ರಚಿಸಿ, ಒಂದು ವರ್ಷದ ಅವಧಿಯನ್ನು ನೀಡಲಾಗಿದೆ. ಜನರೊಂದಿಗೆ ಮಾತನಾಡಿ, ಅಲ್ಲಿ ಜನ ಬೆಳೆದಿರುವ ಬೆಳೆಗಳು, ಸಾಂಸ್ಕೃತಿಕ ಹಾಗೂ ನೈಸರ್ಗಿಕ ಭೂ ಪ್ರದೇಶದ ಕುರಿತು ಸಂಪೂರ್ಣ ಅಧ್ಯಯನ ಕೈಗೊಂಡು ವರದಿ ನೀಡಬೇಕು. ಅಲ್ಲಿಯವರೆಗೆ ಈ ಅಧಿಸೂಚನೆಯನ್ನು ಅನುಷ್ಠಾನಕ್ಕೆ ತರಲು ಸಾಧ್ಯವಾಗುವುದಿಲ್ಲ ಎನ್ನುವ ವಿಚಾರವನ್ನು ತಿಳಿಸಿದ್ದಾರೆ. ಅದರ ಪ್ರತಿಯನ್ನೂ ನೀಡಿದ್ದಾರೆ. ಪಶ್ಚಿಮ ಘಟ್ಟಗಳಿರುವ ಎಲ್ಲಾ ರಾಜ್ಯಗಳಿಗೆ ಅದನ್ನು ಪ್ರತಿಪಾದಿಸಿ, ಉಳಿಸುವ ಮತ್ತೊಂದು ಅವಕಾಶ ದೊರೆತಿದೆ. ರಾಜ್ಯ ಮಟ್ಟದಲ್ಲಿಯೂ ಕೂಡ ಸಮಿತಿಯ ವಿಚಾರಣಾ ಉಲ್ಲೇಖಗಳ ಆಧಾರದ ಮೇಲೆ ಉನ್ನತ ಮಟ್ಟದ ಸಮಿತಿಯನ್ನೂ ಸಹ ರಚಿಸಲಾಗುವುದು ಎಂದರು.
ಕೇಂದ್ರ ಸಚಿವರಿಗೆ ಮನವರಿಕೆ
ಈ ಸಮಿತಿ ರಚನೆಯಾದ ಸಂದರ್ಭದಲ್ಲಿ ವಾಸ್ತವಾಂಶಗಳನ್ನು ಸಲ್ಲಿಸುವುದರ ಜೊತೆಗೆ ಎಲ್ಲಾ ಗ್ರಾಮ ಪಂಚಾಯತಿಗಳ ಮನದಾಳದ ಆಸೆಯನ್ನು ಮನವರಿಕೆ ಮಾಡಿಕೊಡಲಾಗುವುದು. ಪ್ರತಿ ಗ್ರಾಮವನ್ನು ಒಂದು ಘಟಕವಾಗಿ ಪರಿಗಣಿಸಿ ಅವರ ಅಹವಾಲುಗಳನ್ನು ಕೇಳಬೇಕೆಂದು ಮನವಿ ಮಾಡುತ್ತೇವೆ. ಕಸ್ತೂರಿ ರಂಗನ್ ವರದಿ ಬಹಳ ಅವೈಜ್ಞಾನಿಕವಾಗಿದೆ. ವೈಜ್ಞಾನಿಕವಾಗಿ ಅದನ್ನು ರೂಪಿಸುವ ಸಲುವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಉನ್ನತ ಮಟ್ಟದ ಸಮಿತಿ ರಚನೆಯಾಗಲಿದೆ. ಜನಜೀವನ ಹಾಗೂ ಪರಿಸರವನ್ನು ಉಳಿಸಲು ಅವಕಾಶವಿದೆ. ಇದರ ಜೊತೆಗೆ ವಿವಿಧ ರಾಜ್ಯಗಳ ಜೊತೆಗೂ ಚರ್ಚೆ ಮಾಡಿ ಸಾಮಾನ್ಯ ಕಾರಣಗಳನ್ನು ಚರ್ಚಿಸಲಾಗುವುದು. ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರಿಗೆ ರಾಜ್ಯಕ್ಕೆ ಭೇಟಿ ನೀಡಿ ಈ ಭಾಗಗಳಲ್ಲಿ ಸುತ್ತಿ ಪರಿಶೀಲಿಸುವಂತೆ ಕೋರಲಾಗಿದೆ. ರಾಜ್ಯಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ ಸಿಎಂ ತಿಳಿಸಿದ್ದಾರೆ.
ಪಶ್ಚಿಮಘಟ್ಟ ಕುರಿತ ಅಧಿಸೂಚನೆಗೆ ತಡೆ
ನಿಯೋಗದ ನೇತೃತ್ವ ವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು, ಕೇಂದ್ರ ಪರಿಸರ ಸಚಿವಾಲಯ ಹೊರಡಿಸಿದ್ದ ಅಧಿಸೂಚನೆ ಯಿಂದಾಗುವ ಜನಜೀವನದ ಮೇಲಾಗುವ ಆರ್ಥಿಕ ಪ್ರತಿಕೂಲಗಳ ಬಗ್ಗೆ ಗಮನ ಸೆಳೆದಿದ್ದಾರೆ. ನಿಯೋಗದ ಸದಸ್ಯರ ಮನವಿ ಮೇರೆಗೆ, ಅಧಿಸೂಚನೆಗೆ ತಡೆ ಹಿಡಿದಿದ್ದು, ತಜ್ಞರ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲು ಭರವಸೆ ನೀಡಿದ್ದಾರೆ.
ಕೇಂದ್ರದ ಮಾಜಿ ಪರಿಸರ ಸಚಿವಾಲಯದ ಮಾಜಿ ಕಾರ್ಯದರ್ಶಿ ಸಂಜೀವ್ ಕುಮಾರ್ ನೇತೃತ್ವದ ತಜ್ಞರ ತಂಡ, ಪಶ್ಚಿಮ ಘಟ್ಟ ಸೂಕ್ಷ್ಮ ಪ್ರದೇಶ ವಲಯದಲ್ಲಿ, ಸರ್ವೇ ಕಾರ್ಯ, ಹಾಗೂ ಜನಸಂಪರ್ಕ ಹಾಗೂ ಸಂವಾದ ನಡೆಸುವುದು ಎಂದೂ ಗೃಹ ಸಚಿವ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸಚಿವರು ಸಂಸದರೂ ಭಾಗಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತೆರಳಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಭಾಜಪ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಂಸದರಾದ ಪ್ರತಾಪ ಸಿಂಹ,ಬಿ.ಎಸ್.ರಾಘವೇಂದ್ರ, ಸಚಿವರಾದ ಗೋವಿಂದ ಕಾರಜೋಳ, ಅರಗ ಜ್ಞಾನೇಂದ್ರ, ಶಾಸಕ ಹಾಲಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜೀವರಾಜ್ ಅವರು ನಿಯೋಗದಲ್ಲಿದ್ದರು.