ಡಿಕೆಶಿಗೆ ಸಿದ್ದು ಕೊಡ್ತಾರಾ ಡಿಚ್ಚಿ? ಎಂ.ಬಿ.ಪಾಟೀಲ್ ಗೆ ಪಟ್ಟದ ಖುಷಿ?
ನವದೆಹಲಿ, ಜನವರಿ.14: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ(ಕೆಪಿಸಿಸಿ)ಗೆ ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎನ್ನುವರ ಬಗ್ಗೆ ಚರ್ಚೆ ತೀವ್ರಗೊಂಡಿದೆ. ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೇಮ್ ಚೇಂಡ್ ಮಾಡಿದ್ದಾರಾ ಎಂಬ ಅನುಮಾನ ಹುಟ್ಟಿಕೊಳ್ಳುತ್ತಿದೆ.
ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಪಕ್ಕಾ ಎಂದು ಹೇಳಲಾಗುತ್ತಿತ್ತು. ಆದರೆ, ಇದೀಗ ಹೈಕಮಾಂಡ್ ನಲ್ಲಿ ಬಹುತೇಕ ರಾಜಕೀಯ ಚಿತ್ರಣವೇ ಅದಲು-ಬದಲು ಆಗಿರುವ ಶಂಕೆ ವ್ಯಕ್ತವಾಗಿದೆ. ಇದಕ್ಕೆಲ್ಲ ಒನ್ ಆಂಡ್ ಒನ್ಲಿ ಸಿದ್ದರಾಮಯ್ಯ ಕಾರಣ ಎನ್ನಲಾಗಿದೆ.
ಕನಕಪುರ ಬಂಡೆ ಬುಡಕ್ಕೆ ಬಾಂಬ್: ಡಿಕೆಶಿ ವಿರುದ್ಧ ಕಾಣದ 'ಕೈ' ತಂತ್ರ?
ತಮ್ಮ ಬೆಂಬಲಿಗರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಮಾಜಿ ಸಚಿವ ಹಾಗೂ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟಲು ಸಿದ್ದರಾಮಯ್ಯ ಲಾಬಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಬಲಿಗರ ಪರ ಸಿದ್ದರಾಮಯ್ಯ ನಡೆಸಿದರಾ ಲಾಬಿ?
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಶಾಸಕ ಎಂ.ಪಿ.ಪಾಟೀಲ್ ಪರ ಮಾಜಿ ಸಿಎಂ ಸಿದ್ದರಾಮಯ್ಯ ಬ್ಯಾಟಿಂಗ್ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಂಜೆ ಎಐಸಿಸಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಚರ್ಚಿಸಿದ ಸಿದ್ದರಾಮಯ್ಯ, ತಮ್ಮ ಬೆಂಬಲಿಗರಿಗೆ ಅವಕಾಶ ನೀಡುವಂತೆ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ, ಜಾತಿವಾರು, ಪ್ರಾದೇಶಿಕವಾರು, ಹಾಗೂ ಪಕ್ಷ ಸಂಘಟನೆಯ ದೃಷ್ಟಿಯಿಂದ ರಾಜ್ಯದಲ್ಲಿ ಪಕ್ಷದ ಸಾರಥ್ಯವನ್ನು ಯಾರಿಗೆ ವಹಿಸುವುದು ಸೂಕ್ತ ಎಂಬುದರ ಬಗ್ಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಅಹ್ಮದ್ ಪಟೇಲ್ ಜೊತೆಗೆ ಸಿದ್ದರಾಮಯ್ಯ ಚರ್ಚಿಸಿದ್ದೇನು?
ಶಾಸಕ ಡಿ.ಕೆ.ಶಿವಕುಮಾರ್ ಬದಲಿಗೆ ತಮ್ಮ ಆಪ್ತರ ಬಳಗದಲ್ಲಿ ಗುರುತಿಸಿಕೊಂಡಿರುವ ಶಾಸಕ ಎಂ.ಬಿ.ಪಾಟೀಲ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಿಸಲು ತಂತ್ರ ಹೆಣೆದಿದ್ದಾರೆ. ಎಐಸಿಸಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಜೊತೆ ಈ ಬಗ್ಗೆ ಸಿದ್ದರಾಮಯ್ಯ ಚರ್ಚಿಸಿದ್ದಾರೆ ಎನ್ನಲಾಗಿದೆ.
ದೆಹಲಿಯ ಕರ್ನಾಟಕ ಭವನದಲ್ಲಿ ಸಾಲು ಸಾಲು ಸಭೆ
ಸಿದ್ದರಾಮಯ್ಯ ನವದೆಹಲಿಗೆ ತೆರಳುತ್ತಿದ್ದಂತೆ ಬಹುತೇಕ ಬೆಂಬಲಿಗರು ಅವರ ಹಿಂದೆಯೇ ವಿಮಾನ ಏರಿದ್ದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರ ಜೊತೆಗೆ ಸಾಲು ಸಾಲು ಸಭೆಗಳನ್ನು ನಡೆಸಿದರು. ಯಾರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸ್ಸು ಮಾಡಿದರೆ ಒಳಿತು ಎಂಬುದರ ಬಗ್ಗೆ ಚರ್ಚೆ ನಡೆಸಿದರು.
ಸಿದ್ದರಾಮಯ್ಯ ತಂತ್ರದ ಎದುರು ಸೋಲುತ್ತಾರಾ ಡಿಕೆಶಿ?
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆಯ್ಕೆ ಆಗುತ್ತಾರೆ ಎಂದೇ ಹೇಳಲಾಗುತ್ತಿದೆ. ಹೀಗಿದ್ದರೂ ಸಿದ್ದರಾಮಯ್ಯ ತಂತ್ರಗಾರಿಕೆ ಎದುರು ಎಲ್ಲವೂ ಉಲ್ಟಾ ಹೊಡೆಯುತ್ತಾ ಎಂಬ ಅನುಮಾನಗಳು ಹುಟ್ಟಿಕೊಳ್ಳುತ್ತಿದೆ. ಜನವರಿ.14 ಅಥವಾ ಜನವರಿ.15ರೊಳಗೆ ಕೆಪಿಸಿಸಿ ಅಧ್ಯಕ್ಷರು ಯಾರು ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಿಸಲಿದೆ.