ಲಾಲು ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು: ಏರ್ ಆಂಬುಲೆನ್ಸ್ ಮೂಲಕ ದೆಹಲಿಗೆ ಕರೆತರಲು ಸಿದ್ಧತೆ
ರಾಂಚಿ ಮಾರ್ಚ್ 22: ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಹಠಾತ್ ಹದಗೆಟ್ಟಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಏರ್ ಆಂಬುಲೆನ್ಸ್ ಮೂಲಕ ರಾಂಚಿಯಿಂದ ದೆಹಲಿಗೆ ಕರೆತರಲಾಗುತ್ತಿದೆ. ಸದ್ಯ ಲಾಲು ಪ್ರಸಾದ್ ಯಾದವ್ ರಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾಲು ಪ್ರಸಾದ್ ಯಾದವ್ ಅವರನ್ನು ದೆಹಲಿಗೆ ಕರೆದೊಯ್ಯಲು ವೈದ್ಯಕೀಯ ಮಂಡಳಿ ಅನುಮತಿ ನೀಡಿದ್ದು, ಬಳಿಕ ಅವರನ್ನು ದೆಹಲಿಗೆ ಕರೆದೊಯ್ಯಲು ಸಿದ್ಧತೆ ನಡೆಸಲಾಗುತ್ತಿದೆ.
ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ. ಅವರ ಕಿಡ್ನಿ ಶೇ.80ರಷ್ಟು ಕೆಲಸ ಮಾಡುತ್ತಿಲ್ಲ. 20ರಷ್ಟು ಮಾತ್ರ ಅವರ ಕಿಡ್ನಿ ಕೆಲಸ ಮಾಡುತ್ತಿದೆ ಎಂದು ವೈದ್ಯರು ದೆಹಲಿಗೆ ರೆಫರ್ ಮಾಡಿದ್ದಾರೆ.ಇದೀಗ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವೈದ್ಯಕೀಯ ಮಂಡಳಿ ಅನುಮತಿ ಬಳಿಕ ದೆಹಲಿಗೆ ಕರೆದುಕೊಂಡು ಹೋಗಲು ಸಿದ್ಧತೆ ನಡೆಸಲಾಗಿದೆ.
ಬಿಜೆಪಿ ವಿರುದ್ಧ ಹೋರಾಟಕ್ಕೆ ಸಿದ್ಧ; ಎಲ್ಜೆಡಿ-ಆರ್ಜೆಡಿ ವಿಲೀನ
ಬಹುಕೋಟಿ ರೂಪಾಯಿ ಮೇವು ಹಗರಣದಲ್ಲಿ ದೋಷಿ ಎಂದು ಸಾಬೀತಾಗಿದ್ದ ಲಾಲೂ ಪ್ರಸಾದ್ ಯಾದವ್ಗೆ ಫೆಬ್ರವರಿ 21 ರಂದು 5 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಮತ್ತು ಅಂತಿಮ ತೀರ್ಪು ನೀಡಿದ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯ ಇತರ 75 ಆರೋಪಿಗಳೊಂದಿಗೆ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು.
ಲಾಲೂ ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ದುಮ್ಕಾ ಖಜಾನೆಯಲ್ಲಿ ನಡೆದ 3.13 ಕೋಟಿ ರೂ. ಅವ್ಯವಹಾರಕ್ಕೆ ಸಂಬಂಧಿಸಿದ ಹಗರಣ ಇದಾಗಿದೆ. ಇದಕ್ಕೂ ಮುನ್ನ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಹೊರಬಿದ್ದ ನಾಲ್ಕು ಪ್ರಕರಣಗಳಲ್ಲೂ ದೋಷಿ ಎಂದು ಪರಿಗಣಿಸಲಾಗಿದ್ದ ಲಾಲೂ ಯಾದವ್, ಒಟ್ಟು 13.5 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಇದೀಗ ಅದಕ್ಕೆ ಹೆಚ್ಚುವರಿ 7 ವರ್ಷ ಸೇರ್ಪಡೆಯಾದಂತಾಗಿದೆ. ಈ ಮೂಲಕ ನಾಲ್ಕು ಹಗರಣಗಳಿಂದ ಲಾಲೂ ಪ್ರಸಾದ್ ಯಾದವ್ ಒಟ್ಟು 20.5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿದೆ.
ಲಾಲೂ ಪ್ರಸಾದ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಚೈಬಾಸಾ ಖಜಾನೆಯಲ್ಲಿ 33.67 ಕೋಟಿ ಅವ್ಯವಹಾರ ಪ್ರಕರಣದ ಮೇಲೆ 2017ರಿಂದಲೂ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಸೇರಿ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ಬಹುಕೋಟಿ ಮೇವು ಹಗರಣದಲ್ಲಿ ನಾಲ್ಕು ಪ್ರಕರಣಗಳನ್ನು ಎದುರಿಸುತ್ತಿರುವ ಲಾಲೂ ಪ್ರಸಾದ್ ಅವರಿಗೆ ಮೂರು ಪ್ರಕರಣದಲ್ಲಿ ಈಗಾಗಲೇ ಜಾಮೀನು ದೊರೆತಿದೆ. ಲಾಲೂ ಪ್ರಸಾದ್ ಆರೋಗ್ಯ ಹದಗೆಟ್ಟ ಕಾರಣ ಈಚೆಗೆ ಅವರನ್ನು ದೆಹಲಿಯ ಏಮ್ಸ್ಗೆ ದಾಖಲಿಸಲಾಗಿತ್ತು. ತಮ್ಮ ಶಿಕ್ಷೆಯ ಅವಧಿಯನ್ನು ಅರ್ಧ ಪೂರೈಸಿದ್ದು, ಜಾಮೀನು ನೀಡಬೇಕೆಂದು ಕೋರಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಫೆಬ್ರವರಿಯಲ್ಲಿ ಜಾಮೀನು ತಿರಸ್ಕರಿಸಲಾಗಿತ್ತು.