ಅಣ್ಣಾ ಹಜಾರೆ, ರಾಹುಲ್ ಗಾಂಧಿ ನಡುವೆ ಪತ್ರ ವಿನಿಮಯ!
ನವದೆಹಲಿ, ಡಿ. 17 : ಪ್ರಬಲ ಜನ ಲೋಕಪಾಲ್ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಅಣ್ಣಾ ಹಜಾರೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ಲೋಕಪಾಲ್ ಮಸೂದೆ ಬಗ್ಗೆ ಅವರಿಗಿರುವ ಕಾಳಜಿಗೆ ಧನ್ಯವಾದ ಅರ್ಪಿಸಿದ್ದಾರೆ. ಲೋಕಪಾಲ್ ಮಸೂದೆ ಮಂಗಳವಾರ ರಾಜ್ಯಸಭೆಯಲ್ಲಿ ಅಂಗೀಕಾರವಾಗುವ ಸಾಧ್ಯತೆ ಇದೆ.
ಜನ ಲೋಕಪಾಲ್ ಮಸೂದೆ ಜಾರಿಗೊಳಿಸಲು ನಾವು ಸಿದ್ಧವಿರುವುದಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಘೋಷಿಸಿದ್ದರು ಮತ್ತು ಈ ಕುರಿತು ಅಣ್ಣಾ ಹಜಾರೆ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಉತ್ತರ ನೀಡಿ ಮಂಗಳವಾರ ಹಜಾರೆ ಪತ್ರ ಬರೆದಿದ್ದಾರೆ. [ಜನ್ ಲೋಕಪಾಲ ಮಸೂದೆಗಾಗಿ ಅಣ್ಣಾ ಮತ್ತೆ ನಿರಶನ]

ರಾಹುಲ್ ಗಾಂಧಿ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಅಣ್ಣಾ ಹಜಾರೆ, ಲೋಕಪಾಲ ಮಸೂದೆ ಜಾರಿಗೆ ಪ್ರಯತ್ನಿಸುತ್ತಿರುವ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಸೋಮವಾರ ಲೋಕಪಾಲ ಮಸೂದೆ ರಾಜ್ಯಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆ ಇತ್ತು. ಆದರೆ, ಕಲಾಪ ಮೊಟಕುಗೊಂಡಿದ್ದರಿಂದ ಅದು ಸಾಧ್ಯವಾಗಿರಲಿಲ್ಲ.
ಕೇಂದ್ರ ಸರ್ಕಾರ ಜನ ಲೊಕಪಾಲ್ ಮಸೂದೆ ಜಾರಿಗಾಗಿ ಸರ್ವಪಕ್ಷಗಳ ಸಭೆ ಕರೆದು ಸಮ್ಮತಿ ಕೋರಿದೆ. ಮಂಗಳವಾರ ರಾಜ್ಯ ಸಭೆಯಲ್ಲಿ ಮಸೂದೆ ಅಂಗೀಕಾರವಾಗುವ ಸಾಧ್ಯತೆ ಇದೆ. ಲೋಕಪಾಲ್ ಮಸೂದೆ ಅಂಗೀಕಾರ ಹಿನ್ನಲೆಯಲ್ಲಿ ರಾಜ್ಯ ಸಭೆಯಲ್ಲಿ ಪ್ರಶ್ನೋತ್ತರ ಕಲಾಪವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರಾಜ್ಯಸಭೆ ವಿಪಕ್ಷ ನಾಯಕ ಅರುಣ್ ಜೇಟ್ಲಿ, ಉಪಸಭಾಪತಿ ಹಮೀದ್ ಅನ್ಸಾರಿ ಅವರಿಗೆ ಮನವಿ ಮಾಡಿದ್ದಾರೆ.
ಮಂಗಳವಾರ ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆ ಸೀಮಾಂದ್ರ ಭಾಗದ ಸಂಸದರು ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯನ್ನು ಖಂಡಿಸಿ ಸದನದಲ್ಲಿ ಪ್ರತಿಭಟನೆ ತೀವ್ರಗೊಳಿಸಿದ ಕಾರಣ ಕಲಾಪವನ್ನು ಮಧ್ಯಾಹ್ನ 12ಗಂಟೆಗೆ ಮುಂದೂಡಲಾಗಿತ್ತು. ಸದ್ಯ ಕಲಾಪ ಪುನಃ ಆರಂಭವಾಗಿದೆ.












Click it and Unblock the Notifications