ಲೋಕಸಭೆ ಚುನಾವಣೆ ಸೋಲು: ಕಾಂಗ್ರೆಸ್ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ
Recommended Video
ನವದೆಹಲಿ, ಜೂನ್ 29: ಪಕ್ಷವನ್ನು ತಳಮಟ್ಟದಿಂದ ಪುನರ್ ರಚಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮುಕ್ತ ಅವಕಾಶ ನೀಡುವ ಉದ್ದೇಶದಿಂದ ಕಾಂಗ್ರೆಸ್ನ ಅನೇಲ ಪದಾಧಿಕಾರಿಗಳು ಶುಕ್ರವಾರ ತಮ್ಮ ಹುದ್ದೆಯನ್ನು ತ್ಯಜಿಸಿದ್ದಾರೆ.
ಸಂಸದ ವಿವೇಕ್ ಟಂಕಾ ಅವರು ಪಕ್ಷದ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಹುಲ್ ಗಾಂಧಿ ಅವರಿಗೆ ನೆರವಾಗುವ ದೃಷ್ಟಿಯಿಂದ ಉಳಿದವರೂ ತಮ್ಮನ್ನು ಅನುಸರಿಸುವಂತೆ ಮನವಿ ಮಾಡಿದ್ದರು. ಅದರಂತೆ ಅನೇಕ ಕಾಂಗ್ರೆಸ್ಸಿಗರು ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿನ ಪಕ್ಷದ ಹೀನಾಯ ಸೋಲಿಗೆ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ ಪ್ರಮುಖರಲ್ಲಿ ಮಧ್ಯಪ್ರದೇಶದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ, ಗೋವಾ ಘಟಕದ ಅಧ್ಯಕ್ಷ ಗಿರೀಶ್ ಚೋದಂಕರ್ ಸೇರಿದ್ದಾರೆ.

ದೆಹಲಿ ಪಿಸಿಸಿ ಕಾರ್ಯಾಧ್ಯಕ್ಷ ರಾಜೇಶ್ ಲಿಲೋಥಿಯಾ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಪೊನ್ನಮ್ ಪ್ರಭಾಕರ್ ಕೂಡ ತಮ್ಮ ಸ್ಥಾನಗಳಿಂದ ಕೆಳಕ್ಕಿಳಿದಿದ್ದಾರೆ. ವಿವಿಧ ರಾಜ್ಯಗಳಲ್ಲಿನ ಪದಾಧಿಕಾರಿಗಳು ಸಹ ಅಧಿಕಾರ ತ್ಯಜಿಸಿದ್ದಾರೆ.
ಕೆಲವು ಕಾಂಗ್ರೆಸ್ಸಿಗರ ಹೆಸರು ಮತ್ತು ಸಹಿ ಉಳ್ಳ ರಾಜೀನಾಮೆಯ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹರಿಯಾಣ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಸುಮಿತ್ರಾ ಚೌಹಾಣ್, ಎಐಸಿಸಿ ಕಾರ್ಯದರ್ಶಿಗಳಾದ ರಾಜೇಶ್ ಧರ್ಮಾನಿ ಮತ್ತು ವೀರೇಂದ್ರ ರಾಥೋರ್ ಅವರ ಹೆಸರೂ ಈ ಪಟ್ಟಿಯಲ್ಲಿದೆ. ಈ ಪತ್ರದ ಬಗ್ಗೆ ಪಕ್ಷ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಹಿನ್ನೆಲೆಯಲ್ಲಿ ಸ್ವತಃ ರಾಹುಲ್ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಆದರೂ, ಪಕ್ಷವನ್ನು ಮರುಸಂಘಟಿಸಲು ಹೊಸ ತಂಡವನ್ನು ಕಟ್ಟುವ ಸಲುವಾಗಿ ರಾಹುಲ್ ಗಾಂಧಿ ಅವರಿಗೆ ಮುಕ್ತ ಸ್ವಾತಂತ್ರ್ಯ ನೀಡಲು ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.












Click it and Unblock the Notifications