ಫಡ್ನಾವೀಸ್-ಜಾರಕಿಹೊಳಿ ಭೇಟಿ: ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ?
ಬೆಂಗಳೂರು, ಸೆ. 19: ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಭೇಟಿ ಮಾಡಿದ್ದಾರೆ. ಇಬ್ಬರೂ ನಾಯಕರು ಭೇಟಿ ಮಾಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ಬಿಜೆಪಿ ಹಾಗೂ ಶಿವಸೇನೆ ಮಧ್ಯೆ ವಾಗ್ಯುದ್ಧ ಜೋರಾಗಿದೆ. ಇದೇ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಅವರು ಮುಂಬೈಗೆ ತೆರಳಿರುವುದು ಶಿವಸೇನೆಯ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಬಿಜೆಪಿ ಹೈಕಮಾಂಡ್ ಸೂಚನೆಯಂತೆ ದೇವೇಂದ್ರ ಫಡ್ನವೀಸ್ ಅವರನ್ನು ರಮೇಶ್ ಜಾರಕಿಹೊಳಿ ಅವರು ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೇ ಭೇಟಿಯಾಗುವಂತೆ ಇಬ್ಬರು ನಾಯಕರಿಗೆ ಸೂಚಿಸಿದ್ದರು ಎನ್ನಲಾಗಿದೆ. ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಹೋಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಸಚಿವ ರಮೇಶ್ ಜಾರಕಿಹೊಳಿ ಅವರು ಕಾರಣ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ.
"ಮೇಕೆದಾಟು ಅಣೆಕಟ್ಟು ನಿರ್ಮಾಣ; ಸುಪ್ರೀಂ ಆದೇಶಕ್ಕೆ ಯಾವುದೇ ಧಕ್ಕೆ ಇಲ್ಲ"
ಮಹಾರಾಷ್ಟ್ರ ರಾಜಕಾರಣಿಗಳೊಂದಿಗೆ ರಮೇಶ್ ಜಾರಕಿಹೊಳಿ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಮಹಾರಾಷ್ಟ್ರದಲ್ಲಿಯೂ ಆಪರೇಶನ್ ಕಮಲದ ವಾಸನೆ ಈ ಭೇಟಿಯ ಹಿಂದಿದೆ ಎನ್ನಲಾಗಿದೆ. ಮತ್ತೊಂದೆಡೆ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸುತ್ತ ಸೃಷ್ಟಿಯಾದ ಗೊಂದಲ ಮತ್ತು ಕೊರೊನಾ ವೈರಸ್ ನಿಯಂತ್ರಣದಲ್ಲಿ ಮಾಹಾರಷ್ಟ್ರ ಸರ್ಕಾರ ಜನರ ನಂಬಿಕೆ ಕಳೆದುಕೊಂಡಿದೆ ಎಂದು ಅಲ್ಲಿನ ಬಿಜೆಪಿ ಆರೋಪಿಸಿದೆ.
ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಬೆಳಗಾವಿಯ ಪ್ರಭಾವಿ ನಾಯಕ ರಮೇಶ್ ಜಾರಕಿಹೊಳಿ ಅವರ ಮಧ್ಯೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆದಿದೆ. ನವದೆಹಲಿಯ ಗೌಪ್ಯ ಸ್ಥಳದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ದೇವೇಂದ್ರ ಫಡ್ನವಿಸ್ ಮಧ್ಯೆ ಮಾತುಕತೆ ನಡೆದಿದ್ದು, ನಡ್ಡಾ ಅವರ ಸೂಚನೆಯಂತೆಯೇ ಹಲವಾರು ವಿಷಯಗಳನ್ನು ಉಭಯ ನಾಯಕರು ಚರ್ಚಿಸಿದ್ದಾರೆ.
ಕರ್ನಾಟಕದಲ್ಲಿ ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಭಾಜಪ ಸರ್ಕಾರ ಅಧಿಕಾರಕ್ಕೆ ಬರುವಂತೆ ಮಾಡಿದ ರಮೇಶ್ ಜಾರಕಿಹೊಳಿ, ಮಹಾರಾಷ್ಟ್ರದಲ್ಲೂ ತಮ್ಮ ಹಿಡಿತ ಹೊಂದಿದ್ದು, ಪ್ರಭಾವಿ ನಾಯಕರ ಮಧ್ಯದ ಭೇಟಿ ಶಿವಸೇನಾ ಮತ್ತು ಕಾಂಗ್ರೆಸ್ ವಲಯದಲ್ಲಿ ಭೀತಿ ಸೃಷ್ಟಿಸಿದೆ.