ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ತನಿಖೆಗೆ ಸಮಿತಿ ರಚಿಸಿದ ಗೃಹ ಸಚಿವಾಲಯ
ನವದೆಹಲಿ, ಮೇ 06: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ನಾಲ್ವರು ಸದಸ್ಯರ ಸಮಿತಿ ರಚಿಸಿದೆ.
ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವುದರ ಜೊತೆಗೆ ಸ್ಥಳೀಯ ಪರಿಸ್ಥಿತಿಯ ಬಗ್ಗೆ ಕೂಡ ಈ ಸಮಿತಿ ವರದಿ ನೀಡಲಿದೆ.
ಬಿಜೆಪಿ ಕಾರ್ಯಕರ್ತರನ್ನು ಟಿಎಂಸಿ ಬೆಂಬಲಿತ ಗೂಂಡಾಗಳು ಹತ್ಯೆ ಮಾಡುತ್ತಿದ್ದಾರೆಂದು ಬಿಜೆಪಿ ಆರೋಪಿಸಿದೆ. 14 ಮಂದಿ ಬಿಜೆಪಿ ಕಾರ್ಯಕರ್ತರನ್ನು ಈ ವರೆಗೂ ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ಹೇಳಿದೆ.
ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದಲ್ಲಿ ಈ ಸಮಿತಿ ಕಾರ್ಯನಿರ್ವಹಣೆ ಮಾಡಲಿದ್ದು, ಸಮಿತಿಯ ಸದಸ್ಯರು ಈಗಾಗಲೇ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾರೆ. ಮೇ.05 ರಂದು ಗೃಹ ಸಚಿವಾಲಯ ರಾಜ್ಯಕ್ಕೆ ವರದಿ ಸಲ್ಲಿಸುವಂತೆ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ.
ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾದರೆ ಅದನ್ನು ಸಚಿವಾಲಯ ಗಂಭೀರವಾಗಿ ಪರಿಗಣಿಸುವುದಾಗಿ ಎಚ್ಚರಿಸಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವನೋತ್ತರ ಗಲಭೆಯಲ್ಲಿ ಕನಿಷ್ಟ 6 ಮಂದಿ ಸಾವನ್ನಪ್ಪಿದ್ದಾರೆ.
ಟಿಎಂಸಿ ಬೆಂಬಲಿತ ಗೂಂಡಾಗಳು ತನ್ನ ಹಲವು ಕಾರ್ಯಕರ್ತರನ್ನು ಕೊಂದಿದ್ದಾರೆ. ಮಹಿಳಾ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ, ಮನೆಗಳನ್ನು ಧ್ವಂಸ ಮಾಡಿದ್ದಾರೆ. ಸದಸ್ಯರ ಅಂಗಡಿಗಳನ್ನು ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ.
ಆದರೆ ಮಮತಾ ಬ್ಯಾನರ್ಜಿ ಅವರು ಈ ಎಲ್ಲಾ ಆರೋಪವನ್ನು ತಳ್ಳಿ ಹಾಕಿದ್ದರು, ಈ ಎಲ್ಲಾ ಹಿಂಸಾಚಾರ ಮತ್ತು ಸಂಘರ್ಷಗಳು ಬಿಜೆಪಿ ಗೆದ್ದಿರುವ ಕ್ಷೇತ್ರದಲ್ಲೇ ನಡೆದಿವೆ ಎಂದು ಹೇಳಿದ್ದರು.