ಕೇಂದ್ರ ಸಚಿವ ಪಿಯೂಶ್ ಗೋಯಲ್ ರಿಗೆ ಹೆಚ್ಚುವರಿ ಖಾತೆ ಜವಾಬ್ದಾರಿ
ನವದೆಹಲಿ, ಅಕ್ಟೋಬರ್.09: ದೇಶದ ರೈಲ್ವೆ ಖಾತೆ ಸಚಿವ ಪಿಯೂಶ್ ಗೋಯಲ್ ಅವರಿಗೆ ಕೇಂದ್ರ ಸರ್ಕಾರವು ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ. ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನದ ಹಿನ್ನೆಲೆ ಕೇಂದ್ರ ಆಹಾರ ಹಾಗೂ ಪಡಿತರ ಸರಬರಾಜು ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆ ಮೇರೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಈ ಬಗ್ಗೆ ನಿರ್ದೇಶನ ಹೊರಡಿಸಿದ್ದಾರೆ. ಪ್ರಸ್ತುತ ಹೊಂದಿರುವ ಖಾತೆಯ ಜೊತೆಗೆ ಪಿಯೂಶ್ ಗೋಯಲ್ ಅವರಿಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ ಎಂದು ರಾಷ್ಟ್ರಪತಿ ಭವನವು ಪ್ರಕಟಿಸಿದೆ.
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ವಿಶೇಷ ಸಂತಾಪ
"ಭಾರತದ ರಾಷ್ಟ್ರಪತಿಗಳು, ಪ್ರಧಾನಮಂತ್ರಿಯವರ ಸಲಹೆಯಂತೆ, ಸಂಪುಟ ಸಚಿವ ಪಿಯೂಶ್ ಗೋಯಲ್ ಅವರ ಅಸ್ತಿತ್ವದಲ್ಲಿರುವ ಖಾತೆಗಳ ಜೊತೆಗೆ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಉಸ್ತುವಾರಿಯನ್ನು ಹೆಚ್ಚುವರಿಯಾಗಿ ವಹಿಸಬೇಕೆಂದು ನಿರ್ದೇಶಿಸಿದ್ದಾರೆ" ಎಂದು ತಿಳಿಸಲಾಗಿದೆ.
ಗುರುವಾರ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ:
ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ರನ್ನು ಸಪ್ಟೆಂಬರ್.11ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನವದೆಹಲಿ ಖಾಸಗಿ ಆಸ್ಪತ್ರೆಯಲ್ಲಿ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು ಎಂದು ಪುತ್ರ ಚಿರಾಗ್ ಪಾಸ್ವಾನ್ ತಿಳಿಸಿದ್ದರು. ಗುರುವಾರ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪುತ್ರ ಚಿರಾಗ್ ಪಾಸ್ವಾನ್ ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ಹೇಳಿಕೊಂಡಿದ್ದಾರೆ.
ನವದೆಹಲಿಯ ರಾಮ್ ವಿಲಾಸ್ ಪಾಸ್ವಾನ್ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಶುಕ್ರವಾರ ಬೆಳಗ್ಗೆ ಪಾರ್ಥಿವ ಶರೀರವನ್ನು ಇರಿಸಿದ ನಿವಾಸಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು. ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.