ದೇಶದ ಎಲ್ಲಾ ಜನರ ಬೆಂಬಲ ಕೇಳಿದ ಮೋದಿ!
ನವದೆಹಲಿ, ಸೆ.13 : "ಪಕ್ಷದ ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು, ಪ್ರಧಾನಿ ಹುದ್ದೆಗೆ ಆಯ್ಕೆ ಮಾಡಿರುವುದಕ್ಕೆ ಪಕ್ಷದ ಎಲ್ಲಾ ನಾಯಕರಿಗೆ ಧನ್ಯವಾದ" ಎಂದು ನರೇಂದ್ರ ಮೋದಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. 2014ರ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ದೇಶದ ಎಲ್ಲಾ ಜನರು ಬೆಂಬಲ ನೀಡಬೇಕು ಎಂದು ಮೋದಿ ಮನವಿ ಮಾಡಿದ್ದಾರೆ.
ನವದೆಹಲಿಯ ಪಕ್ಷದ ಕಚೇರಿಯಲ್ಲಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದ ನಂತರ ಮಾತನಾಡಿದ ಮೋದಿ, ಪಕ್ಷದ ನಾಯಕರಿಗೆ ಧನ್ಯವಾದ ಅರ್ಪಿಸಿದರು. ಪಕ್ಷದ ಸಾಮಾನ್ಯ ಕಾರ್ಯಕರ್ತನನ್ನು ಉನ್ನತ ಹುದ್ದೆಗೆ ಆಯ್ಕೆ ಮಾಡಿದ್ದಕ್ಕೆ ಸಂತಸವಾಗಿದೆ ಎಂದು ತಿಳಿಸಿದರು. ಪಕ್ಷವನ್ನು ಚುನಾವಣೆಯಲ್ಲಿ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಭರವಸೆ ನೀಡಿದರು.

ಪಕ್ಷದ ಕೋಟ್ಯಾಂತರ ಕಾರ್ಯಕರ್ತರು ಮತ್ತು ನಾಯಕರ ಪರಿಶ್ರಮದಿಂದ 2014ರ ಚುನಾವಣೆಯಲ್ಲಿ ಪಕ್ಷ ಬಹುಮತಗಳಿಸಿ ಅಧಿಕಾರ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜನಸಾಮಾನ್ಯರ ಆಶಯಗಳಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಘೋಷಿಸಿದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು, ದೇಶದ ಕೋಟ್ಯಾಂತರ ಜನರ ಆಶೀರ್ವಾದ ಬೇಡುತ್ತೇನೆ ಎಂದು ನರೇಂದ್ರ ಮೋದಿ,
ಕಾಶ್ಮೀರದಿಂದ ಕನ್ಯಾಕುಮಾರಿ ವರೆಗಿನ ಜನರು ಬಿಜೆಪಿಗೆ ಚುನಾವಣೆಯಲ್ಲಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು. ಬೆಂಬಲ ನೀಡಿದ ಮಾಧ್ಯಮಗಳಿಗೆ ಮೋದಿ ಧನ್ಯವಾದ ಅರ್ಪಿಸಿದರು.
ಪಕ್ಷವು ತನಗೆ ಅತಿದೊಡ್ಡ ಜವಾಬ್ದಾರಿಯನ್ನು ಒಪ್ಪಿಸಿದ್ದು, 2014ರ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು ದೊರಕಿಸಲು ದೇವರು ನೀಡಿರುವ ಎಲ್ಲಾ ಶಕ್ತಿಯನ್ನು ಬಳಸಿಕೊಂಡು, ಸಾಧ್ಯವಿದ್ದಷ್ಟು ಶ್ರಮ ವಹಿಸಿ ಕೆಲಸ ಮಾಡುತ್ತೇನೆ ಎಂದು ಮೋದಿ ಹೇಳಿದರು.












Click it and Unblock the Notifications