ಲೈಂಗಿಕ ದೌರ್ಜನ್ಯ: ಸಂತ್ರಸ್ತ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ
ನವದೆಹಲಿ, ಆಗಸ್ಟ್.06: ರಾಷ್ಟ್ರ ರಾಜಧಾನಿಯಲ್ಲಿ ಲೈಂಗಿಕ ದೌರ್ಜನ್ಯದಿಂದ ಅಸ್ವಸ್ಥಗೊಂಡ ಅಪ್ರಾಪ್ತ ಬಾಲಕಿಯನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಗುರುವಾರ ಏಮ್ಸ್ ಆಸ್ಪತ್ರೆಗೆ ಸ್ವತಃ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿದರು.
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ 12 ವರ್ಷದ ಬಾಲಕಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತಜ್ಞವೈದ್ಯರ ತಂಡ ಬಾಲಕಿಗೆ ಚಿಕಿತ್ಸೆ ನೀಡುತ್ತಿದೆ. ಇದರ ನಡುವೆ ಬಾಲಕಿ ಕುಟುಂಬಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಕೊರೊನಾ ಸೋಂಕಿತೆ ಮೇಲೆ ವೈದ್ಯನಿಂದ ಅತ್ಯಾಚಾರಕ್ಕೆ ಯತ್ನ!
ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ್ ಜೊತೆಗೆ ಚರ್ಚೆ ನಡೆಸಿದ್ದೇನೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಲಾಗುತ್ತದೆ. ನಂತರ ಉತ್ತಮ ವಕೀಲರನ್ನು ನೇಮಿಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಲಾಗುತ್ತದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಭರವೆಸೆ ನೀಡಿದ್ದಾರೆ.
ಬಾಲಕಿ ಆರೋಗ್ಯ ಸ್ಥಿತಿ ಗಂಭೀರ:
ಆಕೆಯ ಜೀವ ಉಳಿಸಲು ವೈದ್ಯರು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದಾರೆ. ಆದರೆ ಬಾಲಕಿಯ ಆರೋಗ್ಯ ಸ್ಥಿತಿಯು ತುಂಬಾ ಗಂಭೀರವಾಗಿದೆ. ಬಾಲಕಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ ಮತ್ತು ಆಕೆ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಾರೆ ಎಂದು ಭಾವಿಸುತ್ತೇವೆ ಎಂದು ಸಿಎಂ ಕೇಜ್ರಿವಾಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿ ಕುಟುಂಬಕ್ಕೆ ಸರ್ಕಾರದ ವತಿಯಿಂದ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಇದಕ್ಕೂ ಮುನ್ನದಿನ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ಅವರು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ಆಸ್ಪತ್ರೆಗೆ ಭೇಟಿ ನೀಡಿದ್ದರು. ಬಾಲಕಿಯ ಸ್ಥಿತಿ ಗಂಭೀರವಾಗಿದೆ ಮತ್ತು ಆಕೆ ಬದುಕುಳಿಯುತ್ತಾರೆಯೇ ಎಂದು ವೈದ್ಯರಿಗೆ ಖಚಿತವಾಗಿಲ್ಲ ಎಂದು ಹೇಳಿದರು. ಅಲ್ಲದೇ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿದರು.
ಕಳೆದ ಮಂಗಳವಾರ ಸಂಜೆ ಪಾಸ್ಚಿಮ್ ವಿಹಾರ್ ಮನೆಯಲ್ಲಿದ್ದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳು ನಂತರದಲ್ಲಿ ಆಕೆಯ ಮುಖ ಮತ್ತು ತಲೆಗೆ ತೀಕ್ಷ್ಣವಾದ ವಸ್ತುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.