ಚಿಕ್ಕಬಳ್ಳಾಪುರ ಸ್ಪೋಟ: ಯಾರು ಎಷ್ಟೇ ಪ್ರಭಾವ ಬೀರಿದರೂ ಆರೋಪಿಗಳ ರಕ್ಷಣೆ ಅಸಾಧ್ಯ!
ನವದೆಹಲಿ, ಫೆ. 23: ಚಿಕ್ಕಬಳ್ಳಾಪುರ ಜಿಲ್ಲೆ ಗುಂಡಿಬಂಡೆ ತಾಲ್ಲೂಕಿನ ಹಿರೆನಾಗವಲ್ಲಿಯಲ್ಲಿ ಜೆಲಿಟಿನ್ ಕಡ್ಡಿ ಸೋಟಿಸಿ ಆರು ಮಂದಿ ಸಾವನ್ನಪ್ಪಿರುವ ಘಟನೆಗೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಆಘಾತ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಮೃತರ ಕುಟುಂಬ ಸದಸ್ಯರಿಗೆ ಮತ್ತು ಗಾಯಾಳುಗಳಿಗೆ ಎಲ್ಲಾ ನೆರವು ನೀಡುವ ಭರವಸೆ ನೀಡಿದ್ದಾರೆ.
ಶಿವಮೊಗ್ಗ ಸ್ಪೋಟದ ನಂತರ ಮತ್ತೊಂದು ದುರಂತ ನಡೆದಿರುವುದು ತನಗೆ ತೀವ್ರ ನೋವಾಗಿದೆ. ಜಿಲಿಟಿನ್ ಕಡ್ಡಿ ಸ್ಪೋಟದಲ್ಲಿ ಆರು ಜನರು ಪ್ರಾಣ ಕಳೆದುಕೊಂಡಿರುವುದು ತುಂಬಾ ನೋವು ತಂದಿದೆ ಎಂದಿದ್ದಾರೆ. ಇದು ಅತ್ಯಂತ ದುರದೃಷ್ಟಕರ ಘಟನೆ. ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಾಳುಗಳ ಶೀಘ್ರ ಚೇತರಿಕೆಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ. ಸಂತ್ರಸ್ತರ ಕುಟುಂಬಗಳಿಗೆ ಮತ್ತು ಗಾಯಗೊಂಡ ವ್ಯಕ್ತಿಗೆ ಸರ್ಕಾರ ಎಲ್ಲಾ ಸಹಾಯವನ್ನು ನೀಡಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಅಭಯ ನೀಡಿದ್ದಾರೆ.
ಘಟನೆಗೆ ಕಾರಣರಾದ ಆರೋಪಿಗಳ ವಿರುದ್ಧ ಕಠಿಣ ಕಾನೂನು ತೆಗೆದುಕೊಳ್ಳಲಾಗುವುದು. ಸರ್ಕಾರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಶಿವಮೊಗ್ಗ ಸೋಟಕ್ಕೆ ಮೊದಲೇ ಸ್ಪೋಟಕಗಳನ್ನು ಸಂಗ್ರಹಿಸಿಡಲಾಗಿತ್ತೇ? ಎಂಬ ಬಗ್ಗೆ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಯಾರು ಎಷ್ಟೇ ಪ್ರಭಾವ ಬೀರಿದರೂ ಆರೋಪಿಗಳನ್ನು ರಕ್ಷಣೆ ಮಾಡಲು ಬಿಡುವುದಿಲ್ಲ ಎಂದು ಸಚಿವ ನಿರಾಣಿ ಎಚ್ಚರಿಕೆ ನೀಡಿದರು.
ಸರ್ಕಾರದ ಕೆಲಸಗಳಿಂದಾಗಿ ನಾನು ದೆಹಲಿಯಲ್ಲಿದ್ದೇನೆ ಇಂದು ಸಂಜೆ ಬೆಂಗಳೂರಿಗೆ ಬಂದಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡುತ್ತೇನೆ. ಸಚಿವರಾದ ಬಸವರಾಜ್ ಬೊಮ್ಮಾಯಿ, ಡಾ. ಸುಧಾಕರ್, ಡಿಸಿ, ಎಸ್ಪಿ ಮತ್ತು ನಮ್ಮ ಇಲಾಖೆ ಅಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.