ನಿರ್ಭಯ ಪ್ರಕರಣ; ಕ್ಷಮಾದಾನ ಅರ್ಜಿ ಸಲ್ಲಿಸಿದ ಅಕ್ಷಯ್
ನವದೆಹಲಿ, ಫೆಬ್ರವರಿ 01 : ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮತ್ತೊಬ್ಬ ಅಪರಾಧಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ. ರಾಷ್ಟ್ರಪತಿಗಳು ಈಗಾಗಲೇ ಇಬ್ಬರ ಅರ್ಜಿಗಳನ್ನು ತಿರಸ್ಕರಿದ್ದಾರೆ.
31 ವರ್ಷದ ಅಕ್ಷಯ್ ಕುಮಾರ್ ಸಿಂಗ್ ರಾಷ್ಟ್ರಪತಿಗಳ ಮುಂದೆ ಶನಿವಾರ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದಾನೆ. ಅಪರಾಧಿಗಳಾದ ಮುಕೇಶ್ ಸಿಂಗ್ ಮತ್ತು ವಿನಯ್ ಕುಮಾರ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದರು.
ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಲಾಗಿದೆ. ಫೆಬ್ರವರಿ 1ರ ಬೆಳಗ್ಗೆ 6 ಗಂಟೆಗೆ ಗಲ್ಲು ಶಿಕ್ಷೆ ಜಾರಿಗೊಳಿಸಲು ಡೆತ್ ವಾರೆಂಟ್ ಜಾರಿಯಾಗಿತ್ತು. ಆದರೆ, ಶುಕ್ರವಾರ ಕೋರ್ಟ್ ಗಲ್ಲು ಶಿಕ್ಷೆ ಜಾರಿಗೆ ತಡೆ ನೀಡಿತ್ತು.

ಎಲ್ಲಾ ಅಪರಾಧಿಗಳು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಜೈಲಿನಲ್ಲಿ ಗಲ್ಲು ಶಿಕ್ಷೆ ಜಾರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಈಗಾಗಲೇ ಎರಡು ಬಾರಿ ಗಲ್ಲು ಶಿಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಆದೇಶದ ತನಕ ಶಿಕ್ಷೆ ಜಾರಿಗೊಳಿಸಬಾರದು ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.
ಎಲ್ಲಾ ಅಪರಾಧಿಗಳಿಗೂ ರಾಷ್ಟ್ರಪತಿಗಳ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು. ಆದರೆ, ನಾಲ್ವರ ಪೈಕಿ ಈಗ ಮೂವರು ಮಾತ್ರ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು, ಮತ್ತೊಬ್ಬ ಅಪರಾಧಿ ಇನ್ನೂ ಅರ್ಜಿ ಸಲ್ಲಿಸಬೇಕಿದೆ.
ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮುಕೇಶ್ ಸಿಂಗ್, ಪವನ್ ಗುಪ್ತಾ, ವಿನಯ್ ಕುಮಾರ್ ಶರ್ಮಾ, ಅಕ್ಷಯ್ ಕುಮಾರ್ ಸಿಂಗ್ ಅಪರಾಧಿಗಳು. ಎಲ್ಲರಿಗೂ ಜನವರಿ 22ರಂದು ಗಲ್ಲು ಶಿಕ್ಷೆ ಜಾರಿಗೊಳಿಸಲು ಡೆತ್ ವಾರೆಂಟ್ ಜಾರಿಯಾಗಿತ್ತು. ಬಳಿಕ ಫೆ.1ಕ್ಕೆ ಅದನ್ನು ಮುಂದೂಡಲಾಗಿತ್ತು. ಈಗ ಪುನಃ ಮುಂದಕ್ಕೆ ಹೋಗಿದೆ.












Click it and Unblock the Notifications