ನಿರ್ಭಯ ಪ್ರಕರಣಕ್ಕೆ ಹೊಸ ತಿರುವು ಕೊಟ್ಟ ಅಪರಾಧಿ ಅರ್ಜಿ!
ನವದೆಹಲಿ, ಮಾರ್ಚ್ 17 : ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಮುಕೇಶ್ ಸಿಂಗ್ ದೆಹಲಿ ನ್ಯಾಯಾಲಯಕ್ಕೆ ಹೊಸ ಅರ್ಜಿ ಸಲ್ಲಿಸಿದ್ದಾನೆ. ಪ್ರಕರಣದ ನಡೆದ ದಿನ ನಾನು ದೆಹಲಿಯಲ್ಲಿಯೇ ಇರಲಿಲ್ಲ, ನನ್ನ ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸಿ ಎಂದು ಮನವಿ ಮಾಡಿದ್ದಾನೆ.
Recommended Video
ಮಂಗಳವಾರ 32 ವರ್ಷದ ಮುಕೇಶ್ ಸಿಂಗ್ ಪರ ವಕೀಲ ಎಂ. ಎಲ್. ಶರ್ಮಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ. ಮಾರ್ಚ್ 20ರಂದು ಮುಕೇಶ್ಗೆ ಗಲ್ಲು ಶಿಕ್ಷೆ ಜಾರಿಗೊಳಿಸಲು ಡೆತ್ ವಾರೆಂಟ್ ಜಾರಿಯಾಗಿದೆ.
ರಾಜಸ್ಥಾನದಲ್ಲಿ ಮುಕೇಶ್ ಸಿಂಗ್ ಬಂಧಿಸಿ 2012 ಡಿಸೆಂಬರ್ 17ರಂದು ದೆಹಲಿಗೆ ಕರೆದುಕೊಂಡು ಬರಲಾಗಿತ್ತು. ತಿಹಾರ್ ಜೈಲಿನಲ್ಲಿ ನನಗೆ ಚಿತ್ರಹಿಂಸೆ ನೀಡಲಾಗಿದೆ. ಘಟನೆ ನಡೆದ ದಿನ ನಾನು ದೆಹಲಿಯಲ್ಲಿಯೇ ಇರಲಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾನೆ.

ಸೋಮವಾರ ಮುಕೇಶ್ ಸಿಂಗ್ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿ ಹೊಸ ಕ್ಯುರೆಟೀವ್ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು. ನನ್ನಿಂದ ವಕೀಲರು ಬಲವಂತವಾಗಿ ಪತ್ರಗಳಿಗೆ ಸಹಿ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದ. ಸುಪ್ರೀಂಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು.
ಮಂಗಳವಾರ ಪ್ರಕರಣದ ಮತ್ತೊಬ್ಬ ಅಪರಾಧಿ ರಾಮ್ ಸಿಂಗ್ ಪರ ವಕೀಲ ಎ. ಪಿ. ಸಿಂಗ್ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಿದ್ದಾರೆ. ತಿಹಾರ್ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ರಾಮ್ ಸಿಂಗ್ ತಾಯಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಮುಕೇಶ್ ಸಿಂಗ್ (32), ಪವನ್ ಗುಪ್ತ (25), ವಿನಯ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31) ನಾಲ್ವರನ್ನು ಮಾರ್ಚ್ 20ರಂದು ಮುಂಜಾನೆ 5.30ಕ್ಕೆ ಗಲ್ಲಿಗೇರಿಸಲು ಡೆತ್ ವಾರೆಂಟ್ ಜಾರಿಯಾಗಿದೆ. ಗಲ್ಲು ತಪ್ಪಿಸಿಕೊಳ್ಳಲು ಅಪರಾಧಿಗಳು ಪ್ರಯತ್ನ ನಡೆಸುತ್ತಲೇ ಇದ್ದಾರೆ.












Click it and Unblock the Notifications