ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ; ಕೋರ್ಟ್ ಮಹತ್ವದ ಸೂಚನೆ
ನವದೆಹಲಿ, ಜನವರಿ 16 : ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸುವ ಕುರಿತು ಚರ್ಚೆ ನಡೆಯುತ್ತಿದೆ. ಜನವರಿ 22ರಂದು ಗಲ್ಲು ಶಿಕ್ಷೆ ಜಾರಿಗೊಳಿಸಲು ಸಾಧ್ಯವಿಲ್ಲ ಎಂಬ ವಾದವೂ ಕೇಳಿ ಬರುತ್ತಿದೆ.
ನಾಲ್ಕು ಅಪರಾಧಿಗಳಿಗೆ ಜನವರಿ 22ರಂದು ಬೆಳಗ್ಗೆ 7ಗಂಟೆಗೆ ಗಲ್ಲು ಶಿಕ್ಷೆ ಜಾರಿಗೊಳಿಸಬಹುದೇ?. ಈ ಬಗ್ಗೆ ವಿವರವಾದ ವರದಿಯನ್ನು ಜನವರಿ 17ರಂದು ಸಲ್ಲಿಸಿ ಎಂದು ತಿಹಾರ್ ಜೈಲಿನ ಅಧಿಕಾರಿಗಳಿಗೆ ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ.
ನಾಲ್ವರು ಅಪರಾಧಿಗಳ ಕ್ಷಮಾದಾನ ಅರ್ಜಿ ಬಾಕಿ ಇದೆ. ಕ್ಷಮಾದಾನ ಅರ್ಜಿ ತಿರಸ್ಕಾರವಾದ ಬಳಿಕ ಗಲ್ಲು ಶಿಕ್ಷೆ ಜಾರಿಗೂ 14 ಮೊದಲು ನೋಟಿಸ್ ನೀಡಬೇಕು. ಆದ್ದರಿಂದ, ಈಗಿರುವ ಡೆತ್ ವಾರೆಂಟ್ ಪ್ರಕಾರ ಜನವರಿ 22ರಂದು ಗಲ್ಲು ಶಿಕ್ಷೆ ವಿಧಿಸುವುದು ಸಾಧ್ಯವಿಲ್ಲ ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ.
ಹೊಸ ಡೆತ್ ವಾರೆಂಟ್ ಜಾರಿಗೊಳಿಸಬೇಕು ಎಂದು ದೆಹಲಿ ಸರ್ಕಾರ ಹೈಕೋರ್ಟ್ಗೆ ಮನವಿ ಮಾಡಿತ್ತು. ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ಜನವರಿ 17ರಂದು ವಿವರವಾದ ವರದಿಯನ್ನು ನೀಡಿ ಎಂದು ಜೈಲಿನ ಅಧಿಕಾರಿಗಳಿಗೆ ಸೂಚಿಸಿದೆ.

ಅಪರಾಧಿಗಳಿಗೆ ಗಲ್ಲು ಶಿಕ್ಷೆ
ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಾದ ಮುಕೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಕುಮಾರ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31) ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಎಲ್ಲಾ ಅಪರಾಧಿಗಳಿಗೆ ಜನವರಿ 22ರಂದು ಶಿಕ್ಷೆ ಜಾರಿಗೊಳಿಸಲು ಡೆತ್ ವಾರೆಂಟ್ ಜಾರಿಯಾಗಿದೆ.

ತೊಡಕಾಗಿರುವುದೇನು?
ನಾಲ್ವರು ಅಪರಾಧಿಗಳ ಪೈಕಿ ಮುಕೇಶ್ ಸಿಂಗ್ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ. ಈ ಅರ್ಜಿ ಇನ್ನೂ ಬಾಕಿ ಇದೆ. ಉಳಿದ ಮೂವರು ಅಪರಾಧಿಗಳು ಕ್ಷಮಾದಾನ ಅರ್ಜಿ ಸಲ್ಲಿಸಿಲ್ಲ. ಆದ್ದರಿಂದ, ಕಾನೂನು ತೊಡಕು ಉಂಟಾಗಿದೆ. ಗಲ್ಲು ಶಿಕ್ಷೆ ಜಾರಿಗೂ ಮೊದಲು ಎಲ್ಲರಿಗೂ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಲು ಅವಕಾಶವನ್ನು ನೀಡಬೇಕು.

ದೆಹಲಿ ಹೈಕೋರ್ಟ್ಗೆ ಹೇಳಿಕೆ
ಎಲ್ಲಾ ಅಪರಾಧಿಗಳು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಗುರುವಾರ ಜೈಲಿನ ಅಧಿಕಾರಿಗಳು ದೆಹಲಿ ಹೈಕೋರ್ಟ್ಗೆ ಕಾನೂನು ಸಮಸ್ಯೆ ಬಗ್ಗೆ ದೆಹಲಿ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎಂದು ಹೇಳಿದರು. ಆಗ ಕೋರ್ಟ್ ಜನವರಿ 17ರಂದು ವಿವರವಾದ ವರದಿ ಸಲ್ಲಿಸುವಂತೆ ಸೂಚನೆ ನೀಡಿತು.

ನಿರ್ಭಯ ತಾಯಿ ಆಕ್ರೋಶ
ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳ ಗಲ್ಲು ಶಿಕ್ಷೆ ವಿಳಂಬವಾಗುತ್ತಿರುವುದಕ್ಕೆ ನಿರ್ಭಯ ತಾಯಿ ದೆಹಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪರಾಧಿಗಳಿಗೆ ಶೀಘ್ರವೇ ಗಲ್ಲು ಶಿಕ್ಷೆ ಜಾರಿಗೊಳಿಸಬೇಕು ಎಂದು ಅವರು ಪಟಿಯಾಲಾ ಕೋರ್ಟ್ ಮೆಟ್ಟಿಲನ್ನು ಏರಿದ್ದರು.












Click it and Unblock the Notifications