ನಿರ್ಭಯ ಪ್ರಕರಣ; ಅಪರಾಧಿಯಿಂದ ಹೊಸ ಬೇಡಿಕೆ
ನವದೆಹಲಿ, ಮಾರ್ಚ್ 02 : ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಅಪರಾಧಿ ಪವನ್ ಗುಪ್ತ ಸುಪ್ರೀಂಕೋರ್ಟ್ ಮುಂದೆ ಹೊಸ ಬೇಡಿಕೆ ಮುಂದಿಟ್ಟಿದ್ದಾನೆ. ಮಾರ್ಚ್ 3ರಂದು ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ಡೆತ್ ವಾರೆಂಟ್ ಜಾರಿಯಾಗಿದೆ.
ಪವನ್ ಗುಪ್ತ ಸುಪ್ರೀಂಕೋರ್ಟ್ನಲ್ಲಿ ಕ್ಯುರೆಟೀವ್ ಅರ್ಜಿ ಸಲ್ಲಿಸಿದ್ದಾನೆ. ತನ್ನ ಅರ್ಜಿಯನ್ನು ತೆರೆದ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದಾನೆ. ಮಾರ್ಚ್ 3ರಂದು ಗಲ್ಲು ಶಿಕ್ಷೆ ಜಾರಿಗೆ ನೀಡಿರುವ ಡೆತ್ ವಾರೆಂಟ್ಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದಾನೆ.
ಕ್ಯುರೆಟೀವ್ ಅರ್ಜಿಯಲ್ಲಿ ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿಯಾಗಿ ಬದಲಾಯಿಸಬೇಕು ಎಂದು ಉಲ್ಲೇಖಿಸಿದ್ದಾನೆ. ಸೋಮವಾರ ಸುಪ್ರೀಂಕೋರ್ಟ್ನಲ್ಲಿ ಅರ್ಜಿಯ ವಿಚಾರಣೆ ನಡೆಯುವ ನಿರೀಕ್ಷೆ ಇದೆ. ಮಾರ್ಚ್ 3ರಂದು ಗಲ್ಲು ಶಿಕ್ಷೆ ಜಾರಿಯಾಗಲಿದೆಯೇ? ಎಂಬುದು ಸದ್ಯದ ಪ್ರಶ್ನೆ.

ನಿರ್ಭಯ ಪ್ರಕರಣದ ಇತರ ಇಬ್ಬರು ಅಪರಾಧಿಗಳಾದ ಮುಕೇಶ್ ಮತ್ತು ವಿನಯ್ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯ ಈ ಅರ್ಜಿಗಳನ್ನು ತಿರಸ್ಕರಿಸಿತ್ತು.
ಪ್ರಕರಣದ ಮತ್ತೊಬ್ಬ ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ರಾಷ್ಟ್ರಪತಿಗಳ ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಇನ್ನೂ ಸುಪ್ರೀಂನಲ್ಲಿ ಪ್ರಶ್ನೆ ಮಾಡಿಲ್ಲ. ರಾಷ್ಟ್ರಪತಿಗಳ ಮುಂದೆ 2ನೇ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ.
2012ರ ಡಿಸೆಂಬರ್ 16ರಂದು ಮುಕೇಶ್ ಕುಮಾರ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಕುಮಾರ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ (31) ನಿರ್ಭಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಎಲ್ಲರಿಗೂ ಗಲ್ಲು ಶಿಕ್ಷೆ ವಿಧಿಸಲಾಗಿದೆ.
ಜನವರಿ 22, ಫೆಬ್ರವರಿ 1ಕ್ಕೆ ಗಲ್ಲು ಶಿಕ್ಷೆ ವಿಧಿಸಲು ಎರಡು ಬಾರಿ ಡೆತ್ ವಾರೆಂಟ್ ಜಾರಿಗೊಳಿಸಿದರೂ ಶಿಕ್ಷೆ ಜಾರಿಯಾಗಿಲ್ಲ. ಮಾರ್ಚ್ 3ರಂದು ಗಲ್ಲು ಶಿಕ್ಷೆಗೆ ಮತ್ತೊಂದು ಡೆತ್ ವಾರೆಂಟ್ ಜಾರಿಗೊಳಿಸಲಾಗಿದೆ.












Click it and Unblock the Notifications