ನಿರ್ಭಯ ಪ್ರಕರಣ; ಪವನ್ ಕ್ಷಮಾದಾನ ಅರ್ಜಿ ವಜಾ
ನವದೆಹಲಿ, ಮಾರ್ಚ್ 04 : ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಪವನ್ ಕುಮಾರ್ ಗುಪ್ತ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ವಜಾಗೊಂಡಿದೆ. ಪ್ರಕರಣದ ಎಲ್ಲಾ ನಾಲ್ವರು ಅಪರಾಧಿಗಳು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
25 ವರ್ಷದ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೆಟೀವ್ ಅರ್ಜಿಯನ್ನು ಸೋಮವಾರ ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಬಳಿಕ ಆತ ರಾಷ್ಟ್ರಪತಿಗಳ ಮುಂದೆ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದ. ರಾಮನಾಥ್ ಕೋವಿಂದ್ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ನಿರ್ಭಯ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಪವನ್ ಕುಮಾರ್ ಗುಪ್ತಾ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ ಕಾರಣ ಅಪರಾಧಿಗಳ ಗಲ್ಲು ಶಿಕ್ಷೆ ವಿಳಂಬವಾಗಿತ್ತು. ಮಾರ್ಚ್ 3ರಂದು ಗಲ್ಲು ಜಾರಿಗೊಳಿಸಲು ಹೊರಡಿಸಿದ್ದ 3ನೇ ಡೆತ್ ವಾರೆಂಟ್ಗೂ ನ್ಯಾಯಾಲಯ ತಡೆ ನೀಡಿತ್ತು.
ನಿರ್ಭಯ ತಾಯಿ ಅರ್ಜಿ : ಮತ್ತೊಂದು ಕಡೆ ನಿರ್ಭಯ ತಾಯಿ ಪರ ವಕೀಲ ಸೀಮಾ ಕುಶ್ವಾ ಬುಧವಾರ ದೆಹಲಿ ನ್ಯಾಯಾಲಯದ ಮುಂದೆ ಮತ್ತೊಂದು ಅರ್ಜಿ ಹಾಕುವುದಾಗಿ ಹೇಳಿದ್ದಾರೆ. ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ಹೊಸ ಡೆತ್ ವಾರೆಂಟ್ ಜಾರಿಗೊಳಿಸಬೇಕು ಎಂದು ಮನವಿ ಸಲ್ಲಿಸಲಿದ್ದಾರೆ.
ಮುಕೇಶ್ ಕುಮಾರ್ ಸಿಂಗ್ (32), ಪವನ್ ಗುಪ್ತ (25), ವಿನಯ್ ಕುಮಾರ್ ಶರ್ಮಾ (26), ಅಕ್ಷಯ್ ಕುಮಾರ್ (31) ನಿರ್ಭಯ ಮೇಲೆ ಅತ್ಯಾಚಾರ ನಡೆಸಿದ್ದರು. ಎಲ್ಲಾ ಅಪರಾಧಿಗಳಿಗೂ ಗಲ್ಲು ಶಿಕ್ಷೆ ವಿಧಿಸಲಾಗಿದ್ದು, ಎಲ್ಲರೂ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.












Click it and Unblock the Notifications