ನಿರ್ಭಯಾ ಪ್ರಕರಣ; ಜನವರಿ 14ಕ್ಕೆ ಕ್ಯುರೇಟಿವ್ ಅರ್ಜಿ ವಿಚಾರಣೆ
ನವದೆಹಲಿ, ಜನವರಿ 12 : ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳು ಸಲ್ಲಿಸಿರುವ ಕ್ಯುರೇಟಿವ್ ಅರ್ಜಿಯ ವಿಚಾರಣೆ ಜನವರಿ 14ರಂದು ನಡೆಯಲಿದೆ. ಜನವರಿ 22ರಂದು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲು ನ್ಯಾಯಾಲಯ ಆದೇಶ ನೀಡಿದೆ.
ದೆಹಲಿಯ ತಿಹಾರ್ ಜೈಲಿನಲ್ಲಿರುವ ಅಪರಾಧಿಗಳಾದ ವಿನಯ್ ಕುಮಾರ್ ಶರ್ಮಾ, ಮುಕೇಶ್ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಿದ್ದಾರೆ. ಜನವರಿ 14ರಂದು ಸುಪ್ರೀಂಕೋರ್ಟ್ ಈ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ.
ನ್ಯಾಯಮೂರ್ತಿ ಎನ್. ವಿ. ರಮಣ ನೇತೃತ್ವದ ನಾಲ್ವರು ನ್ಯಾಯಮೂರ್ತಿಗಳ ಪೀಠದಲ್ಲಿ ಕ್ಯುರೇಟಿವ್ ಅರ್ಜಿ ವಿಚಾರಣೆ ನಡೆಯಲಿದೆ. ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕ್ಯುರೇಟಿವ್ ಅರ್ಜಿ ಅಪರಾಧಿಗಳಿಗೆ ಇರುವ ಅಂತಿಮ ಆಯ್ಕೆಯಾಗಿದೆ.

ಗಲ್ಲು ಶಿಕ್ಷೆಗೆ ತಡೆ ನೀಡುವಂತೆ ಸಲ್ಲಿಸಿರುವ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಲು ಸಹ ಅವಕಾಶವಿದೆ. ಅರ್ಜಿ ವಜಾಗೊಂಡರೆ ಅಪರಾಧಿಗಳು ಕ್ಷಮಾದಾನ ನೀಡುವಂತೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಬಹುದಾಗಿದೆ.
ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮುಕೇಶ್ (32), ಪವನ್ ಗುಪ್ತಾ (25), ವಿನಯ್ ಕುಮಾರ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31) ಅಪರಾಧಿಗಳು. ವಿನಯ್ ಕುಮಾರ್ ಶರ್ಮಾ ಮತ್ತು ಮುಕೇಶ್ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದು, ಉಳಿ ಇಬ್ಬರು ಇನ್ನೂ ಅರ್ಜಿ ಹಾಕಿಲ್ಲ.
ಪಟಿಯಾಲ ಹೌಸ್ ಕೋರ್ಟ್ ಎಲ್ಲಾ ನಾಲ್ವರು ಅಪರಾಧಿಗಳನ್ನು ಜನವರಿ 22ರ ಬೆಳಗ್ಗೆ 7ಗಂಟೆಗೆ ಗಲ್ಲಿಗೇರಿಸುವಂತೆ ಆದೇಶ ನೀಡಿದೆ. ಈಗಾಗಲೇ ತಿಹಾರ್ ಜೈಲಿನಲ್ಲಿ ಗಲ್ಲು ಶಿಕ್ಷೆ ಜಾರಿಗೊಳಿಸಲು ಸಿದ್ಧತೆಗಳು ನಡೆಯುತ್ತಿವೆ.












Click it and Unblock the Notifications