ನಿರ್ಭಯ ಪ್ರಕರಣ; ಮತ್ತೆ ಸುಪ್ರೀಂ ಮೆಟ್ಟಿಲೇರಿದ ಕೇಂದ್ರ ಸರ್ಕಾರ
ನವದೆಹಲಿ, ಫೆಬ್ರವರಿ 06 : ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಅಪರಾಧಿಗಳನ್ನು ಪ್ರತ್ಯೇಕವಾಗಿ ನೇಣು ಹಾಕಬಾರದು ಎಂಬ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಲಾಗಿದೆ.
ನಾಲ್ವರು ಅಪರಾಧಿಗಳಾದ ಮುಕೇಶ್ ಸಿಂಗ್, ಪವನ್ ಗುಪ್ತಾ, ವಿನಯ್ ಕುಮಾರ್ ಶರ್ಮಾ ಮತ್ತು ಅಕ್ಷಯ್ ಕುಮಾರ್ ಸಿಂಗ್ರನ್ನು ಒಟ್ಟಿಗೆ ನೇಣು ಹಾಕಬೇಕು ಎಂದು ದೆಹಲಿ ಹೈಕೋರ್ಟ್ ಆದೇಶ ನೀಡಿತ್ತು. ಪ್ರತ್ಯೇಕವಾಗಿ ನೇಣು ಹಾಕಲು ಅವಕಾಶ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿತ್ತು.

ಹಲವು ಕಾನೂನು ಪ್ರಕ್ರಿಯೆಗಳಿಂದಾಗಿ ಅಪರಾಧಿಗಳ ಗಲ್ಲು ಶಿಕ್ಷೆ ವಿಳಂಬವಾಗುತ್ತಿದೆ. ಆದ್ದರಿಂದ, ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿದೆ. ನಾಲ್ವರು ಅಪರಾಧಿಗಳ ಪೈಕಿ ಮೂವರ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ಈಗಾಗಲೇ ತಿರಸ್ಕರಿಸಿದ್ದಾರೆ.
ನಾಲ್ವರು ಅಪರಾಧಿಗಳು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಫೆಬ್ರವರಿ 1ರಂದು ಎಲ್ಲರನ್ನೂ ಗಲ್ಲಿಗೇರಿಸಲು ಡೆತ್ ವಾರೆಂಟ್ ಜಾರಿಗೊಳಿಸಲಾಗಿತ್ತು. ಬಳಿಕ ನ್ಯಾಯಾಲಯ ಇದಕ್ಕೆ ತಡೆಯಾಜ್ಞೆ ನೀಡಿತ್ತು. ಈಗ ಪುನಃ ಗಲ್ಲು ಶಿಕ್ಷೆ ಜಾರಿಗೊಳಿಸಲು ಒಂದು ವಾರದ ಕಾಲಾವಕಾಶ ನೀಡಲಾಗಿದೆ.
ಕೇಂದ್ರ ಮತ್ತು ದೆಹಲಿ ಸರ್ಕಾರ ಮುಂದಿನ ಆದೇಶದ ತನಕ ಅಪರಾಧಿಗಳನ್ನು ಗಲ್ಲಿಗೇರಿಸಬಾರದು ಎಂದು ನೀಡಿರುವ ಆದೇಶವನ್ನು ಸಹ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿವೆ. ಜನವರಿ 31ರಂದು ನ್ಯಾಯಾಲಯ ಗಲ್ಲು ಶಿಕ್ಷೆಗೆ ಮುಂದಿನ ಆದೇಶ ತನಕ ತಡೆ ನೀಡಿತ್ತು.
ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಾದ ಮುಕೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಕುಮಾರ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್ (31) ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಗಲ್ಲು ಶಿಕ್ಷೆ ಜಾರಿಗೊಳಿಸಲು ಸಕಲ ಸಿದ್ಧತೆ ನಡೆದಿದೆ.












Click it and Unblock the Notifications