ನಿರ್ಭಯಾ ಪ್ರಕರಣ; ಸುಪ್ರೀಂ ಮೊರೆ ಹೋದ ಅಪರಾಧಿ
ನವದೆಹಲಿ, ಜನವರಿ 09 : ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾನೆ. ಗಲ್ಲು ಶಿಕ್ಷೆಗೆ ತಡೆ ನೀಡುವಂತೆ ಅರ್ಜಿಯಲ್ಲಿ ಮನವಿ ಸಲ್ಲಿಸಿದ್ದಾನೆ. ಅಪರಾಧಿಗಳ ವಿರುದ್ಧ ಈಗಾಗಲೇ ಡೆತ್ ವಾರೆಂಟ್ ಜಾರಿಯಾಗಿದೆ.
ಗುರುವಾರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿನಯ್ ಕುಮಾರ್ ಶರ್ಮಾ ಸುಪ್ರೀಂಕೋರ್ಟ್ನಲ್ಲಿ ಕ್ಯುರೇಟಿವ್ ಅರ್ಜಿ ಹಾಕಿದ್ದಾನೆ. ಪುನರ್ ಪರಿಶೀಲನಾ ಅರ್ಜಿ ವಜಾಗೊಂಡ ಬಳಿಕ ಕ್ಯುರೇಟಿವ್ ಅರ್ಜಿಯನ್ನು ಅಪರಾಧಿ ಸಲ್ಲಿಸಿದ್ದಾನೆ.
ಜನವರಿ 22ರಂದು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಎಂದು ಪಟಿಯಾಲಾ ಹೌಸ್ ನ್ಯಾಯಾಲಯ ಈಗಾಗಲೇ ಆದೇಶ ನೀಡಿದೆ. ಪ್ರಕರಣದ ಎಲ್ಲಾ ನಾಲ್ವರು ಆರೋಪಿಗಳು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಒಬ್ಬ ಆರೋಪಿ ಕ್ಯುರೇಟಿವ್ ಅರ್ಜಿ ಹಾಕಿದ್ದಾನೆ.

ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕ್ಯುರೇಟಿವ್ ಅರ್ಜಿ ಅಪರಾಧಿಗಳಿಗೆ ಇರುವ ಅಂತಿಮ ಆಯ್ಕೆಯಾಗಿದೆ. ಒಂದು ವೇಳೆ ಸುಪ್ರೀಂಕೋರ್ಟ್ ಅರ್ಜಿಯನ್ನು ತಿರಸ್ಕಾರ ಮಾಡಿದರೆ ರಾಷ್ಟ್ರಪತಿಗಳ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಬಹುದಾಗಿದೆ.
ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಾದ ಮುಕೇಶ್ (32), ಪವನ್ ಗುಪ್ತಾ (25), ವಿನಯ್ ಕುಮಾರ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31)ಗೆ ದೆಹಲಿ ಹೈಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ. ಈ ಆದೇಶ ಪ್ರಶ್ನಿಸಿ ಅಪರಾಧಿಗಳು ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.
ಅಪರಾಧಿಗಳಿಗೆ ಬೇಗ ಗಲ್ಲು ಶಿಕ್ಷೆ ಜಾರಿಗೊಳಿಸಬೇಕು ಎಂದು ನಿರ್ಭಯಾ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಪಟಿಯಾಲಾ ಹೌಸ್ ನ್ಯಾಯಾಲಯ ಡೆತ್ ವಾರೆಂಟ್ ಜಾರಿಗೆ ಸೂಚನೆ ನೀಡಿತ್ತು. ಜನವರಿ 22ರ ಬೆಳಗ್ಗೆ 7ಗಂಟೆಗೆ ಗಲ್ಲು ಶಿಕ್ಷೆ ಜಾರಿಗೊಳಿಸಬೇಕು ಎಂದು ಆದೇಶ ನೀಡಿತ್ತು.
ಈಗ ಅಪರಾಧಿ ವಿನಯ್ ಕುಮಾರ್ ಶರ್ಮಾ ಗಲ್ಲು ಶಿಕ್ಷೆಗೆ ತಡೆ ನೀಡುವಂತೆ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಿದ್ದಾನೆ. ಸುಪ್ರೀಂಕೋರ್ಟ್ ಅರ್ಜಿಯ ವಿಚಾರಣೆಯನ್ನು ಎಂದು ನಡೆಸಲಿದೆ ಎಂಬುದು ಇನ್ನೂ ಅಂತಿಮವಾಗಿಲ್ಲ.












Click it and Unblock the Notifications