ಪೌರತ್ವ ಕಾಯ್ದೆ ವಿರೋಧಿ ಹೋರಾಟದ ಬಗ್ಗೆ 'ನಮೋ' ಮಾತು
ದೆಹಲಿ, ಡಿಸೆಂಬರ್.16: ದೇಶದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಎಲ್ಲರಲ್ಲೂ ಮನವಿ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ಅಭಿಪ್ರಾಯ, ಭಿನ್ನಾಭಿಪ್ರಾಯಗಳೆಲ್ಲ ಸರ್ವೇ ಸಾಮಾನ್ಯ. ಆದರೆ, ಅದು ದೇಶದ ಆಸ್ತಿ-ಪಾಸ್ತಿಗೆ ನಷ್ಟ ಉಂಟು ಮಾಡುವಂತೆ ಆಗಬಾರದು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸರ್ಕಾರದ ಜಾರಿಗೊಳಿಸಿರುವ ಪೌರತ್ವ ಕಾಯ್ದೆ ಬಗ್ಗೆಯೂ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ದೇಶದಲ್ಲಿನ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನೂತನ ಕಾಯ್ದೆಯನ್ನು ಒಪ್ಪಿಕೊಳ್ಳುತ್ತಿಲ್ಲ. ಇದರಿಂದ ಜನರಲ್ಲಿ ಪ್ರಚೋದನೆಯನ್ನು ಹುಟ್ಟು ಹಾಕುತ್ತಿದೆ. ಶಾಂತಿಯನ್ನು ಕದಡುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಪ್ರಧಾನಿ ಆರೋಪಿಸಿದ್ದಾರೆ.
ಪೌರತ್ವದ 'ಪಂಜಿ'ಗೆ ಹೊತ್ತಿ ಉರಿದಿದ್ದು ಈಶಾನ್ಯವಷ್ಟೇ ಅಲ್ಲ
ಭಾರತೀಯ ಸಂಸತ್ ನ ಉಭಯ ಸದನಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ಒಪ್ಪಿಗೆ ಸಿಕ್ಕಿದೆ. ಎಲ್ಲ ಪಕ್ಷದ ಸಂಸದರು ಹೆಚ್ಚಿನ ಸಂಖ್ಯೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ಸೂಚಿಸಿದ್ದಾರೆ. ದೇಶದ ಹಳೆಯ ಕಟ್ಟುಪಾಡುಗಳನ್ನು ತೊಡೆದು ಹಾಕಿ ಎಲ್ಲರಲ್ಲೂ ಸಹಾನುಭೂತಿ ಹಾಗೂ ಸಹೋದರತ್ವವನ್ನು ಹುಟ್ಟುಹಾಕುವ ನಿಟ್ಟಿನಲ್ಲಿ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.
ಹಿಂಸಾತ್ಮಕ ಪ್ರತಿಭಟನೆಗೆ ನಮೋ ಅಸಮಾಧಾನ
ಕೇಂದ್ರ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸುತ್ತಿದ್ದಂತೆ ದೇಶದಲ್ಲಿ ಸೃಷ್ಟಿಯಾಗಿರುವ ಹಿಂಸಾತ್ಮಕ ಪ್ರತಿಭಟನೆ ನಿಜಕ್ಕೂ ಆಕಸ್ಮಿಕವಾಗಿದೆ ಎಂದು ಪ್ರಧಾನಿ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ. ಚರ್ಚೆ, ಅಭಿಪ್ರಾಯ ಹಾಗೂ ಭಿನ್ನಾಭಿಪ್ರಾಯಗಳು ಪ್ರಜಾಪ್ರಭುತ್ವ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿವೆ. ಆದರೆ, ಹೋರಾಟ ಎಂಬುದು ದೇಶದ ಆಸ್ತಿ-ಪಾಸ್ತಿಗೆ ಧಕ್ಕೆ ತರುವಂತೆ ಇರಬಾರದು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಮೂಲ ಭಾರತೀಯರಿಗೇಕೆ ಭಯ ಎಂದ ಪ್ರಧಾನಿ
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತೀಯರಿಗೆ ಯಾವುದೇ ರೀತಿ ತೊಂದರೆ ಆಗುವುದಿಲ್ಲ. ಈ ಬಗ್ಗೆ ಭಾರತದ ಮೂಲ ನಿವಾಸಿಗಳು ಯಾವುದೇ ರೀತಿಯಲ್ಲೂ ಆತಂಕಪಡುವ ಅಗತ್ಯವಿಲ್ಲ. ಭಾರತದ ಯಾವುದೇ ವ್ಯಕ್ತಿ ಹಾಗೂ ಧರ್ಮದ ಮೇಲೆ ಈ ಕಾಯ್ದೆ ಪ್ರಭಾವ ಬೀರುವುದಿಲ್ಲ ಎಂದು ಪ್ರಧಾನಿ ಅಭಯ ನೀಡಿದ್ದಾರೆ.
ವಲಸೆ ಬಂದವರಿಗಷ್ಟೇ ತಿದ್ದುಪಡಿ ಕಾಯ್ದೆ
ಪೌರತ್ವ ತಿದ್ದುಪಡಿ ಕಾಯ್ದೆ ಎಂಬುದು ಭಾರತೀಯರಿಗೆ ಸಂಬಂಧಿಸಿದ್ದಲ್ಲ. ಇದು ನೆರೆ ರಾಷ್ಟ್ರಗಳಲ್ಲಿ ತೀವ್ರ ಕಿರುಕುಳ ಅನುಭವಿಸಿ ಭಾರತಕ್ಕೆ ವಲಸ ಬಂದವರಿಗೆ ಮಾತ್ರ ಅನ್ವಯವಾಗುತ್ತದೆ. ನೆರವು ಅರಸಿ ಬಂದ ವಲಸಿಗರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಸುಳ್ಳು-ಸುದ್ದಿಗಳಿಗೆ ಕಿವಿಗೊಡದಂತೆ ನಮೋ ಮನವಿ
ದೇಶದಲ್ಲಿ ಒಗ್ಗಟ್ಟು ಪ್ರದರ್ಶಿಸುವ ಕಾಲ ಸನ್ನಿಹಿತವಾಗಿದೆ. ಸುಳ್ಳು-ಸುದ್ದಿಗಳಿಗೆ ಯಾರೂ ಕೂಡಾ ಕಿವಿಗೊಡಬಾರದು. ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವತ್ತ ಎಲ್ಲರೂ ಗಮನ ಹರಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.