ಎಎಪಿ ಶಾಸಕರ ಅನರ್ಹತೆ ರದ್ದುಗೊಳಿಸಲು ದೆಹಲಿ ಹೈಕೋರ್ಟ್ ನಕಾರ
ನವದೆಹಲಿ, ಜನವರಿ 24: 20 ಎಎಪಿ ಶಾಸಕರನ್ನು ಅನರ್ಹತೆಗೊಳಿಸಿ ಕೇಂದ್ರ ಸರಕಾರ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಆದರೆ ಈ ಬಗ್ಗೆ ಜನವರಿ 29ರವರೆಗೆ ಮುಂದಿನ ತೀರ್ಮಾನಗಳನ್ನು ಅಂದರೆ ಚುನಾವಣೆ ಅಧಿಸೂಚನೆ ಹೊರಡಿಸುವಂತ ಕ್ರಮಗಳನ್ನು ತೆಗೆದುಕೊಳ್ಳದಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ತಮ್ಮ ಅನರ್ಹತೆ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದ ಎಎಪಿ ಶಾಸಕರ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಭು ಬಖ್ರು, ಚುನಾವಣಾ ಆಯೋಗ, ಕೇಂದ್ರ ಸರಕಾರ ಮತ್ತು ಅನರ್ಹತೆ ಪ್ರಶ್ನಿಸಿ ಮನವಿ ಸಲ್ಲಿಸಿರುವ ಎಎಪಿ ಶಾಸಕರಿಗೆ ಪ್ರತಿಕ್ರಿಯೆ ನೀಡುವಂತೆ ಇದೇ ಸಂದರ್ಭದಲ್ಲಿ ಸೂಚಿಸಿದ್ದಾರೆ.
ರಾಷ್ಟ್ರಪತಿ ನಿರ್ಧಾರದ ವಿರುದ್ಧ ದೆಹಲಿ ಹೈಕೋರ್ಟ್ ಮೊರೆ ಹೋದ ಎಎಪಿ
20 ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಮಾಡಿರುವ ಶಿಫಾರಸ್ಸಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆಯೂ ಇದೇ ಸಂದರ್ಭದಲ್ಲಿ ಹೈಕೋರ್ಟ್ ಹೇಳಿದೆ.
ಸಂಸದೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡಿದ್ದ 20 ಎಎಪಿ ಶಾಸಕರನ್ನು ಲಾಭದಾಯಕ ಹುದ್ದೆ ಹೊಂದಿದ ಅಪರಾಧದ ಮೇಲೆ ಅನರ್ಹಗೊಳಿಸಲು ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸಿಗೆ ಜನವರಿ 20ರಂದು ರಾಷ್ಟ್ರಪತಿಗಳು ಸಹಿ ಹಾಕುವುದರೊಂದಿಗೆ ಶಾಸಕರು ಅನರ್ಹಗೊಂಡಿದ್ದರು.