ಕೊರೊನಾ ಲಸಿಕೆ ಇಲ್ಲ, ಹಾಸಿಗೆ ಇಲ್ಲ, ಉತ್ಸವ ನೆಪವಷ್ಟೇ; ರಾಹುಲ್ ಗಾಂಧಿ
ನವದೆಹಲಿ, ಏಪ್ರಿಲ್ 15: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಏರಿಕೆ ನಡುವೆ ರೋಗಿಗಳ ಚಿಕಿತ್ಸೆಗೆ ಹಾಸಿಗೆ, ವೆಂಟಿಲೇಟರ್ ಮತ್ತು ಅಗತ್ಯ ವೈದ್ಯಕೀಯ ಸೌಲಭ್ಯಗಳ ಕೊರತೆ ಬಗ್ಗೆ ಉಲ್ಲೇಖಿಸಿದ ಸಂಸದ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
"ಕೊರೊನಾವೈರಸ್ ಸೋಂಕಿಗೆ ಯಾವುದೇ ತಪಾಸಣೆಯಿಲ್ಲ, ಆಸ್ಪತ್ರೆಗಳಲ್ಲಿ ಹಾಸಿಗೆಗಳ ವ್ಯವಸ್ಥೆಯಿಲ್ಲ, ವೆಂಟಿಲೇಟರ್ ಸಿಗುತ್ತಿಲ್ಲ, ಆಕ್ಸಿಜನ್ ವ್ಯವಸ್ಥೆಯೂ ಸರಿಯಾಗಿಲ್ಲ. ಲಸಿಕೆಯೂ ಸರಿಯಾಗಿ ಸಿಗುತ್ತಿಲ್ಲ. ಕೇವಲ ಉತ್ಸವದ ಹೆಸರಿನಲ್ಲಿ ಹಬ್ಬವನ್ನು ಆಚರಿಸಲಾಗುತ್ತಿದೆ" ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಭಾರತದಲ್ಲಿ ರಾಜಕೀಯ ನಾಯಕರ ಬೆನ್ನೇರಿದ ಕೊರೊನಾವೈರಸ್
ಭಾರತದಲ್ಲಿ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಹೊಸ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ಹೊಸ ದಾಖಲೆ ಬರೆದ ಕೊರೊನಾವೈರಸ್:
ದೇಶದಲ್ಲಿ ಒಂದೇ ದಿನ 2,00,739 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 1038 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 93,528 ಸೋಂಕಿತರು ಗುಣಮುಖರಾಗಿದ್ದಾರೆ. ಗುರುವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,40,74,564ಕ್ಕೆ ಏರಿಕೆಯಾಗಿದೆ. ಇದುವರೆಗೂ 1,73,123 ಜನರು ಕೊವಿಡ್-19 ಸೋಂಕಿಗೆ ಬಲಿಯಾಗಿದ್ದರೆ, 1,24,29,564 ಸೋಂಕಿತರು ಗುಣಮುಖರಾಗಿದ್ದಾರೆ. 14,71,877 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.