ಈಶಾನ್ಯ ರಾಜ್ಯಗಳಲ್ಲಿ ಕ್ಯಾಬ್ 'ಜ್ವಾಲೆ': ನಾಳೆ ರಾಜ್ಯಸಭೆಯಲ್ಲಿ ಮಂಡನೆ
ದೆಹಲಿ, ಡಿಸೆಂಬರ್.10: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಪೌರತ್ವ ತಿದ್ದುಪಡಿ ಮಸೂದೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈಶಾನ್ಯ ರಾಜ್ಯಗಳಲ್ಲಿ ಬೆಳಗ್ಗೆಯಿಂದಲೇ ಬಂದ್ ಗೆ ಕರೆ ನೀಡಲಾಗಿದ್ದು, ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಲೋಕಸಭೆಯಲ್ಲಿ ವಿರೋಧದ ನಡುವೆಯೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪೌರತ್ವ ತಿದ್ದುಪಡಿ ಮಸೂದೆಯನ್ನು ಡಿಸೆಂಬರ್.09ರಂದು ಮಂಡನೆ ಮಾಡಿದ್ದಾರೆ. 391 ಸದಸ್ಯರ ಪೈಕಿ 311 ಸದಸ್ಯರು ಪರವಾಗಿ 80 ಸದಸ್ಯರು ವಿರೋಧವಾಗಿ ಮತ ಚಲಾಯಿಸಿದ್ದರು. ಇದರಿಂದ ಸೋಮವಾರ ಪೌರತ್ವ ತಿದ್ದುಪಡಿ ಮಸೂದೆ ಪಾಸ್ ಆಗಿದೆ.
ಮಹತ್ವದ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಪಾಸ್
ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿಗೆ ಲೋಕಸಭೆಯಲ್ಲಿ ಒಪ್ಪಿಗೆ ಪಡೆಯುತ್ತಿದ್ದಂತೆ ಈಶಾನ್ಯ ರಾಜ್ಯಗಳು ಹೊತ್ತಿ ಉರಿದಿವೆ. ನೆರೆ ರಾಷ್ಟ್ರಗಳಿಂದ ವಲಸೆ ಬಂದಿರುವ ಮುಸ್ಲಿಮೇತರಿಗೆ ಭಾರತದ ಪೌರತ್ವವನ್ನು ನೀಡುವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
6 ರಾಜ್ಯಗಳಲ್ಲಿ ತೀವ್ರ ಸ್ವರೂಪದ ಹೋರಾಟ
ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ತ್ರಿಪುರಾದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಸಾರ್ವಜನಿಕರು, ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗುತ್ತಾ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗ್ಗೆ 5 ಗಂಟೆಯಿಂದಲೇ ಬಂದ್ ಬಂದ್
ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಗೆ ತಂದಿರುವ ತಿದ್ದುಪಡಿ ವಿರುದ್ಧ ತ್ರಿಪುರದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯಾದ್ಯಂತ 11 ಗಂಟೆಗಳ ಕಾಲ ಬಂದ್ ಗೆ ಕರೆ ನೀಡಲಾಗಿತ್ತು. ಬೆಳಗ್ಗೆ 5 ಗಂಟೆಯಿಂದಲೇ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿತ್ತು. ಸರ್ಕಾರವೇ 48 ಗಂಟೆಗಳ ಕಾಲ ಎಸ್ಎಂಎಸ್ ಹಾಗೂ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿತ್ತು.
ಭಾರತದ ಮುಸ್ಲಿಮರು ಭಯಪಡಬೇಕಿಲ್ಲ: ಅಮಿತ್ ಶಾ ಭರವಸೆ
ನಿಮ್ಮ ದೇಶಕ್ಕೆ ವಾಪಸ್ ಹೋಗಿ ಎಂದು ಘೋಷಣೆ
ತ್ರಿಪುರಾದಲ್ಲೂ ಪೌರತ್ವ ತಿದ್ದುಪಡಿ ಮಸೂದೆ (CAB) ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಬಾಂಗ್ಲಾದೇಶಿಗರೇ ನಿಮ್ಮ ದೇಶಕ್ಕೆ ವಾಪಸ್ ಹೋಗಿ ಎಂದು ಘೋಷಣೆ ಕೂಗಿದರು.
ಭಾರತದ ಈ ರಾಜ್ಯಗಳಿಗೆ ಭಾರತೀಯರೇ ಹೋಗುವ ಹಾಗಿಲ್ಲ!
ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ
ಅಸ್ಸಾಂನಲ್ಲೂ ಕ್ಯಾಬ್ ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ದಿಬ್ರುಘರ್ ಬಳಿ ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದ ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಅಸ್ಸಾಂನ ಹಲವೆಡೆ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ, ತಿದ್ದುಪಡಿ ವಾಪಸ್ ಪಡೆಯುವಂತೆ ಆಗ್ರಹಿಸಿದರು.
ಕೇಂದ್ರ ಸರ್ಕಾರದಿಂದ ಆರು ರಾಜ್ಯಗಳಿಗೆ ವಿನಾಯಿತಿ
ಆಂತರಿಕ ಗಡಿ ರೇಖೆ ಹೊಂದಿರುವ ಈಶಾನ್ಯದ ಆರು ರಾಜ್ಯಗಳಿಗೆ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಕೇಂದ್ರ ಸರ್ಕಾರವೇ ವಿನಾಯಿತಿ ನೀಡಿದೆ. ಅರುಣಾಚಲ ಪ್ರದೇಶ, ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರಾ, ಅಸ್ಸಾಂ, ಮೇಘಾಲಯ ರಾಜ್ಯಗಳಿಗೆ ಈ ಕಾಯ್ದೆಯಲ್ಲಿ ವಿಶೇಷ ವಿನಾಯಿತಿ ನೀಡಲಾಗಿದೆ. ಆಂತರಿಕ ಗಡಿ ಕಾಯ್ದೆ ಅನ್ವಯ ಈ ರಾಜ್ಯಗಳಲ್ಲಿ ಪ್ರವೇಶಿಸಬೇಕಿದ್ದಲ್ಲಿ ಮುಸ್ಲಿಮೇತರ ವಲಸಿಗರಷ್ಟೇ ಅಲ್ಲ, ಭಾರತೀಯರೇ ಅಲ್ಲಿನ ರಾಜ್ಯ ಸರ್ಕಾರಗಳ ಅನುಮತಿಯನ್ನು ಪಡೆದುಕೊಳ್ಳಬೇಕಾಗುತ್ತದೆ.
ರಾಜ್ಯಸಭೆ ಎಲ್ಲ ಸದಸ್ಯರಿಗೂ ವಿಪ್ ಜಾರಿಗೊಳಿಸಿದ ಬಿಜೆಪಿ
ಡಿಸೆಂಬರ್.09ರಂದು ಲೋಕಸಭೆಯಲ್ಲಿ ಪಾಸ್ ಆಗಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಡಿಸೆಂಬರ್.11ರಂದು ರಾಜ್ಯಸಭೆಯಲ್ಲಿ ಮಂಡಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ತೀರ್ಮಾನಿಸಿದ್ದಾರೆ. ಇದಕ್ಕೆ ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಸಭೆಯ ಎಲ್ಲ ಬಿಜೆಪಿ ಸದಸ್ಯರಿಗೂ ಈಗಾಗಲೇ ವಿಪ್ ಜಾರಿಗೊಳಿಸಿದ್ದು, ಕಡ್ಡಾಯವಾಗಿ ಕಲಾಪಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.