'ಈಗ ಗುಜರಾತ್ ಬದಲಾಗಲಿದೆ': ಅರವಿಂದ್ ಕೇಜ್ರಿವಾಲ್ ಟ್ವೀಟ್
ನವದೆಹಲಿ, ಜೂನ್ 14: ಅಹಮದಾಬಾದ್ ಭೇಟಿಗೂ ಮುನ್ನ 'ಈಗ ಗುಜರಾತ್ ಬದಲಾಗಲಿದೆ' ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. 2022ರ ಗುಜರಾತ್ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಅರವಿಂದ್ ಕೇಜ್ರಿವಾಲ್ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಫೆಬ್ರವರಿಯಲ್ಲಿ ನಡೆದ ಗುಜರಾತ್ನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಎಪಿ ಗಮನಾರ್ಹ ಸಾಧನೆ ಮಾಡಿತ್ತು, ಸೂರತ್ ಮುನ್ಸಿಪಲ್ ಕಾರ್ಪೊರೇಷನ್ಗೆ ನಡೆದ ಚುನಾವಣೆಯಲ್ಲಿ ಎಎಪಿ 27 ಸ್ಥಾನಗಳನ್ನು ಗಳಿಸಿತ್ತು.
ಭೇಟಿಯ ಸಂದರ್ಭದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ರಾಜ್ಯ ಕಚೇರಿಯಲ್ಲಿ ಅಹಮದಾಬಾದ್ನಲ್ಲಿ ಉದ್ಘಾಟಿಸಲಿದ್ದಾರೆ. ಈ ವಿಚಾರವಾಗಿ ಅವರು ಗುಜರಾತಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದು, 'ನಾನು ಗುಜರಾತ್ಗೆ ಬರಲಿದ್ದೇನೆ, ಎಲ್ಲ ಸಹೋದರ ಮತ್ತು ಸಹೋದರಿಯರನ್ನು ಭೇಟಿಯಾಗಲಿದ್ದೇನೆ, ಈಗ ಗುಜರಾತ್ ಬದಲಾಗಲಿದೆ' ಎಂದು ಹೇಳಿದ್ದಾರೆ.
ದೆಹಲಿ ಅನ್ಲಾಕ್ ಪ್ರಕ್ರಿಯೆ: ದೆಹಲಿ ಸರ್ಕಾರ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭಿಸಿದ್ದು, ಜೂನ್ 14ರಿಂದ ಪ್ರತಿದಿನ ಮಾಲ್, ಮಾರುಕಟ್ಟೆ, ಶೇ.50ರಷ್ಟು ಸಾಮರ್ಥ್ಯದೊಂದಿಗೆ ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಇದೇ ವೇಳೆ, ಶಾಲೆಗಳು, ಕಾಲೇಜುಗಳು, ಶೈಕ್ಷಣಿಕ ಮತ್ತು ತರಬೇತಿ ಸಂಸ್ಥೆಗಳು, ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಉತ್ಸವ ಕೂಟಗಳು, ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್ಗಳು, ಈಜುಕೊಳಗಳು, ಜಿಮ್ಗಳು ಮತ್ತು ಸಾರ್ವಜನಿಕ ಉದ್ಯಾನವನಗಳು ಸೇರಿದಂತೆ ಕೆಲವು ಚಟುವಟಿಕೆಗಳು ಮತ್ತು ಸೇವೆಗಳಿಗೆ ನಿರ್ಬಂಧ ಮುಂದುವರೆಸಲಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಧಾರ್ಮಿಕ ಕ್ಷೇತ್ರಗಳನ್ನು ತೆರೆಯಲಾಗುತ್ತದೆ ಆದರೆ ದರ್ಶನಕ್ಕೆ ಅವಕಾಶ ಇಲ್ಲ. ಬೆಸ-ಸಮ ಆಧಾರದಲ್ಲಿ ಮಾರುಕಟ್ಟೆಗಳು, ಮಾಲ್ಗಳು ಮತ್ತು ಮಾರುಕಟ್ಟೆ ಸಂಕೀರ್ಣಗಳು ಮತ್ತೆ ತೆರೆಯಲು ಅನುಮತಿಸಲಾಗಿದ್ದು ಪ್ರತಿದಿನ ಬೆಳಿಗ್ಗೆ 8 ರಿಂದ ರಾತ್ರಿ 10ರವರೆಗೆ ತೆರೆದಿರಲಿವೆ ಎಂದು ಕೇಜ್ರಿವಾಲ ಹೇಳಿದರು.